CM Basavaraj Bommai
CM Basavaraj Bommai 
ಸುದ್ದಿಗಳು

ಸದೃಢವಾದ ನ್ಯಾಯಾಂಗ ವ್ಯವಸ್ಥೆಯಿಂದ ರಾಜ್ಯದ ಅಭಿವೃದ್ಧಿ: ಸಿಎಂ ಬಸವರಾಜ ಬೊಮ್ಮಾಯಿ

Bar & Bench

ಸದೃಢವಾದ ನ್ಯಾಯಾಂಗ ವ್ಯವಸ್ಥೆಯು ರಾಜ್ಯದ ಅಭಿವೃದ್ಧಿಗೆ ಕಾರಣವಾಗುತ್ತದೆ. ದೇಶದಲ್ಲಿನ ದೃಢ ನ್ಯಾಯಾಂಗ ವ್ಯವಸ್ಥೆಯಿಂದಾಗಿ ವಿದೇಶಿ ಬಂಡವಾಳ ಹೂಡಿಕೆದಾರರು ಹೂಡಿಕೆಗೆ ಮುಂದಾಗಿದ್ದಾರೆ ಎಂದು ನ್ಯಾಯಾಂಗದ ಮಹತ್ವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಶಿಗ್ಗಾಂವ್ ಹಾಗೂ ಸವಣೂರುಗಳಲ್ಲಿ ವಕೀಲರ ಸಂಘದ ನೂತನ ಕಟ್ಟಡದ ನಿರ್ಮಾಣ ಕಾಮಗಾರಿಗೆ ಭಾನುವಾರ ಅವರು ಶಿಲಾನ್ಯಾಸ ನೆರವೇರಿಸಿದರು.

ಶಿಗ್ಗಾಂವ್‌ನಲ್ಲಿ ವಕೀಲರ ಸಂಘದ ನೂತನ ಕಟ್ಟಡದ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆಗೆ ವಿಶೇಷ ಸ್ಥಾನ, ಮನ್ನಣೆ ನೀಡಲಾಗಿದೆ. ಪ್ರಜಾಪ್ರಭುತ್ವದಲ್ಲಿ ನ್ಯಾಯಾಂಗಕ್ಕೆ ಅಧಿಕಾರ, ಜವಾಬ್ದಾರಿ ಮತ್ತು ಗೌರವ ಅತ್ಯಗತ್ಯ. ಭಾರತವು ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ದೇಶವು ಎಪ್ಪತ್ತೈದು ವರ್ಷದ ಲೋಕತಂತ್ರವನ್ನು ಕಾಣುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು ಎಂದು ಅವರು ಅಭಿಪ್ರಾಯಪಟ್ಟರು.

ಇದೇ ವೇಳೆ, ರಾಜ್ಯದ ವಕೀಲ ಸಮುದಾಯಕ್ಕೆ ಆರೋಗ್ಯ ಸೌಲಭ್ಯ ಕಾರ್ಯಕ್ರಮವನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಅವರು ಪುನರುಚ್ಚರಿಸಿದರು.

ನ್ಯಾಯಾಂಗದ ಮೂಲಸೌಕರ್ಯಕ್ಕೆ ಒತ್ತು

ಕರ್ನಾಟಕ ನ್ಯಾಯಾಂಗ ವ್ಯವಸ್ಥೆಯ ಮೂಲಭೂತ ಸೌಕರ್ಯಕ್ಕಾಗಿ ರೂ. 800 ಕೋಟಿಯನ್ನು ತೆಗೆದಿರಿಸಲಾಗಿದೆ. ಕೆಳಹಂತದ ನ್ಯಾಯಾಲಯಗಳಲ್ಲಿ ಅತ್ಯುತ್ತಮ ಮೂಲಸೌಕರ್ಯ ಕಲ್ಪಿಸಲು ಇದರಿಂದ ಅನುಕೂಲವಾಗಲಿದೆ. ಜನಸಂಖ್ಯೆ ಹೆಚ್ಚಿದಂತೆ ನ್ಯಾಯಾಲಯಗಳು, ಅದರ ಸೌಕರ್ಯಗಳು ಹೆಚ್ಚಾಗಬೇಕಾಗುತ್ತವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನ್ಯಾಯಾಂಗಕ್ಕೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡುತ್ತಿದೆ ಎಂದರು.

Foundation Stone Laying Ceremony

ಶಿಗ್ಗಾಂವಿ, ಸವಣೂರು, ಹಾವೇರಿಗಳಲ್ಲಿ ವಕೀಲರ ಸಂಘಗಳಿಗೆ ಅನುಮತಿ ನೀಡಿ, ಕಟ್ಟಡಕ್ಕೆ ಪೀಠೋಪಕರಣ, ಮೂಲಭೂತಸೌಕರ್ಯಗಳನ್ನು ಸರ್ಕಾರ ಪೂರೈಸಲಿದೆ ಎಂದು ಈ ವೇಳೆ ಮುಖ್ಯಮಂತ್ರಿಯವರು ಭರವಸೆ ನೀಡಿದರು

ಕಾನೂನು ರೂಪಿಸುವಾಗ ಗೊಂದಲವಿಲ್ಲದೇ ನಿಖರತೆ ಇದ್ದಷ್ಟೂ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತದೆ. ನ್ಯಾಯಾಲಯದಲ್ಲಿ ಪ್ರಕರಣಗಳ ಮಾನಿಟರಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದೆ. ದೇಶದಲ್ಲಿಯೇ ಕರ್ನಾಟಕದಲ್ಲಿ ಉನ್ನತ ಮಟ್ಟದ ನ್ಯಾಯಾಂಗ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯ ಇದೆ. ಶಿಗ್ಗಾಂವಿ, ಸವಣೂರುಗಳಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಬಹಳಷ್ಟು ಸುಧಾರಣೆಯಾಗಿದ್ದು, ಮ್ಯಾಜಿಸ್ಟ್ರೇಟ್ ಕೋರ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದರು.