Yogesh Gowda Facebook
ಸುದ್ದಿಗಳು

ಯೋಗೀಶ್‌ ಗೌಡ ಕೊಲೆ ಮರು ವಿಚಾರಣೆಗೆ ಆಕ್ಷೇಪ: ಆರು ಆರೋಪಿಗಳ ಅರ್ಜಿ ವಜಾ ಮಾಡಿದ ಹೈಕೋರ್ಟ್‌

Bar & Bench

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ವಿಚಾರಣೆ ನಡೆಯಬೇಕು ಎಂಬ ಸಿಬಿಐ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಲಾದ ಎರಡು ಅರ್ಜಿಗಳನ್ನು ಶನಿವಾರ ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ.

ಆರೋಪಿಗಳಾದ ವಿಕ್ರಂ ಬಳ್ಳಾರಿ, ಕೀರ್ತಿಕುಮಾರ ಬಸವರಾಜ ಕುರಹಟ್ಟಿ, ಸಂದೀಪ್‌ ಸೌದತ್ತಿ, ವಿನಾಯಕ ಕಟಗಿ, ಮಹಾಬಲೇಶ್ವರ ಹೊಂಗಲ್‌ ಅಲಿಯಾಸ್‌ ಮುದುಕ ಹಾಗೂ ಬಸವರಾಜ ಮುತ್ತಗಿ ಪ್ರತ್ಯೇಕವಾಗಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಪೂರೈಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇಂದು ಪ್ರಕಟಿಸಿತು.

ಸಿಆರ್‌ಪಿಸಿ 230 ಮತ್ತು 231ರ ಅನುಸಾರ ಪ್ರಕರಣದ ಮರು ವಿಚಾರಣೆಯನ್ನು ನಿಗದಿಪಡಿಸಿ ಸಿಬಿಐ ವಿಶೇಷ ನ್ಯಾಯಾಲಯ 2024ರ ಜೂನ್‌ 28ರಂದು ಆದೇಶಿಸಿತ್ತು. ಅರ್ಜಿದಾರರು ಇದಕ್ಕೆ ತಕರಾರು ಸಲ್ಲಿಸಿದ್ದರು. ಆದರೆ, ವಿಶೇಷ ನ್ಯಾಯಾಲಯ ಈ ತಕರಾರನ್ನು ಮಾನ್ಯ ಮಾಡಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈಗ ಹೈಕೋರ್ಟ್‌ ಆರೋಪಿಗಳ ಅರ್ಜಿ ವಜಾಗೊಳಿಸಿದೆ. ಅಂತೆಯೇ, ಈ ಆದೇಶದಿಂದಾಗಿ ಪ್ರಕರಣದಲ್ಲಿನ ಎಲ್ಲ ಆರೋಪಿಗಳು ಸಿಬಿಐ ವಿಚಾರಣಾಧೀನ ನ್ಯಾಯಾಲಯದ ಹೊಸ ವಿಚಾರಣಾ ಪ್ರಕ್ರಿಯೆಗೆ ಒಳಗಾಗಲಿದ್ದಾರೆ.

ಮರು ವಿಚಾರಣೆ ನಡೆಸಿದರೆ ಕಾನೂನು ತೊಡಕು ಉಂಟಾಗುತ್ತದೆ ಎಂಬ ಅರ್ಜಿದಾರರ ವಾದವನ್ನು ಅಲ್ಲಗಳೆದಿದ್ದ ಸಿಬಿಐ “ಈ ಪ್ರಕರಣದಲ್ಲಿ 1–6ನೇ ಆರೋಪಿಗಳ ಬಗ್ಗೆ ಅಂದಿನ ರಾಜ್ಯ ಸರ್ಕಾರ ಆರೋಪ ಪಟ್ಟಿ ಸಲ್ಲಿಸಿತ್ತು. ಇದರಲ್ಲಿ ಶಾಸಕ ವಿನಯ ಕುಲಕರ್ಣಿ ಹೆಸರು ಕೈಬಿಡಲಾಗಿತ್ತು. ಆದರೆ, ನಂತರ ಸಿಬಿಐ ಸಲ್ಲಿಸಿದ್ದ ಆರೋಪ ಪಟ್ಟಿಯಲ್ಲಿ 7–21ರವರೆಗೆ ಹೊಸ ಆರೋಪಿಗಳನ್ನು ಸೇರ್ಪಡೆ ಮಾಡಲಾಗಿದೆ” ಎಂದು ಹೇಳಿತ್ತು.

ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್‌ 15ರಂದು ಯೋಗೀಶ್‌ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.

ಸಿಬಿಐ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನ ಕುಮಾರ್‌, ಅರ್ಜಿದಾರರ ಪರ ಹಿರಿಯ ವಕೀಲ ಸಿ ವಿ ನಾಗೇಶ್‌ ವಾದ ಮಂಡಿಸಿದ್ದರು. ವಕೀಲ ಎಸ್‌ ಸುನಿಲ್ ಕುಮಾರ್‌ ಮತ್ತು ಆರ್‌ ನಾಗೇಂದ್ರ ನಾಯಕ್‌ ವಕಾಲತ್ತು ವಹಿಸಿದ್ದರು.