Chitradurga District Court Complex
Chitradurga District Court Complex 
ಸುದ್ದಿಗಳು

ಪೋಕ್ಸೊ ಪ್ರಕರಣ: ಸಿಆರ್‌ಪಿಸಿ ಸೆಕ್ಷನ್‌ 91ರ ಅಡಿ ವಿವಿಧ ದಾಖಲೆ ಕೋರಿದ್ದ ಅರ್ಜಿ ವಜಾಗೊಳಿಸಿದ ಚಿತ್ರದುರ್ಗ ನ್ಯಾಯಾಲಯ

Bar & Bench

ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಹಾಗೂ ಇತರೆ ನಾಲ್ವರು ಆರೋಪಿಗಳ ವಿರುದ್ಧ ಮೈಸೂರಿನ ನಜರಾಬಾದ್‌ ಠಾಣೆಯಲ್ಲಿ ದಾಖಲಾಗಿದ್ದ‌ ಪೋಕ್ಸೊ ಪ್ರಕರಣವನ್ನು ಚಿತ್ರದುರ್ಗದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ವರ್ಗಾಯಿಸುವುದರ ಜೊತೆ ನೀಡಿರುವ ಪ್ರಮುಖ ದಾಖಲೆಗಳು, ಆಯ್ದ ವ್ಯಕ್ತಿಗಳ ಕರೆ ವಿವರ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಚಿತ್ರದುರ್ಗದ ವಿಶೇಷ ನ್ಯಾಯಾಲಯವು ಗುರುವಾರ ವಜಾಗೊಳಿಸಿದೆ.

ಪ್ರಕರಣದಲ್ಲಿ ನಾಲ್ಕು ಮತ್ತು ಐದನೇ ಆರೋಪಿಗಳಾಗಿರುವ ಪರಮಶಿವಯ್ಯ ಮತ್ತು ವಕೀಲ ಗಂಗಾಧರ್‌ ಅವರ ಪರವಾಗಿ ಸಿಆರ್‌ಪಿಸಿ ಸೆಕ್ಷನ್‌ 91ರ ಅಡಿ ವಿವಿಧ ದಾಖಲೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಧೀಶರಾದ ಬಿ ಕೆ ಕೋಮಲಾ ಅವರು ಪ್ರಕಟಿಸಿದರು.

ಸಂತ್ರಸ್ತ ಮಕ್ಕಳ ಜೊತೆ ಸಮಾಲೋಚನೆ ನಡೆಸಿ ಮೈಸೂರಿನ ಮಕ್ಕಳ ಕಲ್ಯಾಣ ಸಮಿತಿಯು (ಸಿಡಬ್ಲ್ಯುಸಿ) ವರದಿ ಸಿದ್ಧಪಡಿಸಿ, ಅದನ್ನು ಮೈಸೂರು ಪೊಲೀಸರಿಗೆ ಸಲ್ಲಿಸಿದೆ. ಅದು ಚಿತ್ರದುರ್ಗ ಗ್ರಾಮೀಣ ಠಾಣೆಯ ಪೊಲೀಸರನ್ನು ತಲುಪಿದೆ. ಆದರೆ, ಇದನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿಲ್ಲ. ಹೀಗಾಗಿ, ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ಬೆಂಗಳೂರಿನ ಕಾಟನ್‌ ಪೇಟೆ ಪೊಲೀಸರ ಕರೆಯ ಹಿನ್ನೆಲೆಯಲ್ಲಿ ಮಠದ ಹಿಂದಿನ ಕಾರ್ಯದರ್ಶಿ ಎಸ್‌ ಕೆ ಬಸವರಾಜನ್‌ ಮತ್ತು ಅವರ ಪತ್ನಿ ಸೌಭಾಗ್ಯ ಅವರು ಬೆಂಗಳೂರಿಗೆ ಭೇಟಿ ನೀಡಿದ್ದರು ಎಂದು ಪ್ರಾಸಿಕ್ಯೂಷನ್‌ ಒಪ್ಪಿದೆ. ಹೀಗಾಗಿ, ಕಾಟನ್‌ಪೇಟೆಯ ಪೊಲೀಸರು ಯಾವ ದೂರವಾಣಿ ಸಂಖ್ಯೆಯಿಂದ ಬಸವರಾಜನ್‌ ಅವರಿಗೆ ಕರೆ ಮಾಡಿದ್ದರು ಎಂಬ ಮಾಹಿತಿ ನೀಡಬೇಕು. ಅಲ್ಲದೇ, 2022ರ ಮಾರ್ಚ್‌ 10 ರಿಂದ ಆಗಸ್ಟ್‌ 28ರವರೆಗೆ ಬಸವರಾಜನ್‌ ಮತ್ತು ಅವರ ಪತ್ನಿ ಸೌಭಾಗ್ಯ ಅವರ ಕರೆ ದಾಖಲೆ, ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಪರಶುರಾಮ್‌ ಹಾಗೂ ಮೈಸೂರಿನ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯೆ (ದೂರುದಾರರು) ಅವರ ಫೋನ್‌ ನಂಬರ್‌ ಒದಗಿಸುವಂತೆ ಹಿರಿಯ ವಕೀಲರಾದ ಸಿ ಎಚ್‌ ಹನುಮಂತರಾಯ ಮತ್ತು ವಕೀಲ ಕೆ ಬಿ ಕೆ ಸ್ವಾಮಿ ಕೋರಿದ್ದರು.

ಇದಕ್ಕೆ ಆಕ್ಷೇಪಿಸಿದ್ದ ಪ್ರಾಸಿಕ್ಯೂಷನ್‌ ಪರ ಸರ್ಕಾರಿ ಅಭಿಯೋಜಕರಾದ ಕೆ ಬಿ ನಾಗವೇಣಿ ಅವರು ತನಿಖೆ ಪ್ರಗತಿಯಲ್ಲಿರುವುದರಿಂದ ಈ ಹಂತದಲ್ಲಿ ಅರ್ಜಿದಾರರ ಕೋರಿಕೆಗೆ ಸಮ್ಮತಿಸಬಾರದು ಎಂದು ಮನವಿ ಮಾಡಿದ್ದರು. ಇದನ್ನು ನ್ಯಾಯಾಲಯ ಪುರಸ್ಕರಿಸಿದೆ.

ರಶ್ಮಿ ಜಾಮೀನು ಅರ್ಜಿ ತಿರಸ್ಕೃತ: ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಅಕ್ಕಮಹಾದೇವಿ ಹಾಸ್ಟೆಲ್‌ ವಾರ್ಡನ್‌ ಎಸ್‌ ರಶ್ಮಿ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದೆ.