CM Siddaramaiah, MUDA, Bengaluru City Civil Court 
ಸುದ್ದಿಗಳು

ಮುಡಾ ಪ್ರಕರಣ: ಸಿಎಂ, ಪತ್ನಿ ಸೇರಿ ಐವರ ವಿರುದ್ಧ ಸಿಬಿಐ ತನಿಖೆ ಕೋರಿ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಕೆ

Bar & Bench

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ ಅವರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಗುರುವಾರ ಖಾಸಗಿ ದೂರು ಸಲ್ಲಿಕೆಯಾಗಿದೆ.

ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಖಾಸಗಿ ದೂರಿನಲ್ಲಿ ಮುಖ್ಯಮಂತ್ರಿ ಸಿದ್ದಾರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ, ಜೆ ದೇವರಾಜು ಹಾಗೂ ಇತರೆ ಹೆಸರಿನಡಿ ಐವರನ್ನು ಆರೋಪಿಗಳನ್ನಾಗಿಸಲಾಗಿದೆ. ದೂರನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರು ಸ್ವೀಕರಿಸಿದ್ದು, ನಾಳೆ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಅಭಿಯೋಜನಾ ಮಂಜೂರಾತಿ ಕೋರಿ ರಾಜ್ಯಾಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಮನವಿ ಸಲ್ಲಿಸಿದ್ದು, ಅದು ಪರಿಗಣನೆಗೆ ಬಾಕಿ ಇದೆ. ಸಿದ್ದರಾಮಯ್ಯ ಅವರು ಕ್ರಮ ತೆಗೆದುಕೊಂಡಿರುವುದು ಅಥವಾ ಶಿಫಾರಸ್ಸು ಮಾಡಿರುವುದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿಲ್ಲವಾದ್ದರಿಂದ ಭ್ರಷ್ಟಾಚಾರ ನಿರೋಧ ಕಾಯಿದೆ ಸೆಕ್ಷನ್‌ 17ಎ ಅಡಿ ಸಕ್ಷಮ ಪ್ರಾಧಿಕಾರದಿಂದ (ರಾಜ್ಯಪಾಲರು) ಪೂರ್ವಾನುಮತಿ ಬೇಕಿಲ್ಲ. ಕಾನೂನಿನ ತೊಡಕು ಇಲ್ಲದೇ ಈ ನ್ಯಾಯಾಲಯವು ದೂರನ್ನು ಮೆರಿಟ್‌ ಮೇಲೆ ಪರಿಗಣಿಸಬಹುದಾಗಿದೆ ಎಂದು ವಿವರಿಸಲಾಗಿದೆ.

ಸಿದ್ದರಾಮಯ್ಯ ಮತ್ತು ಇತರೆ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ಗಳಾದ 120ಬಿ, 166, 403, 406, 420, 426, 465, 468, 340, 351 (ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ಗಳಾದ 61, 188, 314, 316, 318, 324, 336, 340, ಮತ್ತು 351), ಭ್ರಷ್ಟಾಚಾರ ನಿರೋಧಕ ಕಾಯುದೆ 1988ರ ಸೆಕ್ಷನ್‌ 9 ‌& 13, ಬೇನಾಮಿ ಆಸ್ತಿ ವರ್ಗಾವಣೆ ನಿಷೇಧ ಕಾಯಿದೆ 1988 ಮತ್ತು ಕರ್ನಾಟಕ ಭೂಮಿ ವಶ (ಗ್ರ್ಯಾಬಿಂಗ್‌) ಕಾಯಿದೆ 2011ರ ಸೆಕ್ಷನ್‌ 3 & 4ರ ಅಡಿ ಸಂಜ್ಞೇ ಪರಿಗಣಿಸಿ, ಸಿಬಿಐ ಅಥವಾ ರಾಜ್ಯ ಸರ್ಕಾರ/ಲೋಕಾಯುಕ್ತ ಪೊಲೀಸ್‌ ವಿಭಾಗದ ಅಡಿಗೆ ಬಾರದ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಗೆ ಸಿಆರ್‌ಪಿಸಿ ಸೆಕ್ಷನ್‌ 202 ಜೊತೆಗೆ ಬಿಎನ್‌ಎಸ್‌ಎಸ್‌ ಸೆಕ್ಷನ್‌ 225 ಅಡಿ ತನಿಖೆ ನಡೆಸಲು ಆದೇಶಿಸಬೇಕು. ಆನಂತರ ಆರೋಪಿಗಳಿಗೆ ಸಮನ್ಸ್‌ ಜಾರಿ ಮಾಡಿ, ಕಾನೂನಿನ ಅಡಿ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಕೋರಲಾಗಿದೆ.

ಅಲ್ಲದೇ, ಸಿಆರ್‌ಪಿಸಿ ಸೆಕ್ಷನ್‌ 156 (3) ಜೊತೆಗೆ ಬಿಎನ್‌ಎಸ್‌ಎಸ್‌ ಸೆಕ್ಷನ್‌ 175 (3) ಅಡಿ ಲೋಕಾಯುಕ್ತ ಪೊಲೀಸ್‌ ಘಟಕಕ್ಕೆ ತನಿಖೆ ನಡೆಸಿ, ವರದಿ ಸಲ್ಲಿಸಲು ಆದೇಶಿಸಬೇಕು. ಆನಂತರ ಅದನ್ನು ಸಂಜ್ಞೇ ಪರಿಗಣಿಸಿ, ಕಾನೂನಿನ ಅನ್ವಯ ಶಿಕ್ಷೆಗೆ ಗುರಿಪಡಿಸಬೇಕು ಎಂದು ದೂರಿನಲ್ಲಿ ಕೋರಲಾಗಿದೆ. ವಕೀಲ ವಸಂತ್‌ ಕುಮಾರ್‌ ಅವರು ವಕಾಲತ್ತು ಹಾಕಿದ್ದಾರೆ.