A1
A1
ಸುದ್ದಿಗಳು

ಒವೈಸಿ ಮೇಲೆ ಗುಂಡಿನ ದಾಳಿ ಪ್ರಕರಣ: ಆರೋಪಿಗಳಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

Bar & Bench

ಸಂಸತ್ ಸದಸ್ಯ ಅಸಾದುದ್ದೀನ್ ಒವೈಸಿ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಗುಂಡು ಹಾರಿಸಿದ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ ಅಲಾಹಾಬಾದ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಕಳೆದ ವಾರ ರದ್ದುಗೊಳಿಸಿದೆ [ಅಸಾದುದ್ದೀನ್ ಉವೈಸಿ ಮತ್ತು ಉತ್ತರ ಪ್ರದೇಶ ಸರ್ಕಾರ ಇನ್ನಿತರರ ನಡುವಣ ಪ್ರಕರಣ].

ಇಬ್ಬರು ಆರೋಪಿಗಳ ಜಾಮೀನಿಗೆ ಸಂಬಂಧಿಸಿದಂತೆ ಹೈಕೋರ್ಟ್ ಯಾವುದೇ ಕಾರಣ ನೀಡಿಲ್ಲ ಎಂದು ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಎಂ.ಎಂ.ಸುಂದ್ರೇಶ್ ಅವರ ಪೀಠವು ಗಮನಿಸಿದೆ.

ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಅಭಿಪ್ರಾಯವನ್ನು ನೀಡಿಲ್ಲ. ತನಿಖೆಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಅಥವಾ ಹೈಕೋರ್ಟ್‌ ವ್ಯವಹರಿಸಿದ ಆರೋಪಪಟ್ಟಿಯ ಭಾಗವನ್ನು ನೀಡಿಲ್ಲ. ಅಪರಾಧದ ಗಂಭೀರತೆಯನ್ನು ಕೂಡ ಹೈಕೋರ್ಟ್‌ ಪರಿಗಣಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ.  

ಹೀಗಾಗಿ ಹೈಕೋರ್ಟ್‌ ಆದೇಶವನ್ನು ಬದಿಗೆ ಸರಿಸಿದ ಸರ್ವೋಚ್ಚ ನ್ಯಾಯಾಲಯ ಆರೋಪಿಗಳು ವಾರದೊಳಗೆ ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಶರಣಾಗುವಂತೆ ಸೂಚಿಸಿತು. ನಾಲ್ಕು ವಾರಗಳಲ್ಲಿ ಪ್ರಕರಣವನ್ನು ಹೊಸದಾಗಿ ಪರಿಗಣಿಸಿ ವಿಲೇವಾರಿ ಮಾಡುವಂತೆ ಸೂಚಿಸಿ ಹೈಕೋರ್ಟ್‌ಗೆ ಮರಳಿಸಿತು.

ತಾನು ಕೃತ್ಯದ ಸಂತ್ರಸ್ತನಾಗಿದ್ದರೂ ತನ್ನನ್ನು ಕೇಳದೆ ಹೈಕೋರ್ಟ್‌ ಜಾಮೀನು ಆದೇಶ ಹೊರಡಿಸಿದೆ ಎಂದು ದೂರಿ ಒವೈಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಕಳೆದ ಫೆಬ್ರವರಿಯಲ್ಲಿ ಉತ್ತರಪ್ರದೇಶದಲ್ಲಿ ಎಐಎಂಐಎಂ ಪಕ್ಷದ ನೇತಾರರೂ ಆಗಿರುವ ಒವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದಿತ್ತು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸನ್ನಿಹಿತವಾದ ಸಂದರ್ಭದಲ್ಲಿಯೇ ಅವರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದರು.

[ಆದೇಶದ ಪ್ರತಿಯನ್ನು ಇಲ್ಲಿ ಓದಿ]

Asaduddin_Owaisi_vs_UP_and_ors.pdf
Preview