IPS officer Amrit Paul
IPS officer Amrit Paul 
ಸುದ್ದಿಗಳು

ಪಿಎಸ್‌ಐ ಹಗರಣ: ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ ಜಾಮೀನು ಮನವಿ ತಿರಸ್ಕರಿಸಿದ ಬೆಂಗಳೂರಿನ ವಿಶೇಷ ನ್ಯಾಯಾಲಯ

Bar & Bench

ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಹಗರಣದ ಪ್ರಮುಖ ಆರೋಪಿ, ಅಮಾನತುಗೊಂಡಿರುವ ಪೊಲೀಸ್‌ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಮೃತ್‌ ಪೌಲ್‌ ಅವರ ಜಾಮೀನು ಮನವಿಯನ್ನು ಬುಧವಾರ ಬೆಂಗಳೂರಿನ ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ.

ಹಿರಿಯ ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ ಸಲ್ಲಿಸಿದ್ದ ಜಾಮೀನು ಮನವಿಯ ವಿಚಾರಣೆ ನಡೆಸಿದ 23ನೇ ಹೆಚ್ಚುವರಿ ನಗರ ಮತ್ತು ಸತ್ರ ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಸ್ಥಾಪಿಸಲಾಗಿರುವ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಕೆ ಲಕ್ಷ್ಮಿನಾರಾಯಣ ಭಟ್‌ ಅವರ ನೇತೃತ್ವದ ಪೀಠವು ಆದೇಶ ಮಾಡಿದೆ.

ಭದ್ರತಾ ಕೊಠಡಿಯ ಕೀಗಳನ್ನು ಸಹೋದ್ಯೋಗಿ ಅಧಿಕಾರಿಗಳ ಬಗ್ಗೆ ಏಕೆ ನೀಡಲಾಗಿತ್ತು ಎಂಬುದರ ಬಗ್ಗೆ 35ನೇ ಆರೋಪಿಯು ವಿವರಣೆ ನೀಡಿಲ್ಲ. ಪೌಲ್‌ ಅವರು ಎಸಗಿರುವ ಅಪರಾಧವು ಸಮಾಜದ ಹೆಣಿಗೆಯ ಮೇಲೆ ತೀವ್ರ ಸಮಸ್ಯೆ ಉಂಟು ಮಾಡಿದೆ. ಸಿಆರ್‌ಪಿಸಿ ಸೆಕ್ಷನ್‌ 161 & 164 ರ ಅಡಿ ಹೇಳಿಕೆಗಳಲ್ಲಿನ ವ್ಯತ್ಯಾಸವನ್ನು ಈಗ ಪರಿಗಣಿಸುವ ಅಗತ್ಯವಿಲ್ಲ. ಇದನ್ನು ವಿಚಾರಣೆಯ ಸಂದರ್ಭದಲ್ಲಿ ಪರೀಕ್ಷಿಸಬೇಕು. ಪೌಲ್‌ ಅವರು ಅತ್ಯುನ್ನತ ಸ್ಥಾನದಲ್ಲಿದ್ದ ಅಧಿಕಾರಿಯಾಗಿದ್ದು, ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಪ್ರಾಸಿಕ್ಯೂಷನ್‌ ಸಾಕ್ಷ್ಯಕ್ಕೆ ಬೆದರಿಕೆ ಒಡ್ಡುವ ಸಾಧ್ಯತೆ ಇರುತ್ತದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌ ವಾದಿಸಿದ್ದರು.

ಈ ಹಿಂದೆ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಮತ್ತು ಬೆಂಗಳೂರು ಸಿಟಿ ಸಿವಿಲ್‌ ನ್ಯಾಯಾಲಯಗಳು ಪೌಲ್‌ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದವು. ಜುಲೈ 4ರಂದು ಅಮೃತ್‌ ಪೌಲ್‌ ಅವರನ್ನು ಸಿಐಡಿ ಬಂಧಿಸಿತ್ತು. ಜುಲೈ 15ರವರೆಗೆ ಪೊಲೀಸ್‌ ಕಸ್ಟಡಿಯಲ್ಲಿದ್ದ ಪೌಲ್‌ ಅವರನ್ನು ಆನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.