Udhayanidhi Stalin and Supreme Court  
ಸುದ್ದಿಗಳು

ಸನಾತನ ಧರ್ಮ ಪ್ರಕರಣ: ಎಫ್‌ಐಆರ್‌ಗಳ ಒಗ್ಗೂಡಿಸಿ ಆಲಿಸಲು ಉದಯನಿಧಿ ಮನವಿ, ರಾಜ್ಯಗಳ ಪ್ರತಿಕ್ರಿಯೆ ಕೇಳಿದ ಸುಪ್ರೀಂ

Bar & Bench

ಸನಾತನ ಧರ್ಮ ಕುರಿತಾದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ದೇಶದ ಬೇರೆಬೇರೆ ರಾಜ್ಯಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳನ್ನು ಒಟ್ಟಾಗಿಸುವ ಸಂಬಂಧ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ವಿವಿಧ ರಾಜ್ಯ ಸರ್ಕಾರಗಳು ಮತ್ತು ದೂರುದಾರರಿಗೆ ನೋಟಿಸ್‌ ಜಾರಿ ಮಾಡಿದೆ.

ಸಂವಿಧಾನದ 32ನೇ ವಿಧಿಯಡಿ ಅರ್ಜಿ ತಿದ್ದುಪಡಿ ಕೋರಿದ್ದ ಸ್ಟಾಲಿನ್‌ ಮನವಿಯನ್ನು ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ದೀಪಂಕರ್‌ ದತ್ತ ನೇತೃತ್ವದ ವಿಭಾಗೀಯ ಪೀಠ ಪುರಸ್ಕರಿಸಿದೆ.

ಕಳೆದ ವಿಚಾರಣೆಯಲ್ಲಿ ನ್ಯಾಯಾಲಯವು ಸಂವಿಧಾನದ 32ನೇ ವಿಧಿಯಡಿ ಅರ್ಜಿ ಸಲ್ಲಿಕೆಗೆ ಆಕ್ಷೇಪಿಸಿ, ಸಿಆರ್‌ಪಿಸಿ ಸೆಕ್ಷನ್‌ 406ರ ಅಡಿ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು.

ಡೆಂಘಿ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾ ವೈರಸ್‌ ನಿರ್ಮೂಲನೆ ಮಾಡುವ ರೀತಿಯಲ್ಲಿ ಸನಾತನ ಧರ್ಮವನ್ನು ನಾವು ನಿರ್ಮೂಲನೆ ಮಾಡಬೇಕಿದೆ ಎಂದು ತಮಿಳುನಾಡು ಪ್ರಗತಿಪರ ಬರಹಗಾರರು, ಕಲಾವಿದರ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಉದಯನಿಧಿ ಸ್ಟಾಲಿನ್‌ ಹೇಳಿದ್ದರು. ಇದಕ್ಕೆ ಆಕ್ಷೇಪಿಸಿ ಹಲವು ಕಡೆ ಉದಯನಿಧಿ ವಿರುದ್ಧ ಎಫ್‌ಐಆರ್‌ ದಾಖಲಾಗಿವೆ. ಅವುಗಳನ್ನು ಒಗ್ಗೂಡಿಸಿ ಆಲಿಸಲು ಉದಯನಿಧ ಮನವಿ ಮಾಡಿದ್ದಾರೆ.