ಜೈಲಿನಲ್ಲಿ ನಟ ದರ್ಶನ್‌ಗೆ ಸೌಲಭ್ಯ ನಿರಾಕರಣೆ: ಕಾರಾಗೃಹದ ಅಧೀಕ್ಷಕರಿಗೆ ಖುದ್ದು ಹಾಜರಾತಿಗೆ ನ್ಯಾಯಾಲಯ ನಿರ್ದೇಶನ

ಯಾವುದೇ ಸೌಲಭ್ಯವನ್ನೂ ಜೈಲು ಅಧಿಕಾರಿಗಳು ಕಲ್ಪಿಸಿಲ್ಲ. 25 ಅಡಿ ಉದ್ದ ಮತ್ತು 3 ಅಡಿ ಅಗಲವಿರುವ ಪ್ಯಾಸೇಜ್‌ನಲ್ಲಿ ವಾಕಿಂಗ್‌ ಮಾಡಲು ಅನುಮತಿಸಿದ್ದಾರೆ. ಆದರೆ, ಈ ಜಾಗದಲ್ಲಿ ಸೂರ್ಯನ ಬೆಳಕು ಸಹ ಬೀಳುವುದಿಲ್ಲ ಎಂದು ತಿಳಿಸಿದ ದರ್ಶನ್‌.
Darshan, Actor
Darshan, Actor
Published on

ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿಯಾದ ನಟ ದರ್ಶನ್‌ಗೆ ಕಾರಾಗೃಹಗಳ ಕೈಪಿಡಿ ಅನುಸಾರ ಕನಿಷ್ಠ ಸೌಲಭ್ಯ ಕಲ್ಪಿಸಲು ನಿರ್ದೇಶಿಸಿ ಹೊರಡಿಸಿರುವ ತನ್ನ ಆದೇಶ ಪಾಲಿಸದ್ದಕ್ಕೆ ವಿವರಣೆ ನೀಡಲು ಸೆಪ್ಟೆಂಬರ್‌ 30ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗಬೇಕು ಎಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ಬೆಂಗಳೂರಿನ 57ನೇ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ನಿರ್ದೇಶಿಸಿದೆ.

ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಆರೋಪ ನಿಗದಿಗಾಗಿ ಗುರುವಾರಕ್ಕೆ ವಿಚಾರಣೆಗೆ ನಿಗದಿಪಡಿಸಲಾಗಿತ್ತು. ಹಾಗೆಯೇ, ನ್ಯಾಯಾಲಯದ ಸೂಚನೆ ಹೊರತಾಗಿಯೂ ಹಾಸಿಗೆ, ದಿಂಬು, ಹೊದಿಗೆ ಸೇರಿದಂತೆ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸದ ಜೈಲು ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಶಿಫಾರಸ್ಸು ಮಾಡುವಂತೆ ಕೋರಿ ದರ್ಶನ್‌ ಸಲ್ಲಿಸಿರುವ ಅರ್ಜಿಯೂ ಇದೇ ವೇಳೆ ವಿಚಾರಣೆಗೆ ನಿಗದಿಯಾಗಿತ್ತು.

ವಿಚಾರಣೆ ವೇಳೆ ದರ್ಶನ್ ಮತ್ತು ಆತನ ಪರ ವಕೀಲರು, ತಮಗೆ ಜೈಲಿನಲ್ಲಿ ನ್ಯಾಯಾಲಯದ ಆದೇಶದಂತೆ ಯಾವುದೇ ಸೌಲಭ್ಯ ಕಲ್ಪಿಸುತ್ತಿಲ್ಲ ಎಂದರು. ಇನ್ನೂ ಆರೋಪಿಗಳಾದ ಜಗದೀಶ್‌ ಮತ್ತು ಅನುಕುಮಾರ್‌ ಅವರು, ತಮ್ಮನ್ನೂ ಈಗಲೂ ಕ್ವಾರೆಂಟೈನ್‌ ಸೆಲ್‌ನಲ್ಲಿ ಇಡಲಾಗಿದೆ ಎಂದು ತಿಳಿಸಿದರು.

ಈ ವಾದ ಪರಿಗಣಿಸಿದ ನ್ಯಾಯಾಧೀಶ ಐ ಪಿ ನಾಯ್ಕ್‌ ಅವರು, ನ್ಯಾಯಾಲಯ ಆದೇಶ ಪಾಲಿಸದ ಮತ್ತು ಆರೋಪಿಗಳನ್ನು ಕ್ವಾರೆಂಟೈನ್‌ ಸೆಲ್‌ನಿಂದ ಸ್ಥಳಾಂತರಿಸದ ಬಗ್ಗೆ ಎರಡು ದಿನಗಳಲ್ಲಿ ಜೈಲು ಅಧಿಕಾರಿಗಳು ನ್ಯಾಯಾಲಯಕ್ಕೆ ತಮ್ಮ ವಿವರಣೆ ನೀಡಬೇಕು. ಹಾಗೆಯೇ, ಸೆಪ್ಟೆಂಬರ್‌ 30ರಂದು ಜೈಲು ಅಧಿಕ್ಷಕರು ನ್ಯಾಯಾಲಯಕ್ಕೆ ಖುದ್ದು ಹಾಜರಾಗಬೇಕು ಎಂದು ನಿರ್ದೇಶಿಸಿತು.

ನಂತರ ಪವಿತ್ರಾ ಗೌಡ, ದರ್ಶನ್‌ ಸೇರಿದಂತೆ ಇತರೆ ಐವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 2025ರ ಅಕ್ಟೋಬರ್‌ 9ರವರೆಗೆ ವಿಸ್ತರಿಸಿ ಆದೇಶಿಸಿದ ನ್ಯಾಯಾಲಯವು ವಿಚಾರಣೆಯನ್ನು ಸೆಪ್ಟೆಂಬರ್‌ 30ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ ಗುರುವಾರ ಪವಿತ್ರಾ ಗೌಡ, ದರ್ಶನ್‌ ಸೇರಿದಂತೆ ಜೈಲಿನಲ್ಲಿರುವ ಏಳು ಮಂದಿ ಆರೋಪಿಗಳು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾದರು. ಇನ್ನು ಎಂಟನೇ ಆರೋಪಿ ಹೊರತುಪಡಿಸಿ ಜಾಮೀನಿನ ಮೇಲಿರುವ ಉಳಿದ 9 ಮಂದಿ ಆರೋಪಿಗಳು ನ್ಯಾಯಾಲಯಕ್ಕೆ ಖುದ್ದು ಹಾಜರಾಗಿದ್ದರು. ಎಂಟನೇ ಆರೋಪಿ ರವಿಶಂಕರ್‌ ಪರ ವಕೀಲರು, ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿತು.

ಇದೇ ವೇಳೆ 9ನೇ ಆರೋಪಿ ಧನರಾಜ್‌, ಜಪ್ತಿ ಮಾಡಿರುವ ತನ್ನ ಬೈಕ್‌ ಅನ್ನು ಬಿಡುಗಡೆ ಮಾಡಲು ತನಿಖಾಧಿಕಾರಿಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದರು. ಪ್ರಕರಣದ 12ನೇ ಆರೋಪಿ ಎಂ ಲಕ್ಷ್ಮಣ್‌ ತನ್ನ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಕೋರಿ ಅರ್ಜಿ ಸಲ್ಲಿಸಿದರು.

ಬಳಿಕ ದರ್ಶನ್‌ ಪರ ವಕೀಲರು ಹಾಜರಾಗಿ, ಕನಿಷ್ಠ ಸೌಲಭ್ಯ ಕಲ್ಪಿಸಲು ನ್ಯಾಯಾಲಯ ಹೊರಡಿಸಿರುವ ಆದೇಶವನ್ನು ಜೈಲು ಅಧಿಕಾರಿಗಳು ಪಾಲಿಸುತ್ತಿಲ್ಲ ಎಂದು ನ್ಯಾಯಾಧೀಶರ ಗಮನಕ್ಕೆ ತಂದರು.

ಅದಕ್ಕೆ ಸ್ಪಂದಿಸಿದ ನ್ಯಾಯಾಧೀಶರು, ನ್ಯಾಯಾಲಯದ ಅನುಸಾರ ಜೈಲು ಅಧಿಕಾರಿಗಳು ನಿಮಗೆ ಸೌಲಭ್ಯ ಕಲ್ಪಿಸಿಲ್ಲವೇ? ಎಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರಿದ್ದ ದರ್ಶನ್‌ ಅನ್ನು ಪ್ರಶ್ನಿಸಿದರು.

Also Read
ಹಾಸಿಗೆ, ತಲೆದಿಂಬು, ಹೊದಿಕೆ ಕೋರಿರುವ ನಟ ದರ್ಶನ್‌: ನಾಳೆಗೆ ಅರ್ಜಿ ವಿಚಾರಣೆ ಮುಂದೂಡಿದ ಬೆಂಗಳೂರು ನ್ಯಾಯಾಲಯ

ದರ್ಶನ್‌ ಉತ್ತರಿಸಿ, ನ್ಯಾಯಾಲಯದ ಆದೇಶದಲ್ಲಿ ತಿಳಿಸಿರುವ ಯಾವುದೇ ಸೌಲಭ್ಯವನ್ನೂ ಜೈಲು ಅಧಿಕಾರಿಗಳು ಕಲ್ಪಿಸಿಲ್ಲ. 25 ಅಡಿ ಉದ್ದ ಮತ್ತು 3 ಅಡಿ ಅಗಲವಿರುವ ಪ್ಯಾಸೇಜ್‌ನಲ್ಲಿ ವಾಕಿಂಗ್‌ ಮಾಡಲು ಅನುಮತಿಸಿದ್ದಾರೆ. ಆದರೆ, ಈ ಜಾಗದಲ್ಲಿ ಸೂರ್ಯನ ಬೆಳಕು ಸಹ ಬೀಳುವುದಿಲ್ಲ ಎಂದು ತಿಳಿಸಿದರು.

ಇನ್ನು 6ನೇ ಆರೋಪಿ ಜಗದೀಶ್‌ ಮತ್ತು 7ನೇ ಆರೋಪಿ ಅನುಕುಮಾರ್‌, ತಮ್ಮನ್ನೂ ಈ ದಿನದವರೆಗೂ ಕ್ವಾರೆಂಟೈನ್‌ ಸೆಲ್‌ನಲ್ಲಿ ಇಡಲಾಗಿದೆ. ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಿಸಿಲ್ಲ ಎಂದು ಜೈಲು ಅಧಿಕಾರಿಗಳ ವಿರುದ್ಧ ಆರೋಪಿಸಿದರು.

Kannada Bar & Bench
kannada.barandbench.com