<div class="paragraphs"><p>Karnataka HC and ICDS scheme</p></div>

Karnataka HC and ICDS scheme

 
ಸುದ್ದಿಗಳು

ಮಕ್ಕಳು, ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

Bar & Bench

ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆ (ಐಸಿಡಿಎಸ್‌) ಅಡಿ ಮಕ್ಕಳು,ಗರ್ಭಿಣಿಯರು ಮತ್ತು ಎದೆ ಹಾಲುಣಿಸುವ ತಾಯಂದಿರಿಗೆ ಕಳಪೆ ಗುಣಮಟ್ಟದ ಆಹಾರ ಪದಾರ್ಥ ಪೂರೈಸಲಾಗುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ಮನವಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಈಚೆಗೆ ಕರ್ನಾಟಕ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಅಮರಾವತಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಸಂಗೀತಾ ಗದುಗಿನ್‌ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಮುಖ್ಯ ಕಾರ್ಯದರ್ಶಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮತ್ತು ನಿರ್ದೇಶಕರ ಪರವಾಗಿ ಸರ್ಕಾರದ ವಕೀಲರಿಗೆ ನೋಟಿಸ್‌ ಪಡೆದುಕೊಳ್ಳುವಂತೆ ಸೂಚಿಸಿರುವ ಪೀಠವು ಶಿವಮೊಗ್ಗದ ಹರಿಹರೇಶ್ವರ ಮಹಿಳಾ ಉದ್ಯೋಗ ಮತ್ತು ಸೇವಾ ಸಂಘ, ಬೆಳಗಾವಿಯ ರೇಣುಕಾದೇವಿ ಪ್ರಗತಿಪರ ಮಹಿಳಾ ಸೇವಾ ಸಂಘ ಮತ್ತು ಕಲಬುರ್ಗಿಯ ಸಂಜೀವಿನಿ ಮಹಿಳಾ ವಿಕಾಸ ಸೇವಾ ಸಂಘದ ಅಧ್ಯಕ್ಷರಿಗೆ ನೋಟಿಸ್‌ ಜಾರಿ ಮಾಡಿದ್ದು, ಪ್ರತಿಕ್ರಿಯಿಸಲು ಆದೇಶಿಸಿದೆ.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ರೋಹನ್‌ ವೀರಣ್ಣ ತಿಗಾಡಿ ಅವರು “ಐಸಿಡಿಎಸ್‌ ಯೋಜನೆಯಡಿ ಕಳಪೆ ಗುಣಮಟ್ಟದ ಆಹಾರ ಪದಾರ್ಥ ಪೂರೈಸಲಾಗುತ್ತಿದೆ. ಮಕ್ಕಳು, ಗರ್ಭಿಣಿಯರು, ಎದೆ ಹಾಲು ಉಣಿಸುವ ತಾಯಂದಿರು ಸೇರಿದಂತೆ ಸುಮಾರು 50 ಲಕ್ಷ ಮಂದಿ ಐಸಿಡಿಎಸ್‌ ಫಲಾನುಭವಿಗಳಾಗಿದ್ದಾರೆ. ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಐಸಿಡಿಎಸ್‌ ಯೋಜನೆ ಜಾರಿಗಾಗಿ ಪೂರಕ ಪೌಷ್ಟಿಕಾಂಶ ತಯಾರಿ ಮಹಿಳಾ ತರಬೇತಿ ಕೇಂದ್ರಗಳನ್ನು (ಎಂಎಸ್‌ಪಿಟಿಸಿ) ರಚಿಸಲಾಗಿದೆ. ಆದರೆ, ಎಂಎಸ್‌ಪಿಟಿಸಿಗಳು ಫಲಾನುಭವಿಗಳಿಗೆ ಪೂರೈಸುವ ಆಹಾರ ಪದಾರ್ಥದಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ವಿಫಲವಾಗಿವೆ” ಎಂದರು.

“ಭಾರತೀಯ ಗುಣಮಟ್ಟ ಸಂಸ್ಥೆ (ಬಿಐಎಸ್‌) ಜೊತೆ ಒಪ್ಪಂದ ಮಾಡಿಕೊಳ್ಳುವ ಸಂಬಂಧ ಎಂಎಸ್‌ಪಿಟಿಸಿಗೆ 2021ರ ಮೇ 5ರಂದು ಸರ್ಕಾರ ಆದೇಶ ಮಾಡಿತ್ತು. ಪೂರಕ ಪೌಷ್ಟಿಕಾಂಶ ಯೋಜನೆ (ಎಸ್‌ಎನ್‌ಪಿ) ಅಡಿ ಪರವಾನಗಿ ಹೊಂದಿರುವ ಮಹಿಳಾ ಗುಂಪುಗಳು ಅಂಗನವಾಡಿ ಕೇಂದ್ರಗಳಲ್ಲಿನ ಫಲಾನುಭವಿಗಳಿಗೆ ಆಹಾರದ ಗುಣಮಟ್ಟ ಖಾತರಿಪಡಿಸಬೇಕು ಎಂದು ಹೇಳಲಾಗಿತ್ತು. ಆದರೆ, ಸದರಿ ಆದೇಶವನ್ನು ಯಾವುದೇ ಕಾರಣ ನೀಡದೇ 2021ರ ಮೇ 15ರಂದು ಹಿಂಪಡೆಯಲಾಗಿದೆ” ಎಂದು ಪೀಠದ ಗಮನಕ್ಕೆ ತಂದರು.

ಇದಕ್ಕೂ ಮುನ್ನ, “2018ರ ಫೆಬ್ರವರಿ 24ರ ಆದೇಶದಂತೆ ಎಂಎಸ್‌ಪಿಟಿಸಿಗಳಿಗೆ ಕಚ್ಚಾ ವಸ್ತುಗಳನ್ನು ಪೂರೈಸಲಾಗುತ್ತಿದೆ ಎಂದಿರುವ ಸರ್ಕಾರದ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇಡೀ ಪ್ರಕರಣವನ್ನು ಪರಿಶೀಲಿಸಿ, ಮಕ್ಕಳು ಮತ್ತು ಗರ್ಭಿಣಿಯರ ಹಿತದೃಷ್ಟಿಯಿಂದ ಅವರಿಗೆ ಪೌಷ್ಟಿಕಾಂಶಯುಕ್ತ ಆಹಾರ ಪೂರೈಸುವ ನಿಟ್ಟಿನಲ್ಲಿ ಪರಿಹಾರ ಹುಡುಕುವಂತೆ ಸರ್ಕಾರಕ್ಕೆ ನ್ಯಾಯಾಲಯ ಆದೇಶ ಮಾಡಿದೆ. ಈ ಕೆಲಸವನ್ನು ಮೂರು ತಿಂಗಳ ಒಳಗೆ ಮಾಡಬೇಕು ಎಂದು 2020ರ ಡಿಸೆಂಬರ್‌ 14ರ ಆದೇಶದಲ್ಲಿ ನ್ಯಾಯಾಲಯ ಹೇಳಿತ್ತು. ಹೀಗಾಗಿ, ರಾಜ್ಯ ಸರ್ಕಾರವು ಸಮಿತಿ ರಚಿಸಿತ್ತು. ಆ ಸಮಿತಿಯು ತಾಂತ್ರಿಕ ಸಮಿತಿ ರಚಿಸಿದ್ದು, ತಾಂತ್ರಿಕ ಸಮಿತಿಯು 2021ರ ಆಗಸ್ಟ್‌ 19ರಂದು ವರದಿ ಸಲ್ಲಿಸಿದೆ. ಈ ವರದಿಯನ್ನು ಇದುವರೆವಿಗೂ ಜಾರಿ ಮಾಡಲಾಗಿಲ್ಲ. ಸದರಿ ವರದಿಯನ್ನು ಜಾರಿಗೊಳಿಸಿದರೆ ಒಂದು ಮಟ್ಟಕ್ಕೆ ಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಿಗೆ ಪೂರೈಸುವ ಪೌಷ್ಟಿಕಾಂಶಯುಕ್ತ ಆಹಾರದ ಸಮಸ್ಯೆಯನ್ನು ಬಗೆಹರಿಸಬಹುದು” ಎಂದು ಪೀಠದ ಮುಂದೆ ವಿವರಿಸಿದರು.

ಇದಕ್ಕೆ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲರು “ಸದರಿ ವಿಚಾರವನ್ನೇ ಒಳಗೊಂಡಿರುವ ಮನವಿಯೊಂದು ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದು, ಅದನ್ನು ಸರ್ಕಾರ ಪರಿಗಣಿಸಿದೆ” ಎಂದರು.

ಅರ್ಜಿದಾರ ಪರ ವಕೀಲರ ವಾದವನ್ನು ದಾಖಲಿಸಿಕೊಂಡ ಪೀಠವು 2021ರ ಮೇ 5ರಂದು ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಿರುವುದು ಮತ್ತು 2021ರ ಆಗಸ್ಟ್‌ 19ರ ತಾಂತ್ರಿಕ ಸಮಿತಿ ವರದಿಯ ಸ್ಥಿತಿಗತಿ ಹಾಗೂ 2020ರ ಡಿಸೆಂಬರ್‌ 14ರಂದು ನ್ಯಾಯಾಲಯವು ಸರ್ಕಾರಕ್ಕೆ ನಿರ್ದೇಶನ ನೀಡಿರುವ ವಿಚಾರದಲ್ಲಿ ಪಾಲನೆಯಾಗಿರುವ ಅಂಶಗಳನ್ನು ಒಳಗೊಂಡ ಅಫಿಡವಿಟ್‌ ಸಲ್ಲಿಸಬೇಕು ಎಂದು ಪೀಠವು ಸರ್ಕಾರಕ್ಕೆ ಆದೇಶ ಮಾಡಿದೆ.