ಸುದ್ದಿಗಳು

ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ: ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಈಶ್ವರಪ್ಪ ವಿರುದ್ಧ ʼಬಿʼ ರಿಪೋರ್ಟ್‌ ಸಲ್ಲಿಕೆ

Bar & Bench

ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಮೊದಲ ಆರೋಪಿಯಾಗಿರುವ ಬೆಳಗಾವಿಯ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಶಂಕಾಸ್ಪದ ಸಾವಿನ ಪ್ರಕರಣದಲ್ಲಿ ಉಡುಪಿ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬುಧವಾರ ʼಬಿʼ ರಿಪೋರ್ಟ್‌ ಸಲ್ಲಿಸಿದ್ದಾರೆ.

ಉಡುಪಿ ಠಾಣೆಯ ಇನ್‌ಸ್ಪೆಕ್ಟರ್‌ ಅವರು 62ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಹಾಗೂ ಹಾಲಿ ಮತ್ತು ಮಾಜಿ ಶಾಸಕರು/ಸಂಸದರ ವಿರುದ್ಧದ ಮ್ಯಾಜಿಸ್ಟ್ರೇಟ್‌ ವಿಚಾರಣೆ ನಡೆಸಬಹುದಾದ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶೆಯಾದ ಪ್ರೀತ್‌ ಜೆ ಅವರ ನೇತೃತ್ವದ ಪೀಠಕ್ಕೆ ಬಿ ವರದಿ ಸಲ್ಲಿಸಿದ್ದಾರೆ.

ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಖಾತೆ ಮಾಜಿ ಸಚಿವ ಈಶ್ವರಪ್ಪ ಅವರ ವಿರುದ್ಧದ ಪ್ರಕರಣ ಕೈಬಿಡಲಾಗಿದೆ ಎನ್ನಲಾಗಿದೆ. ಉಡುಪಿ ಇನ್‌ಸ್ಪೆಕ್ಟರ್‌ ಪ್ರಮೋದ್‌ ಕುಮಾರ್‌ ಅವರು ತನಿಖೆಯ ನೇತೃತ್ವ ವಹಿಸಿದ್ದರು.

ಈಶ್ವರಪ್ಪ ಅವರ ವಿರುದ್ಧ ಗುತ್ತಿಗೆ ಕೆಲಸದ ಹಣ ಬಿಡುಗಡೆಗೆ 40 ಪರ್ಸೆಂಟ್‌ ಕಮಿಷನ್‌ ಆರೋಪ ಮಾಡಿದ್ದ ಸಂತೋಷ್‌ ಪಾಟೀಲ್‌ ಅವರು ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಏಪ್ರಿಲ್‌ 11ರಂದು ಶವವಾಗಿ ಪತ್ತೆಯಾಗಿದ್ದರು. ಸಂತೋಷ್‌ ಸಹೋದರ ಪ್ರಶಾಂತ್‌ ಗೌಡಪ್ಪ ಪಾಟೀಲ ದೂರು ಆಧರಿಸಿ ಉಡುಪಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಈಶ್ವರಪ್ಪ ಮೊದಲ ಆರೋಪಿಯಾಗಿದ್ದರು.