ಲಂಚ ಪ್ರಕರಣ: ಐಎಎಸ್‌ ಅಧಿಕಾರಿ ಮಂಜುನಾಥ್‌ ಬಂಧನ

ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ನಿರ್ದೇಶಕ ಹುದ್ದೆಗೆ ಮೂರು ದಿನಗಳ ಹಿಂದೆಯಷ್ಟೇ ವರ್ಗಾವಣೆಗೊಂಡಿದ್ದ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಮಂಜುನಾಥ್‌ ಅವರನ್ನು ಲಂಚ ಪ್ರಕರಣದಲ್ಲಿ ಮೂರನೇ ಆರೋಪಿ ಎಂದು ಉಲ್ಲೇಖಿಸಲಾಗಿದೆ.
Arrest
Arrest

ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಹಾಗೂ ಹಾಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ (ಐಸಿಡಿಎಸ್‌) ನಿರ್ದೇಶಕ ಜೆ ಮಂಜುನಾಥ್‌ ಅವರನ್ನು ಭ್ರಷ್ಟಾಚಾರ ನಿಗ್ರಹ ದಳವು ಸೋಮವಾರ ಬಂಧಿಸಿದೆ.

ಬೆಂಗಳೂರಿನ ಯಶವಂತಪುರದಲ್ಲಿ ಎಸಿಬಿ ಡಿವೈಎಸ್‌ಪಿ ಕೆ ರವಿಶಂಕರ್‌ ಅವರ ತಂಡವು ಮಧ್ಯಾಹ್ನ ಮಂಜುನಾಥ್‌ ಅವರನ್ನು ಬಂಧಿಸಿತು. ಮೂರು ದಿನಗಳ ಹಿಂದಷ್ಟೇ ಮಂಜುನಾಥ್‌ ಅವರನ್ನು ಬೆಂಗಳೂರು ಜಿಲ್ಲಾಧಿಕಾರಿ ಹುದ್ದೆಯಿಂದ ಐಸಿಡಿಎಸ್‌ ನಿರ್ದೇಶಕರ ಹುದ್ದೆಗೆ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು.

ಆನೇಕಲ್‌ ತಾಲ್ಲೂಕಿನ ಕೂಡ್ಲು ಗ್ರಾಮದ 38ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದಂತೆ ಅನುಕೂಲಕರ ಆದೇಶ ಮಾಡಲು ಅಜಂ ಪಾಷಾ ಅವರಿಂದ ಐದು ಲಕ್ಷ ರೂಪಾಯಿ ಪಡೆಯುತ್ತಿದ್ದಾಗ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯ ವ್ಯವಸ್ಥಾಪಕ ಮಹೇಶ್‌ ಮತ್ತು ನ್ಯಾಯಾಲಯ ವಿಭಾಗದ ಸಹಾಯಕ ಚೇತನ್‌ ಕುಮಾರ್‌ ಅಲಿಯಾಸ್‌ ಚಂದ್ರ ಅವರನ್ನು ಮೇ 21ರಂದು ಎಸಿಬಿ ಬಂಧಿಸಿತ್ತು.

ಈ ಪ್ರಕರಣದಲ್ಲಿ ಮಂಜುನಾಥ್‌ ಅವರನ್ನು ಮೂರನೇ ಆರೋಪಿ ಎಂದು ಉಲ್ಲೇಖಿಸಲಾಗಿದೆ.

Related Stories

No stories found.
Kannada Bar & Bench
kannada.barandbench.com