Basanagouda R Patil, D K Shivakumar, CBI and Karnataka HC
Basanagouda R Patil, D K Shivakumar, CBI and Karnataka HC 
ಸುದ್ದಿಗಳು

ಡಿಕೆಶಿ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆತ: ವಿಸ್ತೃತ ಪೀಠಕ್ಕೆ ಪ್ರಕರಣದ ವಿಚಾರಣೆ ಶಿಫಾರಸ್ಸು

Bar & Bench

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಕುರಿತಾದ ತನಿಖೆಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದಿರುವ ಪ್ರಕರಣದ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ಕರ್ನಾಟಕ ಹೈಕೋರ್ಟ್‌ ಶಿಫಾರಸ್ಸು ಮಾಡಿದೆ.

ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿರುವ ಅರ್ಜಿ ಹಾಗೂ ರಾಜ್ಯ ಸರ್ಕಾರದ ಕ್ರಮ ಮತ್ತು ಲೋಕಾಯುಕ್ತ ತನಿಖೆಗೆ ಒಪ್ಪಿಸಿರುವುದಕ್ಕೆ ತಡೆ ಕೋರಿ ಸ್ವತಃ ಸಿಬಿಐ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.

ಯತ್ನಾಳ್‌ ಪರ ವಕೀಲ ವೆಂಕಟೇಶ್‌ ದಳವಾಯಿ, ಸಿಬಿಐ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌ ಮತ್ತು ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟ ಅವರ ವಾದವನ್ನು ಒಂದು ತಾಸಿಗೂ ಅಧಿಕ ಕಾಲ ಆಲಿಸಿದ ಪೀಠವು, ಕರ್ನಾಟಕ ಹೈಕೋರ್ಟ್‌ ಕಾಯಿದೆ ಸೆಕ್ಷನ್‌ 8ರ ಪ್ರಕಾರ ತಮ್ಮ ಇಚ್ಛೆಯ ಪೀಠ ರಚಿಸಲು ಪ್ರಕರಣದ ದಾಖಲೆಗಳನ್ನು ಮುಖ್ಯ ನ್ಯಾಯಮೂರ್ತಿ ಅವರ ಮುಂದೆ ಮಂಡಿಸಬೇಕು. ಇದರಿಂದ ಏಕಕಾಲಕ್ಕೆ ಪ್ರಕರಣವು ಇತ್ಯರ್ಥವಾಗಲಿದೆ. ಸಿಜೆ ಅವರಿಂದ ರಚಿಸಲ್ಪಟ್ಟ ಪೀಠವು ಯುದ್ದೋಪಾದಿಯಲ್ಲಿ ಪ್ರಕರಣವನ್ನು ನಿರ್ಧರಿಸಬೇಕು ಎಂಬುದಕ್ಕೆ ಪಕ್ಷಕಾರರ ಸಹಮತ ಇದೆ. ಈ ನ್ಯಾಯಾಲಯವು ಅದೇ ಅಭಿಪ್ರಾಯ ಹೊಂದಿದೆ ಎಂದು ಆದೇಶಿಸಿತು.

ಮುಂದುವರಿದು, ವಿಸ್ತೃತ ಪೀಠ ಪ್ರಕರಣ ತೀರ್ಮಾನಿಸುವವರೆಗೆ ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂಬ ಸಿಬಿಐ ವಕೀಲರ ಕೋರಿಕೆ ಮತ್ತು ಸಿಬಿಐ ಸಹ ಯಾವುದೇ ಕ್ರಮಕ್ಕೆ ಮುಂದಾಗುವಂತಿಲ್ಲ ಎಂಬ ಅಡ್ವೊಕೇಟ್‌ ಜನರಲ್‌ ಮನವಿಯನ್ನು ನ್ಯಾಯಾಲಯವು ಆದೇಶದಲ್ಲಿ ದಾಖಲಿಸಿತು.

ಇದಕ್ಕೂ ಮುನ್ನ, ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಎರಡೂ ಅರ್ಜಿಗಳನ್ನು ವಿರೋಧಿಸಿದ್ದು, ಎರಡೂ ಅರ್ಜಿಗಳ ಅರ್ಜಿದಾರರಿಗೆ ಅರ್ಜಿ ಸಲ್ಲಿಸುವ ಅಧಿಕಾರ ಇಲ್ಲ. 2013ರ ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರಕಾರ ಮೂರನೇ ವ್ಯಕ್ತಿಯು ಕ್ರಿಮಿನಲ್‌ ಪ್ರಕ್ರಿಯೆಯಲ್ಲಿ ಮೂಗು ತೂರಿಸುವಂತಿಲ್ಲ” ಎಂದರು.

ದಳವಾಯಿ ಮತ್ತು ಪ್ರಸನ್ನ ಕುಮಾರ್‌ ಅವರು “ದೆಹಲಿ ವಿಶೇಷ ಪೊಲೀಸ್‌ ಸ್ಥಾಪನಾ ಕಾಯಿದೆ (ಡಿಎಸ್‌ಪಿಇ) ಸೆಕ್ಷನ್‌ 6ರ ಅಡಿ ಒಮ್ಮೆ ರಾಜ್ಯ ಸರ್ಕಾರವು ಸಿಬಿಐ ತನಿಖೆಗೆ ಅನುಮತಿಸಿದ ಮೇಲೆ, ಅದನ್ನು ಹಿಂಪಡೆಯಲಾಗದು. ಯಾವುದೇ ಸಂದರ್ಭದಲ್ಲೂ ಪೂರ್ವಾನ್ವಯವಾಗುವಂತೆ ಆದೇಶ ಹಿಂಪಡೆಯಲಾಗದು. ಸಿಬಿಐ ತನಿಖೆ ಮುಂದುವರಿಸಲು, ಕಾನೂನಿನ ಪ್ರಕಾರ ಅಂತಿಮ ವರದಿ ಸಲ್ಲಿಸಲು ಅನುಮತಿಸಬೇಕು” ಎಂದು ಕೋರಿದರು.

2023ರ ನವೆಂಬರ್‌ 28ರಂದು ಸಿಬಿಐಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರವು ಹಿಂಪಡೆದಿತ್ತು. ಇದರ ಆಧಾರದಲ್ಲಿ ಡಿ ಕೆ ಶಿವಕುಮಾರ್‌ ಅವರು ಮೇಲ್ಮನವಿ ಹಿಂಪಡೆದಿದ್ದರು. ಈ ಮಧ್ಯೆ, ಡಿ ಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರವು 2023ರ ಡಿಸೆಂಬರ್‌ 24 ಮತ್ತು 26ರ ತಿದ್ದುಪಡಿ ಆದೇಶ ಮೂಲಕ ಲೋಕಾಯುಕ್ತ ಪೊಲೀಸರಿಗೆ ವಹಿಸಿದೆ. ಇದನ್ನು ಸಿಬಿಐ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ.