ಧಾರವಾಡದ ಬಿಜೆಪಿ ಮುಖಂಡ ಯೊಗೀಶ್ ಗೌಡ ಕೊಲೆ ಪ್ರಕರಣದಲ್ಲಿ ತಮಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿರುವ ಆದೇಶ ಅಮಾನತ್ತಿನಲ್ಲಿಟ್ಟು, ಜಾಮೀನು ನೀಡಬೇಕೆಂಬ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಅವರ ಮಧ್ಯಂತರ ಮನವಿ ಕುರಿತ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ಗುರುವಾರ ತೀರ್ಪು ಕಾಯ್ದರಿಸಿದೆ.
ಯೊಗೀಶ್ ಗೌಡ ಕೊಲೆ ಪ್ರಕರಣದಲ್ಲಿ ತಮಗೆ ಜೀವಾವಧಿ ಶಿಕ್ಷೆ ವಿಧಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿಗಳ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್ ಮತ್ತು ಜಿ ಬಸವರಾಜ ಅವರ ವಿಭಾಗೀಯ ಪೀಠವು ಆದೇಶ ಕಾಯ್ದಿರಿಸಿದೆ.
ಜೀವಾವಧಿ ಶಿಕ್ಷೆಗೆ ಒಳಗಾದ ಕಾರಣ ಸದ್ಯ ವಿನಯ್ ಕುಲಕರ್ಣಿ ಅವರು ತಮ್ಮ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಒಂದು ವೇಳೆ ಶಿಕ್ಷೆಗೆ ಹೈಕೋರ್ಟ್ ತಡೆ ನೀಡಿದರೆ ಮಾತ್ರ ಶಾಸಕ ಸ್ಥಾನ ಮರಳಲಿದೆ. ಇದರಿಂದ ಹೈಕೋರ್ಟ್ ಆದೇಶವು ವಿನಯ್ ಕುಲಕರ್ಣಿ ಶಾಸಕ ಸ್ಥಾನದ ಭವಿಷ್ಯ ನಿರ್ಧರಿಸಲಿದೆ.
2016ರಲ್ಲಿ ನಡೆದಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ಸತ್ರ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳನ್ನು 2026ರ ಏಪ್ರಿಲ್ 15ರಂದು ಅಪರಾಧಿಗಳು ಎಂದು ನಿರ್ಧರಿಸಿ, ಏಪ್ರಿಲ್ 17ರಂದು ವಿನಯ್ ಮತ್ತು ಇಂಡಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.