Rabri Devi and The Rouse Avenue Court  
ಸುದ್ದಿಗಳು

ನ್ಯಾ. ಗೋಗ್ನೆ ವಿರುದ್ಧ ಪಕ್ಷಪಾತದ ಆರೋಪ ಮಾಡಿದ ರಾಬ್ಡಿ ದೇವಿ: ಪ್ರಕರಣಗಳ ವರ್ಗಾವಣೆಗೆ ಕೋರಿಕೆ

ಪಕ್ಷಪಾತದಿಂದ ವರ್ತಿಸಿರುವ ನ್ಯಾ. ಗೋಗ್ನೆ ಅವರು ಪ್ರಾಸಿಕ್ಯೂಷನ್ ಪರವಾಗಿ ಅನಗತ್ಯ ಒಲವು ಹೊಂದಿದ್ದಾರೆ ಎಂದು ದೂರಿದ್ದಾರೆ ರಾಬ್ಡಿ.

Bar & Bench

ಐಆರ್‌ಸಿಟಿಸಿ ಹಗರಣಕ್ಕೆ‌ ಸಂಬಂಧಿಸಿದಂತೆ ತಮ್ಮ ಕುಟುಂಬ ಸದಸ್ಯರ ವಿರುದ್ಧ ಆರೋಪ ನಿಗದಿಪಡಿಸಿದ್ದ ನ್ಯಾಯಾಧೀಶರಿಂದ ನಾಲ್ಕು ಪ್ರಕರಣಗಳನ್ನು ವರ್ಗಾವಣೆ ಮಾಡಬೇಕೆಂದು ಕೋರಿ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಅವರು ರೌಸ್ ಅವೆನ್ಯೂ ನ್ಯಾಯಾಲಯಗಳ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಾಧೀಶ ವಿಶಾಲ್‌ ಗೋಗ್ನೆ ಅವರೆದುರು ಇರುವ ಐಆರ್‌ಸಿಟಿಸಿ ಹಗರಣ, ಉದ್ಯೋಗಕ್ಕಾಗಿ ಲಂಚ ಪ್ರಕರಣಗಳು ಮತ್ತು ಅವುಗಳಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಗಳನ್ನು ಬೇರೆ ನ್ಯಾಯಾಧೀಶರು ಆಲಿಸಲು ಆದೇಶಿಸಬೇಕು ಎಂದು ಅವರು ಕೋರಿದ್ದಾರೆ.

ಐಆರ್‌ಸಿಟಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 13 ರಂದು, ನ್ಯಾಯಾಧೀಶ ಗೋಗ್ನೆ ಅವರು ಲಾಲು ಯಾದವ್, ರಾಬ್ಡಿ ದೇವಿ, ತೇಜಸ್ವಿ ಯಾದವ್ ಹಾಗೂ ಇತರ ಹಲವರ ವಿರುದ್ಧ ಕ್ರಿಮಿನಲ್ ಆರೋಪ  ನಿಗದಿಪಡಿಸಿದ್ದರು.

ನ್ಯಾಯಾಧೀಶರು ಪಕ್ಷಪಾತಿಯಾಗಿ ವರ್ತಿಸುತ್ತಿದ್ದು ತಮ್ಮ ಹಾಗೂ ತಮ್ಮ ಕುಟುಂಬದ ವಿರುದ್ಧ ಪೂರ್ವಾಗ್ರಹ ಪೀಡಿತರಾಗಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಅನಗತ್ಯ ಒಲವು ಹೊಂದಿದ್ದಾರೆ ಎಂದು ಅವರು ದೂರಿದ್ದಾರೆ.

 ನ್ಯಾಯಾಧೀಶರ ನಡೆ ಅರ್ಜಿದಾರರ ಮನದಲ್ಲಿ ಭೀತಿ ಸೃಷ್ಟಿಸಿದ್ದು ನ್ಯಾಯಯುತ ವಿಚಾರಣೆ ನಡೆಯುವ ಸಲುವಾಗಿ ಬೇರೆ ಯಾವುದಾದರೂ ನ್ಯಾಯಾಲಯಕ್ಕೆ ಪ್ರಕರಣ ವರ್ಗಾಯಿಸಬೇಕು ಎಂದು ಅವರು ಕೋರಿದ್ದಾರೆ.

ನ್ಯಾಯಾಧೀಶರ ನಡವಳಿಕೆಯು ಅವರಿಂದ ನಿರೀಕ್ಷಿಸಲಾಗುವ ತಟಸ್ಥತೆಯ ಮೇಲೆ ಪರಿಣಾಮ ಬೀರುತ್ತಿದ್ದು ತಮ್ಮ ಮನಸ್ಸಿನಲ್ಲಿ ಅವರು ಪಕ್ಷಪಾತ ನಡೆಸಿರುವ ಸಾಧ್ಯತೆಯನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದ್ದಾರೆ. ರಾಬ್ಡಿ ದೇವಿ ಪರವಾಗಿ ಹಾಜರಾದ ಹಿರಿಯ ವಕೀಲ ಮಣೀಂದರ್‌ ಸಿಂಗ್‌ ಈ ಸಂಬಂಧ ಅರ್ಜಿ ಸಲ್ಲಿಸಲಾಗಿದ್ದು ಶೀಘ್ರದಲ್ಲಿಯೇ ವಿಚಾರಣೆ ನಡೆಯಲಿದೆ ಎಂದು ನ್ಯಾ. ಗೋಗ್ನೆ ಅವರಿಗೆ ತಿಳಿಸಿದರು.

ಐಆರ್‌ಸಿಟಿಸಿ ಪ್ರಕರಣದಲ್ಲಿ, ಲಾಲು ಯಾದವ್ ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ಖಾಸಗಿ ಸಂಸ್ಥೆಗೆ ಗುತ್ತಿಗೆಗಳನ್ನು ನೀಡುವುದಕ್ಕಾಗಿ ಪ್ರಮುಖ ಭೂಮಿ ಮತ್ತು ಷೇರುಗಳನ್ನು ಲಂಚವಾಗಿ ಸ್ವೀಕರಿಸಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.  ಪ್ರಕರಣದಲ್ಲಿ, ನ್ಯಾಯಾಲಯ ಯಾದವ್ ಕುಟುಂಬದ ವಿರುದ್ಧವೂ ಆರೋಪಗಳನ್ನು ನಿಗದಿಪಡಿಸಿತ್ತು. ಅಲ್ಲದೆ ಲಾಲೂ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದಾಗ  ಉದ್ಯೋಗಕ್ಕಾಗಿ ವಿವಿಧ ಆಕಾಂಕ್ಷಿಗಳಿಂದ ಜಮೀನಿನ ರೂಪದಲ್ಲಿ ಲಂಚ ಪಡೆದಿದ್ದರು ಎಂದು ಸಿಬಿಐ ದೂರಿತ್ತು. ಎರಡೂ ಪ್ರಕರಣಗಳಲ್ಲಿ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ ಡಿ) ತನಿಖೆ ನಡೆಸುತ್ತಿದೆ.