Karnataka High Court
Karnataka High Court 
ಸುದ್ದಿಗಳು

ಕೊಡವರಿಗೆ ಪ್ರತ್ಯೇಕ ಸ್ಥಾನಮಾನ: ಹೈಕೋರ್ಟ್‌ಗೆ ಮೆಮೊ ಸಲ್ಲಿಸಿದ ಸಂಸದ ಸುಬ್ರಮಣಿಯನ್‌ ಸ್ವಾಮಿ; ಏ.17ಕ್ಕೆ ವಿಚಾರಣೆ

Bar & Bench

ಕೊಡವರಿಗೆ ಪ್ರತ್ಯೇಕ ಸ್ಥಾನಮಾನಕ್ಕಾಗಿ ಆಗ್ರಹಿಸಿ ಕೊಡವ ನ್ಯಾಷನಲ್‌ ಕೌನ್ಸಿಲ್‌ (ಸಿಎನ್‌ಸಿ) ಸರ್ಕಾರಕ್ಕೆ ಸಲ್ಲಿಸಿರುವ ಮನವಿಗಳನ್ನು ಪರಿಗಣಿಸುವಂತೆ ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಈ ಕುರಿತಂತೆ ಮಾಜಿ ರಾಜ್ಯಸಭಾ ಸದಸ್ಯರೂ ಆದ ಅರ್ಜಿದಾರ ಸುಬ್ರಮಣಿಯನ್‌ ಸ್ವಾಮಿ ಗುರುವಾರ ಖುದ್ದು ಹೈಕೋರ್ಟ್‌ಗೆ ಹಾಜರಾಗಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್‌ ಕಮಲ್ ನೇತೃತ್ವದ ವಿಭಾಗೀಯ ಪೀಠಕ್ಕೆ ವಿಚಾರಣೆ ನಡೆಸಲು ಮೆಮೊ ಸಲ್ಲಿಸಿದರು. ಮೆಮೊ ಸ್ವೀಕರಿಸಿದ ಪೀಠವು ವಿಚಾರಣೆಯನ್ನು ಏಪ್ರಿಲ್‌ 17ಕ್ಕೆ ನಿಗದಿ ಮಾಡಿದೆ. 

ಕೊಡವರು ಭೌಗೋಳಿಕ, ರಾಜಕೀಯ ಸ್ವಾಯತ್ತತೆ ಹೊಂದಲು ಕೋರಿ ಸಿಎನ್‌ಸಿಯು ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಈ ಕುರಿತಂತೆ ಸರ್ಕಾರವು ಆಯೋಗವೊಂದನ್ನು ರಚಿಸಲು ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪ್ರಕರಣದಲ್ಲಿ ಕಾನೂನು ಇಲಾಖೆ ಕಾರ್ಯದರ್ಶಿ, ಕೇಂದ್ರ ಕಾನೂನು ಸಚಿವಾಲಯದ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಹಾಗೂ ಕೊಡವ ನ್ಯಾಷನಲ್‌ ಕೌನ್ಸಿಲ್‌ ಅಧ್ಯಕ್ಷ ಎನ್.ಯು.ನಾಚಪ್ಪ ಅವರನ್ನು ಪ್ರತಿವಾದಿಗಳನ್ನಾಗಿಸಲಾಗಿದೆ.