Karnataka HC & Rahul Gandhi 
ಸುದ್ದಿಗಳು

ಬಿಜೆಪಿ ಕುರಿತ ಮಾನಹಾನಿ ಜಾಹೀರಾತು ನೀಡುವಲ್ಲಿ ರಾಹುಲ್‌ ಗಾಂಧಿ ಪಾತ್ರವಿಲ್ಲ: ಶಶಿಕಿರಣ್‌ ಶೆಟ್ಟಿ ವಾದ

ಬಿಜೆಪಿಯ ವಿರುದ್ಧ ಆಧಾರರಹಿತ, ಅತಾರ್ಕಿಕ ಮತ್ತು ಸುಳ್ಳು ಜಾಹೀರಾತನ್ನು ಪತ್ರಿಕೆಗಳ ಮುಖಪುಟದಲ್ಲಿ ನೀಡುವ ಮೂಲಕ ಮಾನಹಾನಿ ಮಾಡಿರುವುದಲ್ಲದೇ ಸುಳ್ಳು ಆರೋಪಗಳನ್ನು ಮಾಡಲಾಗಿದೆ ಎಂದು ಆಕ್ಷೇಪಿಸಲಾಗಿದೆ.

Bar & Bench

ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಮುಖ್ಯ ವಾಹಿನಿಯ ಆಂಗ್ಲ ಮತ್ತು ಕನ್ನಡ ದಿನ ಪತ್ರಿಕೆಗಳ ಮುಖಪುಟದಲ್ಲಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿ ಕಾಂಗ್ರೆಸ್‌ ಜಾಹೀರಾತು ನೀಡಿದ್ದರಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಪಾತ್ರವಿಲ್ಲ ಎಂದು ಹಿರಿಯ ವಕೀಲ ಕೆ ಶಶಿಕಿರಣ್‌ ಶೆಟ್ಟಿ ಹೈಕೋರ್ಟ್‌ನಲ್ಲಿ ವಾದಿಸಿದ್ದಾರೆ.

ಬಿಜೆಪಿ ಹೂಡಿರುವ ಮಾನಹಾನಿ ಪ್ರಕರಣ ರದ್ದುಪಡಿಸುವಂತೆ ಕೋರಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌ ಸುನೀಲ್‌ ದತ್‌ ಯಾದವ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಟ್ವೀಟ್‌ ಅನ್ನು ರೀಟ್ವೀಟ್‌ ಮಾಡಿದ ಆರೋಪವನ್ನು ರಾಹುಲ್‌ ವಿರುದ್ಧ ಮಾಡಲಾಗಿದೆ. ದೂರು ಅಥವಾ ಸ್ವಯಂ ಹೇಳಿಕೆಯಲ್ಲಿ ಈ ಸಂಬಂಧ ಯಾವುದೇ ದಾಖಲೆ ಇಲ್ಲ ಎಂದು ಹಿರಿಯ ವಕೀಲ ಕೆ ಶಶಿಕಿರಣ್‌ ಶೆಟ್ಟಿ ವಾದಿಸಿದರು.

Justice S Sunil Dutt Yadav

ರಾಹುಲ್‌ ಪ್ರತಿನಿಧಿಸಿದ್ದ ಹಿರಿಯ ವಕೀಲ ಶಶಿಕಿರಣ್‌ ಶೆಟ್ಟಿ ಅವರು “ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯು ಪತ್ರಿಕೆಗಳಿಗೆ ಜಾಹೀರಾತು ನೀಡಿದೆಯೇ ವಿನಾ ರಾಹುಲ್‌ ಗಾಂಧಿಯಲ್ಲ. ಅದನ್ನು ಪ್ರಕಟಿಸಿದ ಪತ್ರಿಕೆಗಳ ಸಂಪಾದಕರನ್ನು ದೂರುದಾರರು ಪಕ್ಷಕಾರರನ್ನಾಗಿ ಮಾಡಿಲ್ಲ. ಮಾನಹಾನಿ ಪ್ರಕರಣದಲ್ಲಿ ಯಾರು ಪ್ರಕಟಿಸುತ್ತಾರೋ ಅವರನ್ನೂ ಪಕ್ಷಕಾರರನ್ನಾಗಿ ಮಾಡಬೇಕು. ಜಾಹೀರಾತು ನೀಡಲು ಯಾರು ಅಧಿಕಾರ ನೀಡಿದ್ದಾರೆ ಮತ್ತು ಅವುಗಳನ್ನು ಯಾವಾಗ ನೀಡಲಾಗಿದೆ ಎಂಬುದನ್ನು ಪತ್ತೆ ಮಾಡಲಾಗಿಲ್ಲ. ವಿವೇಚನಾರಹಿತ ಮತ್ತು ಆಧಾರರಹಿತ ಆರೋಪಗಳನ್ನು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ವಜಾಗೊಳಿಸಬೇಕು” ಎಂದರು.

“ಜಾಹೀರಾತು ನೀಡಿದ್ದ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಅವರ ಸಂಸತ್‌ ಸದಸ್ಯತ್ವ ಅನರ್ಹಗೊಂಡಿತ್ತು. ಪಕ್ಷದಲ್ಲೂ ಅವರು ಯಾವುದೇ ಹುದ್ದೆ ಅಥವಾ ಸ್ಥಾನ ಹೊಂದಿರಲಿಲ್ಲ” ಎಂದರು.

ಬಿಜೆಪಿ ಪ್ರತಿನಿಧಿಸಿದ್ದ ವಕೀಲ ಎಂ ವಿನೋದ್‌ ಕುಮಾರ್‌ ಅವರು “ಜಾಹೀರಾತು ನೀಡುವ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾಗಿದ್ದರು. ರೀಟ್ವೀಟ್‌ ಮಾಡುವುದು ಮಾನಹಾನಿ ಅಡಿ ಬರುತ್ತದೆ. ವಿಧಾನಸಭಾ ಚುನಾವಣೆಗೆ ಮೂರು ದಿನ ಬಾಕಿ ಇರುವಾಗ ಕಾಂಗ್ರೆಸ್‌ ಪಕ್ಷವು ಬಿಜೆಪಿಯ ಮಾನಹಾನಿ ಮಾಡಲು ಸ್ವಯಂಪ್ರೇರಿತವಾಗಿ ಪತ್ರಿಕೆಗಳಿಗೆ ಜಾಹೀರಾತು ನೀಡಿದೆ. ಇಲ್ಲಿ ಪತ್ರಿಕೆಗಳು ಸುದ್ದಿ ಪ್ರಕಟಿಸಿಲ್ಲ. ಹೀಗಾಗಿ, ಪತ್ರಿಕೆ ಸಂಪಾದಕರನ್ನು ಪಕ್ಷಕಾರರನ್ನಾಗಿ ಮಾಡಿಲ್ಲ. ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ದಾಖಲೆಗಳನ್ನು ಹೈಕೋರ್ಟ್‌ ಮುಂದೆ ಇಡಲು ಕಾಲಾವಕಾಶ ನೀಡಬೇಕು” ಎಂದರು.

ಇದನ್ನು ಆಲಿಸಿದ ಪೀಠವು ಉಭಯ ಪಕ್ಷಕಾರರು ವಾದಾಂಶ ಸಲ್ಲಿಸಬೇಕು. ದೂರಿನ ಆಧಾರದಲ್ಲಿ ರಾಹುಲ್‌ ಗಾಂಧಿಯ ಪಾತ್ರವೇನು ಮತ್ತು ಸ್ವಯಂ ಹೇಳಿಕೆಯನ್ನು ಅಡಕಗೊಳಿಸಬೇಕು ಎಂದು ಆದೇಶಿಸಿದ್ದು, ಮಧ್ಯಂತರ ಆದೇಶ ವಿಸ್ತರಿಸಿ, ವಿಚಾರಣೆಯನ್ನು ಡಿಸೆಂಬರ್‌ 11ಕ್ಕೆ ಮುಂದೂಡಿದೆ.

2023ರ ಜೂನ್‌ನಲ್ಲಿ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಐಪಿಸಿ ಸೆಕ್ಷನ್‌ಗಳಾದ 499 ಮತ್ತು 500ರ ಅಡಿ ಕಾಂಗ್ರೆಸ್‌, ಡಿ ಕೆ ಶಿವಕುಮಾರ್‌, ಸಿದ್ದರಾಮಯ್ಯ ಮತ್ತು ರಾಹುಲ್‌ ಗಾಂಧಿ ಅವರ ವಿರುದ್ಧ ಸಂಜ್ಞೇ ಪರಿಗಣಿಸಿದೆ. ಇದನ್ನು ವಜಾ ಮಾಡುವಂತೆ ಕೋರಲಾಗಿದೆ.

ಪ್ರಕರಣದ ಹಿನ್ನೆಲೆ: ಬಿಜೆಪಿಯ ವಿರುದ್ಧ ಆಧಾರರಹಿತ, ಅತಾರ್ಕಿಕ ಮತ್ತು ಸುಳ್ಳು ಜಾಹೀರಾತನ್ನು ಪತ್ರಿಕೆಗಳ ಮುಖಪುಟದಲ್ಲಿ ನೀಡುವ ಮೂಲಕ ಆರೋಪಿಗಳು ಮಾನಹಾನಿ ಮಾಡಿರುವುದಲ್ಲದೇ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಆಕ್ಷೇಪಾರ್ಹ ಜಾಹೀರಾತಿನಲ್ಲಿ “ಭ್ರಷ್ಟಾಚಾರ ದರ ಪಟ್ಟಿ” ಅಡಿಯಲ್ಲಿ ಹಲವು ಸುಳ್ಳುಗಳನ್ನು ಸೇರಿಸಲಾಗಿದೆ. ಆರೋಪಿಗಳು ತಮಗೆ ಸರಿ ಎನಿಸಿದ್ದನ್ನು ರಂಜಕವಾಗಿ ಜಾಹೀರಾತಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಎಂದು ಬಿಜೆಪಿ ಆಕ್ಷೇಪಿಸಿದೆ.

ಕೆಎಸ್‌ಡಿಎಲ್‌ನಲ್ಲಿ ಹುದ್ದೆಗೆ 5-15 ಕೋಟಿ ರೂಪಾಯಿ, ಎಂಜಿನಿಯರ್‌ ಹುದ್ದೆಗೆ ರೂ. 1-5 ಕೋಟಿ, ಉಪ ನೋಂದಣಾಧಿಕಾರಿ ಹುದ್ದೆಗೆ ರೂ. 50 ಲಕ್ಷದಿಂದ- 5 ಕೋಟಿ, ಬೆಸ್ಕಾಂನಲ್ಲಿನ ಹುದ್ದೆಗೆ ರೂ. 1 ಕೋಟಿ, ಪಿಎಸ್‌ ಹುದ್ದೆಗೆ ರೂ. 80 ಲಕ್ಷ, ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ರೂ. 50-70 ಲಕ್ಷ, ಪ್ರಾಧ್ಯಾಪಕರ ಹುದ್ದೆಗೆ ರೂ. 30-50  ಲಕ್ಷ, ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ರೂ. 30 ಲಕ್ಷ, ಅಂತೆಯೇ ಕಿರಿಯ ಎಂಜಿನಿಯರ್‌, ಬಮೂಲ್‌, ಲೋಕೋಪಯೋಗಿ ಕಿರಿಯ ಎಂಜಿನಿಯರ್‌, ಪೇದೆಗಳ ಹುದ್ದೆಗೆ ಲಂಚ ನಿಗದಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿತ್ತು.

ಬಿಡಿಎ ಆಯುಕ್ತರು, ಕೆಪಿಎಸ್‌ಸಿ ಅಧ್ಯಕ್ಷರು, ಜಿಲ್ಲಾಧಿಕಾರಿ ಮತ್ತು ಪೊಲೀಸ್‌ ವರಿಷ್ಠಾಧಿಕಾರಿ, ಕುಲಪತಿ, ಸಹಾಯಕ ಆಯುಕ್ತರು ಮತ್ತು ತಹಶೀಲ್ದಾರ್‌ ಹುದ್ದೆಗಳಿಗೂ ಲಂಚದ ದರ ನಿಗದಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಆರೋಪಿಗಳು ಬಹಿರಂಗವಾಗಿ ಹೇಳಿರುವುದರಿಂದ ಇದು ಕ್ರಿಮಿನಲ್‌ ಮಾನಹಾನಿಯಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿತ್ತು.

ಕೋವಿಡ್‌ ಸಂಬಂಧಿತ ಸಾಮಗ್ರಿಗಳ ಪೂರೈಕೆ ಮತ್ತು ಖರೀದಿಯಲ್ಲಿ ಶೇ. 70ರಷ್ಟು ಕಮಿಷನ್‌ ಪಡೆಯಲಾಗಿದೆ. ಲೋಕೋಪಯೋಗಿ ಇಲಾಖೆಯ ಗುತ್ತಿಗೆ, ರಸ್ತೆ ನಿರ್ಮಾಣದಲ್ಲಿ 70:30ರಷ್ಟು ಲಂಚ ಪಡೆಯಲಾಗಿದೆ ಎಂದು ದೂರಿದ್ದಾರೆ. ಅಲ್ಲದೇ, ಶೇ 40ರ ಸರ್ಕಾರವು 1.50 ಲಕ್ಷ ಕೋಟಿ ರೂಪಾಯಿ ಲೂಟಿ ಮಾಡಿದೆ ಎಂದು ಉಲ್ಲೇಖಿಸಲಾಗಿದೆ. ಈ ಮೂಲಕ ಬಿಜೆಪಿಯ ವಿರುದ್ಧ ಮಾನಹಾನಿ ಮಾಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಜನಪ್ರಿಯ ʼಡಬಲ್‌ ಎಂಜಿನ್‌ ಸರ್ಕಾರʼಕ್ಕೆ ಪರ್ಯಾಯವಾಗಿ ʼಟ್ರಬಲ್‌ ಎಂಜಿನ್‌ ಸರ್ಕಾರʼ ಎಂಬ ಪದ ಬಳಕೆ ಮಾಡಲಾಗಿದ್ದು, ಈ ಮೂಲಕ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಸಾಧ್ಯತೆಯನ್ನು ಕುಸಿಯುವಂತೆ ಮಾಡಲಾಗಿದೆ. ಈ ಜಾಹೀರಾತಿನಲ್ಲಿ ಡಿ ಕೆ ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಅವರ ಫೋಟೊಗಳನ್ನು ಬಳಕೆ ಮಾಡಲಾಗಿದ್ದು, ಈ ಇಬ್ಬರೂ ನಕಲಿ ಮತ್ತು ಸಳ್ಳು ಹೇಳಿಕೆಗಳಿಗೆ ನೇರವಾಗಿ ಕಾರಣವಾಗಿದ್ದಾರೆ. ಈ ಜಾಹೀರಾತು ಪ್ರಕಟವಾದ ತಕ್ಷಣ ರಾಹುಲ್‌ ಗಾಂಧಿ ಅವರು ಅದನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಾಕಿಕೊಂಡಿದ್ದರು. ನಕಲಿ ಮತ್ತು ಪೂರ್ವಾಗ್ರಹ ಪೀಡಿತ ಜಾಹೀರಾತು ನೀಡಲು ರಾಹುಲ್‌ ಗಾಂಧಿ ಸೂಚನೆ ನೀಡಿದ್ದಾರೆ ಎಂದು ದೂರಿನಲ್ಲಿ ವಾದಿಸಲಾಗಿದೆ.