Basanagouda R Patil, D K Shivakumar, CBI and Karnataka HC
Basanagouda R Patil, D K Shivakumar, CBI and Karnataka HC 
ಸುದ್ದಿಗಳು

ಡಿಕೆಶಿ ವಿರುದ್ದದ ಸಿಬಿಐ ತನಿಖೆಗೆ ಅನುಮತಿ ಹಿಂಪಡೆತ: ಯತ್ನಾಳ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ; ಕಾಲಾವಕಾಶ ಕೋರಿದ ಎಜಿ

Bar & Bench

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಆದೇಶವನ್ನು ಆಕ್ಷೇಪಿಸಿ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ಶುಕ್ರವಾರ ಹೈಕೋರ್ಟ್‌ನಲ್ಲಿ ನಡೆಯಿತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಅರ್ಜಿಯ ಊರ್ಜಿತತ್ವದ ಬಗ್ಗೆ ಮುಂದಿನ ವಿಚಾರಣೆ ವೇಳೆ ವಾದ ಮಂಡಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತು.

ಅರ್ಜಿ ವಿಚಾರಣೆಯ ಆರಂಭದಲ್ಲಿ ಪೀಠವು ಅರ್ಜಿದಾರರು ಹೇಗೆ ಇದರಿಂದ ಬಾಧಿತರು ಎಂದು ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿತು. ಇದಕ್ಕೆ ಅರ್ಜಿದಾರರ ವಾದಿಸಿದ ವೆಂಕಟೇಶ್ ದಳವಾಯಿ ಅವರು “ವೈಯಕ್ತಿಕವಾಗಿ ಬಾದಿತರಾಗದಿದ್ದರೂ ಯಾರು ಬೇಕಾದರೂ ಕ್ರಿಮಿನಲ್‌ ಕಾನೂನಿಗೆ ಚಾಲನೆ ನೀಡಬಹುದು” ಎಂದರು. ಇದಕ್ಕೆ ಪೀಠವು ಸಹಮತಿಸಿತು.

ಅಂತಿಮವಾಗಿ ಪೀಠವು, "ದಳವಾಯಿ ಅವರು ಕೆಲ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಈ ಎಲ್ಲಾ ತೀರ್ಪುಗಳನ್ನು ಅಧ್ಯಯನ ಮಾಡಿ ಉತ್ತರಿಸಲು ಅಡ್ವೊಕೇಟ್‌ ಜನರಲ್‌ ಅವರು ಸಮಯ ಕೋರಿದ್ದಾರೆ. ಹೀಗಾಗಿ, 2024ರ ಜನವರಿ 5ರಂದು ಎಜಿ ಅವರು ಅರ್ಜಿಯ ಊರ್ಜಿತತ್ವಕ್ಕೆ ಸಂಬಂಧಿಸಿದಂತೆ ವಿಸ್ತೃತವಾಗಿ ಉತ್ತರಿಸಬೇಕು" ಎಂದು ಹೇಳಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: 2019ರಲ್ಲಿ ಬಿಜೆಪಿ ಸರ್ಕಾರವು ಡಿ ಕೆ ಶಿವಕುಮಾರ್‌ ವಿರುದ್ಧ ಅಕ್ರಮ ಹಣ ಗಳಿಕೆ ಪ್ರಕರಣದ ತನಿಖೆಗೆ ಸಿಬಿಐಗೆ ಅನುಮತಿಸಿತ್ತು. ಇದನ್ನು ಪ್ರಶ್ನಿಸಿ ಡಿ ಕೆ ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾ ಮಾಡಿತ್ತು. ಆನಂತರ ಇದನ್ನು ಪ್ರಶ್ನಿಸಿ ಡಿ ಕೆ ಶಿವಕುಮಾರ್‌ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು. ಈ ನಡುವೆ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರವು ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನವೆಂಬರ್‌ 28ರಂದು ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ಡಿ ಕೆ ಶಿವಕುಮಾರ್‌ ಮೇಲ್ಮನವಿ ಹಿಂಪಡೆದಿದ್ದರು. ಹೀಗಾಗಿ, ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿತ್ತು. ಇದನ್ನು ಆಕ್ಷೇಪಿಸಿ ಬಿಜೆಪಿ ಶಾಸಕ ಯತ್ನಾಳ್‌ ಅವರು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.