ED and B Nagendra 
ಸುದ್ದಿಗಳು

ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಪ್ರಕರಣ: ಮಾಜಿ ಸಚಿವ ನಾಗೇಂದ್ರ ನ್ಯಾಯಾಂಗ ಬಂಧನ ವಿಸ್ತರಣೆ

Bar & Bench

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ₹95 ಕೋಟಿ ಹಣ ವರ್ಗಾಯಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್‌ 28ರವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ವಿಸ್ತರಿಸಿದೆ.

ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ಅವರ ನ್ಯಾಯಾಂಗ ಬಂಧನ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರ ಮುಂದೆ ಹಾಜರುಪಡಿಸಲಾಯಿತು.

ಪ್ರಕರಣದ ಸಂಬಂಧ ಮಾಹಿತಿ ಪಡೆದ ನ್ಯಾಯಾಧೀಶರು ನಾಗೇಂದ್ರ ಅವರ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನ ಮತ್ತೆ ವಿಸ್ತರಿಸಿದರು.

ಜಾರಿ ನಿರ್ದೇಶನಾಲಯವು ನಾಗೇಂದ್ರ ಸೇರಿ ಹಲವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯಿದೆ ಸೆಕ್ಷನ್‌ 3 ಮತ್ತು 4ರ ಅಡಿ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸುತ್ತಿದೆ. ನಿನ್ನೆಯಷ್ಟೇ ಪ್ರಕರಣದ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅವರನ್ನು ವಿಶೇಷ ನ್ಯಾಯಾಲಯವು ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿದೆ.