H D Revanna and Karnataka HC 
ಸುದ್ದಿಗಳು

ಸಂತ್ರಸ್ತೆ ಅಪಹರಣ ಪ್ರಕರಣ: ಶಾಸಕ ರೇವಣ್ಣ ಜಾಮೀನು ಆದೇಶ ಎತ್ತಿ ಹಿಡಿದ ಹೈಕೋರ್ಟ್‌; ಆರು ಆರೋಪಿಗಳಿಗೂ ಜಾಮೀನು ಮಂಜೂರು

Bar & Bench

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣರಿಂದ ಅತ್ಯಾಚಾರಕ್ಕೆ ಒಳಗಾಗಿರುವ ಸಂತ್ರಸ್ತೆ ಅಪಹರಣದ ಪ್ರಕರಣದಲ್ಲಿನ ಮೊದಲನೇ ಆರೋಪಿ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣಗೆ ವಿಚಾರಣಾಧೀನ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ಎತ್ತಿ ಹಿಡಿದಿದೆ.

ಜೆಡಿಎಸ್‌ ಮುಖಂಡ ಎಚ್‌ ಡಿ ರೇವಣ್ಣಗೆ ವಿಚಾರಣಾಧೀನ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ವಿಶೇಷ ತನಿಖಾ ದಳ (ಎಸ್‌ಐಟಿ) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾ ಮಾಡಿದೆ. ಆಗಸ್ಟ್‌ 1ರಂದು ವಾದ ಆಲಿಸಿ, ಕಾಯ್ದಿರಿಸಿದ್ದ ಆದೇಶವನ್ನು ಇಂದು ನ್ಯಾಯಾಲಯ ಪ್ರಕಟಿಸಿತು.

ಈ ನಡುವೆ ಪೀಠವು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ 364ಎ ಅಡಿ ಸಂಜ್ಞೇ ಪರಿಗಣಿಸಿಲ್ಲವೇ? ಎಂದು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರನ್ನು ಪ್ರಶ್ನಿಸಿತು. ಅದಕ್ಕೆ ಜಗದೀಶ್‌ ಅವರು “ಇಲ್ಲ. ವಿಚಾರಣಾಧೀನ ನ್ಯಾಯಾಲಯದ ಆದೇಶವನ್ನು ನಾವು ಪ್ರಶ್ನಿಸುತ್ತಿದ್ದೇವೆ. ಅಧೀನ ನ್ಯಾಯಾಲಯದ ಆ ಆದೇಶವು ಆರೋಪ ಮುಕ್ತ ಆದೇಶದಿಂತಿದೆ” ಎಂದರು. ಆಗ ಪೀಠವು ನೋಡೋಣ ಬಿಡಿ ಎಂದಿತು. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

Justice M Nagaprasanna

ಎಸ್‌ಐಟಿ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರಾದ ಪ್ರೊ. ರವಿವರ್ಮ ಕುಮಾರ್‌ ಅವರು “ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಕೆಯಾಗಿದ್ದು, ರೇವಣ್ಣಗೆ ಜಾಮೀನು ನೀಡುವಾಗ ವಿಚಾರಣಾಧೀನ ನ್ಯಾಯಾಲಯ ಪ್ರಮಾದ ಎಸಗಿದೆ. ಸಂತ್ರಸ್ತೆ ಮಹಿಳೆಯರನ್ನು ಅಪಹರಿಸಿ ಏಳನೇ ಆರೋಪಿಯ ಮನೆಯಲ್ಲಿ ಇಡಲಾಗಿತ್ತು. ಆಕೆಗೂ ಆತನಿಗೂ ಯಾವುದೇ ಸಂಬಂಧ ಇರಲಿಲ್ಲ. ಆ ಸ್ಥಳದಲ್ಲಿ ಮಹಜರ್‌ ನಡೆಸಿದಾಗ, ಆಕೆಯ ಕೂದಲು ದೊರೆತಿದೆ” ಎಂದಿದ್ದರು.

ಮುಂದುವರಿದು, “ಸಂತ್ರಸ್ತ ಮಹಿಳೆಯನ್ನು ಒತ್ತೆ ಇಟ್ಟಿದ್ದ ಏಳನೇ ಆರೋಪಿಯು ಈ ಹಿಂದೆ ರೇವಣ್ಣಗೆ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದರು ಎಂಬುದು ತನಿಖೆಯ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ. ಹೀಗಾಗಿ, ಅವರ ಜಾಮೀನು ರದ್ದುಪಡಿಸಬೇಕು” ಎಂದು ಕೋರಿದ್ದರು.

“ಸಂತ್ರಸ್ತೆಯು ಕೈಮುಗಿದು ಮಾಜಿ ಸಂಸದ ಪ್ರಜ್ವಲ್‌ ಅನ್ನು ಅತ್ಯಾಚಾರ ಮಾಡದಂತೆ ಕೋರಿದ್ದಾರೆ. ಇಂಥ ಆರೋಪಿಯನ್ನು ರಕ್ಷಿಸಲು ರೇವಣ್ಣ ಅವರು ಸಂತ್ರಸ್ತೆಯನ್ನು ಅಪಹರಣ ಮಾಡಿಸಿದ್ದಾರೆ. ಇದು ಅತ್ಯಂತ ಘೋರ ಕೃತ್ಯವಾಗಿದೆ” ಎಂದು ಆಪಾದಿಸಿದ್ದರು.

ರೇವಣ್ಣ ಪರವಾಗಿ ವಾದಿಸಿದ್ದ ಹಿರಿಯ ವಕೀಲ ಸಿ ವಿ ನಾಗೇಶ್‌ ಅವರು “ಇಡೀ ಘಟನೆ ನೋಡಿದರೆ ಇಲ್ಲಿ ಐಪಿಸಿ ಸೆಕ್ಷನ್‌ 364ಎ ಅನ್ವಯಿಸುವುದಿಲ್ಲ. ಪ್ರಕರಣದಲ್ಲಿ ಯಾವುದೇ ಆರೋಪಿಯು ಸಂತ್ರಸ್ತೆಗೆ ಯಾವುದೇ ಹಾನಿ ಮಾಡಿಲ್ಲ. ಬೆದರಿಕೆ ಹಾಕಿಲ್ಲ ಎಂಬುದು ವಿಚಾರಣಾಧೀನ ನ್ಯಾಯಾಲಯ ಸ್ಪಷ್ಟವಾಗಿ ಆದೇಶದಲ್ಲಿ ದಾಖಲಿಸಿದೆ” ಎಂದಿದ್ದರು. ರೇವಣ್ಣ ಪರವಾಗಿ ವಕೀಲ ಜಿ ಅರುಣ್‌ ವಕಾಲತ್ತು ಹಾಕಿದ್ದರು.

ಸಂತ್ರಸ್ತೆಯ ಅಪಹರಣ ಪ್ರಕರಣದ ಸಂಬಂಧ ಮೈಸೂರಿನ ಕೆ ಆರ್‌ ನಗರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಎಚ್‌ ಡಿ ರೇವಣ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅದು ವಿಚಾರಣೆಗೆ ಬಾಕಿ ಇದೆ. ಈ ನಡುವೆ, ಎಸ್‌ಐಟಿಯು ಈ ಪ್ರಕರಣದಲ್ಲಿ ಆರೋಪ ಪಟ್ಟಿಯನ್ನೂ ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಿದೆ.

 ಇತರೆ ಆರೋಪಿಗಳಿಗೂ ಜಾಮೀನು ಮಂಜೂರು

ಸಂತ್ರಸ್ತೆ ಅಪಹರಣದ ಪ್ರಕರಣದಲ್ಲಿ ಇತರೆ ಆರೋಪಿಗಳಾಗಿರುವ ಹಾಸನದ ಸತೀಶ್‌ ಬಾಬು ಅಲಿಯಾಸ್‌ ಸತೀಶ್‌ ಬಾಬಣ್ಣ, ಎಚ್‌ ಕೆ ಸುಜಯ್‌, ಎಚ್‌ ಎನ್‌ ಮಧು, ಎಸ್‌ ಟಿ ಕೀರ್ತಿ, ಎಚ್‌ ಡಿ ಮಾಯು ಗೌಡ, ಕೆ ಎ ರಾಜಗೋಪಾಲ್‌ ಅವರ ಜಾಮೀನು ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ಪುರಸ್ಕರಿಸಿದೆ.

“ಎಲ್ಲಾ ಜಾಮೀನು ಅರ್ಜಿಗಳನ್ನು ಪುರಸ್ಕರಿಸಲಾಗಿದೆ. 2ರಿಂದ 7ನೇ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು. ಎಲ್ಲಾ ಆರೋಪಿಗಳು ತಲಾ 5 ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್‌ ಮತ್ತು ಇತರೆ ಷರತ್ತುಗಳನ್ನು ಪೂರೈಸಬೇಕು” ಎಂದು ನ್ಯಾಯಾಲಯವು ಆದೇಶಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಇದರೊಂದಿಗೆ ಪ್ರಕರಣದಲ್ಲಿನ ಒಂಭತ್ತು ಆರೋಪಿಗಳ ಪೈಕಿ ಎಂಟು ಮಂದಿ ಜಾಮೀನು ಪಡೆದಂತಾಗಿದೆ. ಭವಾನಿ ರೇವಣ್ಣ ಅವರ ಕಾರು ಚಾಲಕ ಮಾತ್ರ ಇನ್ನೂ ತಲೆಮರೆಸಿಕೊಂಡಿದ್ದಾನೆ.

“ಆರೋಪಿಗಳೆಲ್ಲರೂ ಒಂದಲ್ಲಾ ಒಂದು ರೀತಿಯಲ್ಲಿ ರಕ್ತ ಸಂಬಂಧಿಗಳಾಗಿದ್ದು, ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಅವರೆಲ್ಲರೂ ರಾಜಕೀಯವಾಗಿ ಒಂದಲ್ಲಾ ಒಂದು ಸ್ಥಾನಮಾನ ಹೊಂದಿದವರೇ ಆಗಿದ್ದಾರೆ” ಎಂದು ವಾದಿಸಿದ್ದ ಪ್ರಾಸಿಕ್ಯೂಷನ್‌ ವಾದವನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ತಿರಸ್ಕರಿಸಿದ್ದಾರೆ.

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಸಿ ಎನ್‌ ಜಾಧವ್‌, ವಕೀಲರಾದ ಎಸ್‌ ಬಸವರಾಜ, ಗಣೇಶ್‌ ಭಟ್‌ ವಜ್ರಾಲಿ, ವಿ ಎಸ್‌ ಹೆಗಡೆ ವಾದಿಸಿದ್ದರು.