ಕರ್ನಾಟಕ ಮಾಹಿತಿ ಹಕ್ಕು ಆಯೋಗದ ನಿವೃತ್ತ ಮಾಹಿತಿ ಆಯುಕ್ತ ಎಲ್ ಕೃಷ್ಣಮೂರ್ತಿ ಅವರಿಗೆ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯಡಿ ಸಿಜಿಎಚ್ಎಸ್ (ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಗಳನ್ನು ಒದಗಿಸುವ) ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆದುಕೊಳ್ಳಲು ಕರ್ನಾಟಕ ಹೈಕೋರ್ಟ್ ಸೋಮವಾರ ಅವಕಾಶ ಕಲ್ಪಿಸಿದೆ. ಈ ಮೂಲಕ ಏಕಸದಸ್ಯ ಪೀಠದ ಆದೇಶ ಎತ್ತಿ ಹಿಡಿದಿದೆ.
ಕೃಷ್ಣಮೂರ್ತಿ ಅವರಿಗೆ ಸಿಜಿಎಚ್ಎಸ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಬೇಕು ಎಂಬ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ನೇತೃತ್ವದ ವಿಭಾಗೀಯ ಪೀಠ ವಜಾ ಮಾಡಿದೆ.
ಪ್ರಕರಣದ ಹಿನ್ನೆಲೆ: ಎಲ್ ಕೃಷ್ಣಮೂರ್ತಿ ಅವರು ಮಾಹಿತಿ ಹಕ್ಕು ಆಯೋಗ ಆಯುಕ್ತ ಹುದ್ದೆಯಿಂದ 2019ರ ಅಕ್ಟೋಬರ್ 25ರಂದು ನಿವೃತ್ತರಾಗಿದ್ದರು. ನಂತರ ಅವರು ವೈದ್ಯಕೀಯ ಪ್ರಯೋಜನ ಕೋರಿ ಸರ್ಕಾರಕ್ಕೆ ಹಲವು ಅರ್ಜಿಗಳನ್ನು ಸಲ್ಲಿಸಿದ್ದರು. ಆದರೆ, ಅವರ ಅರ್ಜಿಗಳನ್ನು ತಿರಸ್ಕರಿಸಿದ್ದ ಅಧಿಕಾರಿಗಳು, 2019ರ ಅಕ್ಟೋಬರ್ 24ರಂದು ಹೊರಡಿಸಿರುವ ಅಧಿಸೂಚನೆ ಪ್ರಕಾರ ವೈದ್ಯಕೀಯ ಭತ್ಯೆ ನೀಡಲಾಗದು ಎಂದು ಆದೇಶಿಸಿದ್ದರು.
ಈ ಆದೇಶವನ್ನು ಪ್ರಶ್ನಿಸಿ ಕೃಷ್ಣಮೂರ್ತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಏಕಸದಸ್ಯ ಪೀಠವು ಅರ್ಜಿದಾರರು ವೈದ್ಯಕೀಯ ಚಿಕಿತ್ಸೆಗೆ ಅರ್ಹರಾಗಿದ್ದಾರೆ ಎಂದು 2023ರ ಜೂನ್ 21ರಂದು ಆದೇಶಿಸಿತ್ತು.