ಭಾರತ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್ಐ) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವ ಮುನ್ನ ಪ್ರಾಥಮಿಕ ತನಿಖೆ ನಡೆಸುವ ಅಗತ್ಯವಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್ಗೆ ಬುಧವಾರ ತಿಳಿಸಿದರು.
ದೆಹಲಿ ಪೊಲೀಸರ ಪರವಾಗಿ ವಾದ ಮಂಡಿಸಿದ ಎಸ್ಜಿ ಮೆಹ್ತಾ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಹಾಗೂ ಎಸ್ ರವೀಂದ್ರ ಭಟ್ ಅವರಿದ್ದ ಪೀಠದೆದುರು ಈ ವಿಚಾರ ಪ್ರಸ್ತಾಪಿಸಿದರು.
ʼಪ್ರಾಥಮಿಕ ತನಿಖೆಯ ಅಗತ್ಯವಿದ್ದು ನ್ಯಾಯಾಲಯ ಆದೇಶ ನೀಡಿದರೆ ಎಫ್ಐಆರ್ ದಾಖಲಿಸಲಾಗುತ್ತದೆ. ಆದರೆ ತನಿಖೆ ನಡೆಯಬೇಕು ಎಂಬುದು ನಮ್ಮ ಭಾವನೆ” ಎಂದು ಎಸ್ಜಿ ವಾದಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಚಂದ್ರಚೂಡ್ “ಸಾಕ್ಷ್ಯಾಧಾರಗಳಿಲ್ಲದೆ ನ್ಯಾಯಾಲಯವೂ ಏನೂ ಮಾಡಲಾಗದು. ದಯವಿಟ್ಟು (ವಿಚಾರಣೆ ನಡೆಯಲಿರುವ) ಶುಕ್ರವಾರ ದಾಖಲೆಗಳನ್ನು ಸಲ್ಲಿಸಿ… ಇದು ಅಪ್ರಾಪ್ತ ವಯಸ್ಕರನ್ನೂ ಒಳಗೊಂಡ ಪ್ರಕರಣ” ಎಂದರು.
ಈ ಸಂದರ್ಭದಲ್ಲಿ ಅರ್ಜಿ ಸಲ್ಲಿಸಿರುವ ಕುಸ್ತಿಪಟುಗಳ ಪರವಾಗಿ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ “ನಂತರ ಏನು ಬೆಳವಣಿಗೆಗಳಾಗಿವೆ ಎಂಬುದನ್ನು ವಿವರಿಸುವ ಅಫಿಡವಿಟ್ ಸಲ್ಲಿಸಲಾಗುವುದು” ಎಂದರು. ನ್ಯಾಯಾಲಯ ಪ್ರಕರಣವನ್ನು ಏಪ್ರಿಲ್ 28, ಶುಕ್ರವಾರಕ್ಕೆ ಪ್ರಕರಣ ಮುಂದೂಡಿತು.
ಬ್ರಿಜ್ ಭೂಷಣ್ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ಕೆಲ ದಿನಗಳಿಂದ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ತುರ್ತಾಗಿ ಪ್ರಕರಣದ ವಿಚಾರಣೆ ನಡೆಸಬೇಕೆಂದು ಮಂಗಳವಾರ ಪ್ರಸ್ತಾಪಿಸಿದಾಗ ಸಿಜೆಐ ಚಂದ್ರಚೂಡ್ ʼಮಾಡಲಾದ ಆರೋಪಗಳು ಗಂಭೀರವಾಗಿದ್ದು ಸುಪ್ರೀಂ ಕೋರ್ಟ್ ವಿಚಾರಣೆಗೆ ಪರಿಗಣಿಸುವ ಅಗತ್ಯವಿದೆʼ ಎಂದಿದ್ದರು.