“ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಬಾಕಿಯಿರುವ ಏಳು ಸಾವಿರ ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಮಾಡಲು ಕ್ರಮ ವಹಿಸುವ ಮೂಲಕ ಕರ್ನಾಟಕ ರಾಜ್ಯವನ್ನು ಗ್ರಾಹಕರ ಪರಿಹಾರ ವಿಚಾರದಲ್ಲಿ ಮೊದಲ ಸ್ಥಾನಕ್ಕೆ ತರಲು ಶ್ರಮಿಸಲಾಗುವುದು” ಎಂದು ನೂತನ ಕರ್ನಾಟಕ ರಾಜ್ಯ ಗ್ರಾಹಕರ ಪರಿಹಾರ ಆಯೋಗದ ಅಧ್ಯಕ್ಷರಾದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಟಿ ಜೆ ಶಿವಶಂಕರೇಗೌಡ ಹೇಳಿದರು.
ರಾಜ್ಯ ಗ್ರಾಹಕರ ಹಕ್ಕುಗಳ ಪರಿಹಾರ ಆಯೋಗದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು.
“ರಾಜ್ಯದಲ್ಲಿ ಜಿಲ್ಲಾ ಗ್ರಾಹಕರ ಪರಿಹಾರ ವೇದಿಕೆಗಳು ಸೇರಿ ಸುಮಾರು ಆರರಿಂದ ಏಳು ಸಾವಿರ ಪ್ರಕರಣಗಳು ಬಾಕಿಯಿವೆ. ಆದರೂ ಗ್ರಾಹಕರ ಪರಿಹಾರ ಕಲ್ಪಿಸುವಲ್ಲಿ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲ ಸ್ಥಾನಕ್ಕೆ ತರಲು ಶ್ರಮಿಸಲಾಗುವುದು” ಎಂದರು.
“ವೇದಿಕೆಗಳಲ್ಲಿನ ಆಡಳಿತಕ್ಕೆ ಚುರುಕು ನೀಡುವುದು, ಖಾಲಿ ಹುದ್ದೆಗಳ ಭರ್ತಿಗೆ ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಕ್ರಮವಹಿಸಲಾಗುವುದು. ಹೈಕೋರ್ಟ್ ರಿಜಿಸ್ಟ್ರಾರ್ ಆಗಿದ್ದ ಸಂದರ್ಭದಲ್ಲಿ ಡಿಜಿಟಲೀಕರಣಕ್ಕೆ ಆದ್ಯತೆ ನೀಡಲಾಗಿತ್ತು. ಅದೇ ರೀತಿಯಲ್ಲಿ ಗ್ರಾಹಕರ ವೇದಿಕೆಗಳನ್ನು ಡಿಜಿಟಲೀಕರಣ ಮಾಡಲು ಕ್ರಮ ವಹಿಸಲಾಗುವುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಮಾಡಿಕೊಡಲಾಗುವುದು. ವಿಡಿಯೋ ಕಾನ್ಫರೆನ್ಸ್ ವಿಚಾರಣೆಗೆ ಒತ್ತು ನೀಡಲಾಗುವುದು. ಮೊಬೈಲ್ ಅ್ಯಪ್ ಮೂಲಕ ಇಡೀ ಗ್ರಾಹಕರ ವೇದಿಕೆಗಳ ಕಾರ್ಯಚಟುವಟಿಕೆಗಳನ್ನು ಬೆರಳ ತುದಿಯಲ್ಲಿ ಲಭ್ಯವಾಗುವಂತೆ ಮಾಡಲಾಗುವುದು. ಇದಕ್ಕೆ ವಕೀಲರು, ಕಕ್ಷಿದಾರರು ಸಹಕಾರ ನೀಡಬೇಕು” ಎಂದು ಮನವಿ ಮಾಡಿದರು.