ಸುದ್ದಿಗಳು

ಒಳಉಡುಪು ಸಾಕ್ಷ್ಯ ತಿರುಚಿದ ಪ್ರಕರಣ: ಶಾಸಕ ಆಂಟನಿ ರಾಜು ತಪ್ಪಿತಸ್ಥ ಎಂದು ತೀರ್ಪಿತ್ತ ಕೇರಳ ನ್ಯಾಯಾಲಯ

ದಶಕಗಳ ಹಿಂದಿನ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ವಕೀಲರಾಗಿದ್ದ ರಾಜು ಪ್ರಕರಣದ ಪ್ರಮುಖ ಸಾಕ್ಷ್ಯವಾದ ಒಳಉಡುಪನ್ನು ಬದಲಿಸಲು ಪಿತೂರಿ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಅಂತಿಮವಾಗಿ ನ್ಯಾಯಾಲಯವು ಅವರನ್ನು ದೋಷಿ ಎಂದು ತೀರ್ಮಾನಿಸಿದೆ.

Bar & Bench

ಒಳಉಡುಪು ಸಾಕ್ಷ್ಯ ವಿರೂಪಕ್ಕೆ ಸಂಬಂಧಿಸಿದ 33 ವರ್ಷಗಳಷ್ಟು ಹಳೆಯದಾದ ಕುಪ್ರಸಿದ್ಧ ಪ್ರಕರಣದಲ್ಲಿ ಕೇರಳದ ಮಾಜಿ ಸಾರಿಗೆ ಸಚಿವ, ಶಾಸಕ ಆಂಟನಿ ರಾಜು ಅವರನ್ನು ಕೇರಳ ನ್ಯಾಯಾಲಯವೊಂದು ಶನಿವಾರ ದೋಷಿ ಎಂದು ತೀರ್ಪು ನೀಡಿದೆ.

ನೆಡುಮಂಗಾಡು ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ- I ನೀಡಿರುವ ತೀರ್ಪಿನಲ್ಲಿ, ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), 201 (ಸಾಕ್ಷ್ಯ ನಾಶಕ್ಕೆ ಕಾರಣವಾಗುವುದು), 193 (ಸುಳ್ಳು ಸಾಕ್ಷ್ಯಗಳನ್ನು ರೂಪಿಸುವುದು), 409 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಮತ್ತು 34 (ಸಾಮಾನ್ಯ ಉದ್ದೇಶದಿಂದ ಹಲವಾರು ಜನರು ಮಾಡಿದ ಕ್ರಿಮಿನಲ್ ಕೃತ್ಯಗಳು) ಅಡಿಯಲ್ಲಿ ರಾಜು ಅವರನ್ನು ತಪ್ಪಿತಸ್ಥರೆಂದು ಘೋಷಿಸಿದೆ. ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟಿಸಬೇಕಿದೆ.

ಅಲ್ಲದೆ, ಇದೇ ಪ್ರಕರಣದಲ್ಲಿ ನ್ಯಾಯಾಲಯದ ಗುಮಾಸ್ತರಾಗಿದ್ದ ಕೆ ಜೆ ಜೋಸ್ ಅವರನ್ನು ಸಹ ಮೇಲಿನ ನಿಬಂಧನೆಗಳ ಅಡಿಯಲ್ಲಿ ತಪ್ಪಿತಸ್ಥರೆಂದು ನ್ಯಾಯಾಲಯವು ಘೋಷಿಸಿದೆ.

ರಾಜು ಅವರು ಕೇರಳದ ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಮೈತ್ರಿಕೂಟದ ಭಾಗವಾಗಿರುವ ಪ್ರಜಾಪ್ರಭುತ್ವ ಕೇರಳ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದಾರೆ. ಕಳೆದ ವರ್ಷ ಸಂಪುಟ ಪುನಾರಚನೆಯಾಗುವವರೆಗೂ ಅವರು ರಾಜ್ಯ ಸಾರಿಗೆ ಸಚಿವರಾಗಿದ್ದರು.

ರಾಜು ವಿರುದ್ಧ ಪ್ರಕರಣ ಸುಮಾರು 33 ವರ್ಷಗಳ ಹಿಂದೆ ನಡೆದ ಘಟನೆಯದ್ದಾಗಿದೆ. ಆಗ ಅವರಿನ್ನೂ ರಾಜಕೀಯ ಕ್ಷೇತ್ರದಲ್ಲಿ ಗಂಭೀರವಾಗಿ ತೊಡಗಿಕೊಳ್ಳದ; ಕೇರಳದ ನ್ಯಾಯಾಲಯಗಳಲ್ಲಿ ಪ್ರಾಕ್ಟೀಸ್‌ ಮಾಡುತ್ತಿದ್ದ ಯುವ ವಕೀಲರಾಗಿದ್ದರು.

ಆಂಡ್ರ್ಯೂ ಸಾಲ್ವಟೋರ್ ಸೆರ್ವೆಲ್ಲಿ ಎಂಬ ಆಸ್ಟ್ರೇಲಿಯಾದ ವ್ಯಕ್ತಿಯೊಬ್ಬ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ. 61.5 ಗ್ರಾಂನಷ್ಟು ಮಾದಕವಸ್ತು ಹಶೀಶನ್ನು ತನ್ನ ಒಳ ಉಡುಪಿನಲ್ಲಿ ಇರಿಸಿಕೊಂಡಿದ್ದ ಎಂಬ ಆರೋಪ ಆತನ ಮೇಲಿತ್ತು. ಮಾದಕವಸ್ತು ಮತ್ತು ಅಮಲು ಪದಾರ್ಥ ನಿಯಂತ್ರಣ ಕಾಯಿದೆ- 1985ರ ಅಡಿ ಆತ ತಪ್ಪಿತಸ್ಥ ಎಂಬುದು ಸಾಬೀತಾಗಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಶಿಕ್ಷೆ ಪ್ರಶ್ನಿಸಿ ಕೇರಳ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸೆರ್ವೆಲ್ಲಿ ತನ್ನ ದೇಹದ ಗಾತ್ರಕ್ಕಿಂತಲೂ ತಾನು ಮಾದಕವಸ್ತು ಬಚ್ಚಿಟ್ಟುಕೊಂಡಿದ್ದೆನೆನ್ನಲಾದ ಒಳ ಉಡುಪು ಚಿಕ್ಕದು ಎಂದು ಪ್ರತಿಪಾದಿಸಿದ. ಆಗ ಆತನ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದು ಶಾಸಕ ಆಂಟೊನಿ ರಾಜು. ಹೈಕೋರ್ಟ್‌ ಸೆರ್ವೆಲ್ಲಿಯನ್ನು ಪ್ರಕರಣದಲ್ಲಿ ದೋಷಮುಕ್ತ ಗೊಳಿಸಿತು.

ಇನ್ನು ನೆಮ್ಮದಿಯ ಜೀವನ ನಡೆಸಬಹುದು ಎಂದು ಲೆಕ್ಕಹಾಕಿ ಸೆರ್ವೆಲ್ಲಿ ಆಸ್ಟ್ರೇಲಿಯಾಕ್ಕೆ ಹೋದ. ಆದರೆ ಆ ನೆಮ್ಮದಿ ಬಹುಕಾಲ ಉಳಿಯಲಿಲ್ಲ.

ಸೆರ್ವೆಲ್ಲಿ ಆಸ್ಟ್ರೇಲಿಯಾದಲ್ಲಿ ಕೊಲೆ ಪ್ರಕರಣವೊಂದರಲ್ಲಿ ಸಿಕ್ಕಿಬಿದ್ದ. ಆತನನ್ನು ವಿಕ್ಟೋರಿಯಾದಲ್ಲಿ ಸೆರೆ ಹಿಡಿಯಲಾಯಿತು. ಜೈಲು ಸೇರಿದ ಅವನ ಬಾಯಿ ಸುಮ್ಮನಿರಲಿಲ್ಲ. ತಾನು ಭಾರತದ ಪ್ರಕರಣವೊಂದರಲ್ಲಿ ಪಾರಾಗಿ ಬಂದ ಕತೆಯನ್ನು ಕೈದಿಗಳಿಗೆ ಬಣ್ಣಿಸತೊಡಗಿದ. ಅದರಲ್ಲೂ ಭಾರತದ ಪೊಲೀಸರು ಮತ್ತು ನ್ಯಾಯಾಲಯಗಳಿಗೆ ಹೇಗೆ ಚಳ್ಳೆಹಣ್ಣು ತಿನ್ನಿಸಿದೆ ಎಂಬುದನ್ನು ಕೊಚ್ಚಿಕೊಳ್ಳತೊಡಗಿದ.

ತಕ್ಷಣವೇ ಎಚ್ಚೆತ್ತುಕೊಂಡ ಆಸ್ಟ್ರೇಲಿಯಾದ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಸಿಬಿ ಭಾರತೀಯ ಅಧಿಕಾರಿಗಳಿಗೆ ಈ ಕುರಿತು ಮಾಹಿತಿ ನೀಡಿತು. ಕೊಲೆ ಪ್ರಕರಣದಲ್ಲಿ ಸರ್ವೆಲ್ಲಿಯ ಸಹ ಆರೋಪಿಯ ವಿಚಾರಣೆ ನಡೆಸಿದಾಗ ಸರ್ವೆಲ್ಲಿಯ ಕುಟುಂಬ ಮತ್ತು ವಕೀಲರು ನ್ಯಾಯಾಲಯದ ಅಧಿಕಾರಿಯೊಬ್ಬರಿಗೆ ಲಂಚ ನೀಡಿದ್ದ ವಿಚಾರ ಬಯಲಾಯಿತು. ಹಾಗೆ ಲಂಚ ಪಡೆದ ಅಧಿಕಾರಿ ಒಳ ಉಡುಪನ್ನು ಬದಲಿಸಿದ್ದ ಎನ್ನುವುದು ತಿಳಿದು ಬಂದಿತು.

ಈ ಹಿನ್ನೆಲೆಯಲ್ಲಿ 1994ರಲ್ಲಿ ರಾಜು ಹಾಗೂ ಕೋರ್ಟ್‌ ಗುಮಾಸ್ತರಾದ ಕೆ ಜೆ ಜೋಸ್‌ ವಿರುದ್ಧ ಪ್ರಕರಣ ದಾಖಲಾಗಿ 12 ವರ್ಷಗಳ ನಂತರ, 2006 ರಲ್ಲಿ, ಸಹಾಯಕ ಪೊಲೀಸ್ ಆಯುಕ್ತರು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದರು. ಆದರೆ, ಹೈಕೋರ್ಟ್ ಕಳೆದ ವರ್ಷ ಮಾರ್ಚ್‌ನಲ್ಲಿ ತಾಂತ್ರಿಕ ಆಧಾರದ ಮೇಲೆ ವಿಚಾರಣಾ ನ್ಯಾಯಾಲಯದ ವಿಚಾರಣೆಯನ್ನು ರದ್ದುಗೊಳಿಸಿತ್ತು. ಅದರೆ, ಇದೇ ವೇಳೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 195 (1) (ಬಿ) ನಿಬಂಧನೆಗಳ ಪ್ರಕಾರ ಕಾನೂನು ಕ್ರಮ ಮುಂದುವರಿಸಲು ತನ್ನ ಆದೇಶ ಅಡ್ಡಿಪಡಿಸುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿತು.

ಅಲ್ಲದೆ ವಿಚಾರಣೆ ಆರಂಭಿಸಲು ತನ್ನ ರಿಜಿಸ್ಟ್ರಿಗೆ ಆದೇಶಿಸಿತು ಹೀಗಾಗಿ ತಿರುವನಂತಪುರದ ವಿಚಾರಣಾ ನ್ಯಾಯಾಲಯ ರಾಜು ವಿರುದ್ಧದ ಕ್ರಿಮಿನಲ್ ವಿಚಾರಣೆಯನ್ನು ಪುನರಾರಂಭಿಸಿತು. ವಿಚಾರಣೆ ಪ್ರಶ್ನಿಸಿ ರಾಜು ಅವರು ವಕೀಲ ದೀಪಕ್ ಪ್ರಕಾಶ್ ಅವರ ಮೂಲಕ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದರು. ಆದರೆ, ಸುಪ್ರೀಂ ಕೋರ್ಟ್‌ 2024ರಲ್ಲಿ ರಾಜು ಅವರ ಅರ್ಜಿಯನ್ನು ವಜಾಗೊಳಿಸಿ, ಅಧಿಕೃತವಾಗಿ ಅವರ ವಿರುದ್ಧ ಕ್ರಿಮಿನಲ್‌ ವಿಚಾರಣೆ ಆರಂಭಕ್ಕೆ ಹಸಿರು ನಿಶಾನೆ ನೀಡಿತ್ತು.

ಈ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಪೂರೈಸಿ ರಾಜು ಅವರು ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದೆ.