Karnataka HC, Bengaluru Police Commissioner Kamala Pant and IPS officer M N Anucheth
Karnataka HC, Bengaluru Police Commissioner Kamala Pant and IPS officer M N Anucheth 
ಸುದ್ದಿಗಳು

[ಜಾರಕಿಹೊಳಿ ಪ್ರಕರಣ] ಪೊಲೀಸ್‌ ಆಯುಕ್ತ ಕಮಲ್‌ ಪಂತ್‌, ಡಿಸಿಪಿ ಅನುಚೇತ್‌ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ

Siddesh M S

ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್‌ ಪಂತ್‌, ಕೇಂದ್ರ ವಲಯದ ಉಪ ಪೊಲೀಸ್‌ ಆಯುಕ್ತ (ಡಿಸಿಪಿ) ಎಂ ಎನ್‌ ಅನುಚೇತ್‌ ಮತ್ತು ಕಬ್ಬನ್‌ ಪಾರ್ಕ್‌ ಠಾಣೆಯ ಇನ್‌ಸ್ಪೆಕ್ಟರ್‌ ಬಿ ಮಾರುತಿ ಅವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿದ್ದ 8ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ (ಎಸಿಎಂಎಂ) ನ್ಯಾಯಾಲಯದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಗುರುವಾರ ತಡೆಯಾಜ್ಞೆ ನೀಡಿದೆ. ಅಲ್ಲದೇ ರಾಜ್ಯ ಸರ್ಕಾರ ಮತ್ತು ಎರಡನೇ ಪ್ರತಿವಾದಿಯಾದ ಆದರ್ಶ್‌ ಅಯ್ಯರ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ.

8ನೇ ಎಸಿಎಂಎಂ ಆದೇಶ ಪ್ರಶ್ನಿಸಿ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌, ಡಿಸಿಪಿ ಅನುಚೇತ್‌ ಮತ್ತು ಇನ್‌ಸ್ಪೆಕ್ಟರ್‌ ಮಾರುತಿ ಸಲ್ಲಿಸಿರುವ ರಿಟ್‌ ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಅವರ ನೇತೃತ್ವದ ಏಕಸದಸ್ಯ ಪೀಠ ನಡೆಸಿತು.

“ಅರ್ಜಿದಾರರ ಪರ ವಕೀಲ ಪಿ ಪ್ರಸನ್ನಕುಮಾರ್‌ ಅವರ ವಾದವನ್ನು ಆಲಿಸಿ ರಾಜ್ಯ ಸರ್ಕಾರ ಮತ್ತು ಎರಡನೇ ಪ್ರತಿವಾದಿಯಾದ ಆದರ್ಶ್‌ ಅಯ್ಯರ್‌ಗೆ ನೋಟಿಸ್‌ ಜಾರಿ ಮಾಡಲಾಗಿದೆ. 8ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಆದೇಶಕ್ಕೆ ತಡೆ ನೀಡುವಂತೆ ಅರ್ಜಿದಾರರು ಕೋರಿದ್ದಾರೆ. ತಮ್ಮ ಆದೇಶದಲ್ಲಿ ಮ್ಯಾಜಿಸ್ಟ್ರೇಟ್‌ ಅವರು ಮೂರನೇ ಆರೋಪಿಯಾದ ಕಬ್ಬನ್‌ ಪೊಲೀಸ್‌ ಠಾಣೆಯ ಅಧಿಕಾರಿ ಸಬ್‌ ಇನ್‌ಸ್ಪೆಕ್ಟರ್‌ ಮಾರುತಿ ಅವರಿಗೆ ತಮ್ಮನ್ನು ಒಳಗೊಂಡಂತೆ ಪೊಲೀಸ್‌ ಆಯುಕ್ತರು ಮತ್ತು ಕೇಂದ್ರ ವಲಯದ ಡಿಸಿಪಿ ವಿರುದ್ಧ ಸಿಆರ್‌ಪಿಸಿ ಸೆಕ್ಷನ್‌ 156(3) ಅಡಿ ಪ್ರಕರಣ ದಾಖಲಿಸಿ, ತನಿಖೆ ನಡೆಸುವಂತೆ ನಿರ್ದೇಶಿಸಿದ್ದಾರೆ” ಎಂದು ಪೀಠವು ಆದೇಶದಲ್ಲಿ ದಾಖಲಿಸಿದೆ.

“ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧದ ವಿಚಾರವು ಖಾಸಗಿಯ ದೂರಿನ ಸಾರಾಂಶವಾಗಿದೆ. ಈ ಸಂಬಂಧ ಸಂತ್ರಸ್ತೆಯು ತಮ್ಮ ವಕೀಲರ ಮೂಲಕ ದೂರು ನೀಡಿದ ಬಳಿಕ ಎಫ್‌ಐಆರ್‌ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗಿದ್ದು, ಆರೋಪಪಟ್ಟಿ ಸಿದ್ಧವಾಗಿದೆ. ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠವು ವಿಶೇಷ ತನಿಖಾ ದಳದ (ಎಸ್‌ಐಟಿ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿರುವುದು ಸೇರಿದಂತೆ ಸಂಬಂಧಿತ ಪ್ರಕರಣಗಳ ಕುರಿತು ಮಧ್ಯಂತರ ತಡೆ ನೀಡಿರುವ ಹಿನ್ನೆಲೆಯಲ್ಲಿ ಅಂತಿಮ ವರದಿಯನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಲಾಗಿಲ್ಲ” ಎಂದು ಪೀಠವು ಆದೇಶದಲ್ಲಿ ದಾಖಲಿಸಿದೆ.

ಮುಂದುವರೆದು “ಖಾಸಗಿ ದೂರು ದಾಖಲಿಸಿರುವ ಆದರ್ಶ್‌ ಅಯ್ಯರ್‌ ಅವರಿಗೆ ಈ ಎಲ್ಲಾ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ಇಲ್ಲ ಎಂದೆನಿಸುತ್ತದೆ. ಇಂಥ ಸಂದರ್ಭದಲ್ಲಿ ಅರ್ಜಿದಾರರಾದ ಪಂತ್‌, ಅನುಚೇತ್‌ ಮತ್ತು ಮಾರುತಿ ಅವರ ವಿರುದ್ಧ ಮ್ಯಾಜಿಸ್ಟ್ರೇಟ್‌ ತನಿಖೆಗೆ ಆದೇಶಿಸಿರುವುದು ಸೂಕ್ತ ಎಂದೆನಿಸುವುದಿಲ್ಲ. ಹೀಗಾಗಿ, ಮುಂದಿನ ಆದೇಶದವರೆಗೆ ಮ್ಯಾಜಿಸ್ಟ್ರೇಟ್‌ ಅವರ ಆಕ್ಷೇಪಾರ್ಹ ಆದೇಶಕ್ಕೆ ತಡೆ ನೀಡಲಾಗಿದೆ” ಎಂದು ಪೀಠವು ಆದೇಶದಲ್ಲಿ ಹೇಳಿದೆ.

ಇದಕ್ಕೂ ಮುನ್ನ ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಪ್ರಸನ್ನ ಕುಮಾರ್‌ ಅವರು “ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಅವರು ಮಾಧ್ಯಮದಲ್ಲಿ ಪ್ರಸಾರವಾದ ವರದಿಗಳನ್ನು ಆಧರಿಸಿ ದೂರು ನೀಡಿದ್ದರು. ಆದರೆ, ಎಫ್‌ಐಆರ್‌ ಆಗುವುದಕ್ಕೂ ಮುನ್ನವೇ ಅವರು ದೂರು ಹಿಂಪಡೆದಿದ್ದರು. ಇದನ್ನು ಆಧರಸಿ ದೂರು ದಾಖಲಿಸಬೇಕಿತ್ತು ಎಂದು ಆದರ್ಶ್‌ ಅಯ್ಯರ್‌ ಎಸಿಎಂಎಂ ನ್ಯಾಯಾಲಯವನ್ನು ಕೋರಿದ್ದಾರೆ. ಆದರೆ, ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚನೆಯಾಗಿರುವುದು, ಪ್ರಕರಣದ ತನಿಖೆ, ವರದಿ ಸಿದ್ಧವಾಗಿರುವುದನ್ನು ಮರೆಮಾಚಿದ್ದಾರೆ” ಎಂದು ಆಕ್ಷೇಪಿಸಿದರು.

ಮೊದಲಿಗೆ ದಿನೇಶ್‌ ಕಲ್ಲಹಳ್ಳಿ ನೀಡಿದ್ದ ದೂರನ್ನು ಆಧರಿಸಿ ಅಧಿಕಾರಿಗಳು ದೂರು ದಾಖಲಿಸಿರಲಿಲ್ಲ ಎಂದು ಜನಾಧಿಕಾರ ಸಂಘರ್ಷ ಸಮಿತಿಯ ಆದರ್ಶ್‌ ಐಯ್ಯರ್‌ ಎಂಬವರು ಖಾಸಗಿ ದೂರು ದಾಖಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ್ದ 8ನೇ ಎಸಿಎಂಎಂ ನ್ಯಾಯಾಲಯವು ಸಿಆರ್‌ಪಿಸಿ ಸೆಕ್ಷನ್‌ 156(3) ಅಡಿ ಪ್ರತಿವಾದಿಗಳಾದ ಪಂತ್‌, ಅನುಚೇತ್‌ ಮತ್ತು ಮಾರುತಿ ಅವರ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿ, ಮುಂದಿನ ವರ್ಷದ ಫೆಬ್ರವರಿ 1ರೊಳಗೆ ವರದಿ ನೀಡುವಂತೆ ಕಬ್ಬನ್‌ ಪಾರ್ಕ್‌ ಪೊಲೀಸರಿಗೆ ಮಂಗಳವಾರ ಆದೇಶಿಸಿತ್ತು.

ಜಾರಕಿಹೊಳಿ ಕೋರಿಕೆಯನ್ನು ಆಧರಿಸಿ ಅಂದಿನ ಗೃಹ ಸಚಿವ ಹಾಗೂ ಹಾಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ಸೂಚನೆಯಂತೆ ಕಮಲ್‌ ಪಂತ್‌ ಅವರು ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿದ್ದಾರೆ. ಇದರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿರುವ ಮನವಿಗಳ ವಿಚಾರಣೆಯನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ನಡೆಸುತ್ತಿದೆ. ಇಲ್ಲಿಯೂ ಜಾರಕಿಹೊಳಿ ಮತ್ತು ಸಂತ್ರಸ್ತೆ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಿಸಿರುವ ದೂರುಗಳ ಕುರಿತು ತನಿಖೆ ನಡೆಸಲು ರಚಿಸಲಾಗಿರುವ ಎಸ್‌ಐಟಿ ವರದಿ ಸಲ್ಲಿಸಲು ಅವಕಾಶ ಮಾಡಿಕೊಡಬೇಕು ಎಂದು ರಾಜ್ಯ ಸರ್ಕಾರ ನ್ಯಾಯಾಲಯವನ್ನು ಕೋರುತ್ತಲೇ ಇದೆ. ಆದರೆ, ಎಸ್‌ಐಟಿ ರಚನೆಯೇ ಕಾನೂನುಬಾಹಿರವಾಗಿದೆ. ಹೀಗಾಗಿ, ಎಸ್‌ಐಟಿ ವಜಾ ಮಾಡಿ ನ್ಯಾಯಾಲಯದ ನಿಗಾದಲ್ಲಿ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಬೇಕು ಎಂದು ಸಂತ್ರಸ್ತ ಯುವತಿ ವಾದಿಸುತ್ತಿದ್ದಾರೆ.