<div class="paragraphs"><p>Mamata Banerjee, SK Supian and Supreme Court</p></div>

Mamata Banerjee, SK Supian and Supreme Court

 
ಸುದ್ದಿಗಳು

ಕೊಲೆ ಪ್ರಕರಣ: ಮಮತಾ ಬ್ಯಾನರ್ಜಿ ಬೆಂಬಲಿಗ ಸುಪಿಯಾನ್‌ಗೆ ಮಧ್ಯಂತರ ರಕ್ಷಣೆ ನೀಡಿದ ಸುಪ್ರೀಂ ಕೋರ್ಟ್

Bar & Bench

ಸಿಬಿಐ ತನಿಖೆ ನಡೆಸುತ್ತಿರುವ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಪರ್ಧಿಸಿದ್ದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಚುನಾವಣಾ ಏಜೆಂಟ್‌ ಎಸ್‌ಕೆ ಸುಪಿಯಾನ್ ಅವರನ್ನು ಬಂಧಿಸದಂತೆ ಸುಪ್ರೀಂಕೋರ್ಟ್‌ ಗುರುವಾರ ಮಧ್ಯಂತರ ರಕ್ಷಣೆ ನೀಡಿದೆ.

ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್ ಮತ್ತು ಬಿ ಆರ್ ಗವಾಯಿ ಅವರಿದ್ದ ಪೀಠ ಪ್ರಕರಣವನ್ನು ಮುಂದಿನ ವಿಚಾರಣೆಗಾಗಿ ಜ. 31ಕ್ಕೆ ಪಟ್ಟಿ ಮಾಡಿತು. ಈ ಹಿಂದೆ ಸುಪಿಯಾನ್‌ ಅವರ ಮನವಿಯನ್ನು ತಿರಸ್ಕರಿಸಿ ಕಲ್ಕತ್ತಾ ಹೈಕೋರ್ಟ್‌ ಆದೇಶ ಹೊರಡಿಸಿತ್ತು. ಇದನ್ನು ಅವರು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಪಶ್ಚಿಮ ಬಂಗಾಳದಲ್ಲಿ 2021ರ ಮೇನಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಮಮತಾ ಬ್ಯಾನರ್ಜಿ ನೇತೃತ್ವದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್‌ ಗೆಲುವು ಸಾಧಿಸಿತ್ತು. ನಂದಿಗ್ರಾಮದಲ್ಲಿ ಮಮತಾ ಸೋತರಾದರೂ ಅವರ ಪಕ್ಷ ರಾಜ್ಯದೆಲ್ಲೆಡೆ ಭರ್ಜರಿ ಗೆಲುವು ಸಾಧಿಸಿತ್ತು. ಆ ಬಳಿಕ ರಾಜ್ಯದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದ ಸಂದರ್ಭದಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನ ಹತ್ಯೆ ನಡೆದಿತ್ತು. ರಾಜ್ಯದಲ್ಲಿ ಆಡಳಿತ ಪಕ್ಷದ ಇಚ್ಛೆಯ ಮೇರೆಗೆ ನಡೆದಿದೆ ಎನ್ನಲಾದ ಹತ್ಯೆಗಳು ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್‌ ಸಿಬಿಐ ತನಿಖೆಗೆ ಆದೇಶಿಸಿತ್ತು.