Bineeesh Kodiyeri, Karnataka HC
Bineeesh Kodiyeri, Karnataka HC 
ಸುದ್ದಿಗಳು

ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಿನೇಶ್‌ ವಿರುದ್ಧದ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್‌

Bar & Bench

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಿಪಿಎಂ ನಾಯಕ ಕೊಡಿಯೇರಿ ಬಾಲಕೃಷ್ಣನ್‌ ಅವರ ಪುತ್ರ ಬಿನೇಶ್‌ ಕೊಡಿಯೇರಿ ಅವರ ವಿರುದ್ಧದ ಜಾರಿ ನಿರ್ದೇಶನಾಲಯದ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬಿನೇಶ್‌ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್‌ ಚಂದನ್‌ಗೌಡರ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಈ ಆದೇಶ ಮಾಡಿದೆ.

ಅರ್ಜಿದಾರರ ಪರ ವಕೀಲರು “ಎನ್‌ಡಿಪಿಸಿ ಕಾಯಿದೆ ಅಡಿ ಬಿನೇಶ್‌ ಅವರು ವಿಧೇಯ ಅಪರಾಧದ (ವಿಸ್ತೃತದ ಅಪರಾಧದ ಭಾಗ) ಆರೋಪಿಯಲ್ಲ. ಈಚೆಗೆ ವಿಜಯ್‌ ಮದನ್‌ಲಾಲ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪಿನ ಅನ್ವಯ ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿ ಪ್ರಕರಣ ಮುಂದುವರಿಸಲಾಗದು” ಎಂದರು.

ಜಾರಿ ನಿರ್ದೇಶನಾಲಯ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನ ಕುಮಾರ್‌ ಅವರು “ಪಿಎಎಂಎಲ್‌ಯು ವಿಧೇಯ ಅಪರಾಧದಲ್ಲಿ ಆರೋಪಿಯಾಗಿರುವವರನ್ನು ಮಾತ್ರವಲ್ಲ. ಅದಕ್ಕೆ ಸಾಥ್‌ ನೀಡಿದವರನ್ನು ಶಿಕ್ಷೆಗೆ ಗುರಿಪಡಿಸುತ್ತದೆ” ಎಂದರು.

ವಾದ-ಪ್ರತಿವಾದ ಆಲಿಸಿದ ಪೀಠವು “ಆರೋಪ ನಿಗದಿ ಮಾಡುವ ಪ್ರಕ್ರಿಯೆ ವಿಚಾರಣಾಧೀನ ನ್ಯಾಯಾಲಯದಲ್ಲಿ ಆಗಸ್ಟ್‌ 18ರಂದು ನಿಗದಿಯಾಗಿದ್ದು, ಮುಂದಿನ ವಿಚಾರಣೆಯವರೆಗೆ ತಡೆ ನೀಡಲಾಗಿದೆ” ಎಂದು ಆದೇಶಿಸಿದೆ.

ಮಾದಕ ವಸ್ತುಗಳು ಮತ್ತು ಅಮಲು ಪದಾರ್ಥಗಳ (ಎನ್‌ಡಿಪಿಎಸ್) ಆರೋಪ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 2020ರ ಅಕ್ಟೋಬರ್‌ 29ರಂದು ಬಿನೇಶ್‌ ಅವರನ್ನು ಬಂಧಿಸಲಾಗಿತ್ತು. 2021ರ ಅಕ್ಟೋಬರ್‌ನಲ್ಲಿ ಹೈಕೋರ್ಟ್‌ ಬಿನೇಶ್‌ಗೆ ಜಾಮೀನು ಮಂಜೂರು ಮಾಡಿತ್ತು.