<div class="paragraphs"><p>City Civil Court and K M Jagadesh Kumar</p></div>

City Civil Court and K M Jagadesh Kumar

 
ಸುದ್ದಿಗಳು

[ಜಾತಿ ನಿಂದನೆ ಪ್ರಕರಣ] ಜೈಲಿನಲ್ಲೇ ಜಗದೀಶ್‌ ವಿಚಾರಣೆಗೆ ಅನುಮತಿಸಿದ ನ್ಯಾಯಾಲಯ; ನ್ಯಾಯಾಂಗ ಬಂಧನ ಮುಂದುವರಿಕೆ

Bar & Bench

ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯಾಗಿರುವ ವಕೀಲ ಕೆ ಎಂ ಜಗದೀಶ್‌ ಕುಮಾರ್‌ ಅಲಿಯಾಸ್‌ ಜಗದೀಶ್‌ ಮಹದೇವ್‌ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತನಿಖಾಧಿಕಾರಿಯು ವಿಚಾರಣೆ ನಡೆಸಲು ಗುರುವಾರ ಬೆಂಗಳೂರು ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಅನುಮತಿಸಿದೆ. ಹೀಗಾಗಿ, ಆರೋಪಿ ಜಗದೀಶ್‌ ಅವರು ನ್ಯಾಯಾಂಗ ಬಂಧನದಲ್ಲೇ ಮುಂದುವರಿಯಲಿದ್ದಾರೆ.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ನಿವಾಸಿಯಾದ ಮುತ್ತಯ್ಯ ಎಂಬವರು ಫೆಬ್ರವರಿ 14ರಂದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯಿದೆ ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿ ಕೊಡಿಗೇಹಳ್ಳಿ ಠಾಣೆಯಲ್ಲಿ ಜಗದೀಶ್‌ ಅವರ ವಿರುದ್ದ ದಾಖಲಿಸಿರುವ ಪ್ರಕರಣದ ವಿಚಾರಣೆಯನ್ನು 68ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ಕಾಶಿಂ ಚೂರಿಖಾನ್‌ ಅವರ ನೇತೃತ್ವದ ಪೀಠವು ನಡೆಸಿತು.

ವಿಶೇಷ ಸರ್ಕಾರಿ ಅಭಿಯೋಜಕರು “ಆರೋಪಿಯನ್ನು ವಿಚಾರಣೆಗೆ ಗುರಿಪಡಿಸಲು ಪೊಲೀಸ್‌ ಕಸ್ಟಡಿಗೆ ಕೇಳುತ್ತಿಲ್ಲ. ಹೀಗಾಗಿ ಆರೋಪಿಯನ್ನು ಜೈಲಿನಲ್ಲೇ ವಿಚಾರಣೆಗೆ ಒಳಪಡಿಸಲು ಅವಕಾಶ ಮಾಡಿಕೊಡಬೇಕು” ಎಂದು ಕೋರಿದರು. ಇದಕ್ಕೆ ನ್ಯಾಯಾಲಯವು ಅನುಮತಿಸಿತು.

ಈ ಮಧ್ಯೆ, ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್‌ 5ರಂದು ಜಗದೀಶ್‌ ಅವರ ಜಾಮೀನು ಮನವಿಯ ಕುರಿತು ನ್ಯಾಯಾಲಯವು ಆದೇಶ ಮಾಡಲಿದೆ. ಅಂದೇ ಜಾತಿ ನಿಂದನೆ ಪ್ರಕರಣದಲ್ಲಿಯೂ ಆರೋಪಿಯಾಗಿರುವ ಜಗದೀಶ್‌ ಅವರ ಜಾಮೀನು ಮನವಿಗೆ ಸಂಬಂಧಿಸಿದಂತೆ ವಾದ ಮಂಡನೆ ನಡೆಯುವ ಸಾಧ್ಯತೆ ಇದೆ.

ಇದಲ್ಲದೇ, ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಆಯುಕ್ತರ ಸಹಾಯಕ ಸಿಬ್ಬಂದಿ ರಮೇಶ್‌ ಎಂಬವರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆಯೊಡ್ಡಿದ ಆರೋಪದ ಹಿನ್ನೆಲೆಯಲ್ಲಿ ರಮೇಶ್‌ ಅವರ ಪರವಾಗಿ ಪೊಲೀಸ್‌ ಸಿಬ್ಬಂದಿ ನಾಗರಾಜ್‌ ಕೇನಿಕರ್‌ ಅವರು ನೀಡಿದ ದೂರು ಆಧರಿಸಿ ಫೆಬ್ರವರಿ 13ರಂದು ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಜಗದೀಶ್‌ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 506, 290, 353ರ ಅಡಿ ಪ್ರಕರಣ ದಾಖಲಿಸಲಾಗಿದೆ.