ಮನೆಯೂಟ, ಹಾಸಿಗೆ, ಪುಸ್ತಕ ಪೂರೈಕೆಗೆ ನಿರ್ದೇಶನ ಕೋರಿದ್ದ ಅರ್ಜಿ ಹಿಂಪಡೆದ ನಟ ದರ್ಶನ್

ಹೈಕೋರ್ಟ್‌ನಲ್ಲಿ ಅರ್ಜಿ ಹಿಂಪಡೆಯಲು ಮೆಮೊ ಸಲ್ಲಿಸಿದ್ದೇವೆ. ಎಲ್ಲಾ ವಾದಗಳನ್ನು ಮುಕ್ತವಾಗಿರಿಸಿ, ಹೊಸ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ, ಈ ಅರ್ಜಿ ಹಿಂಪಡೆಯಲು ಅನುಮತಿಸಬೇಕು ಎಂದು ಕೋರಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ.
Darshan and Karnataka HC
Darshan and Karnataka HC
Published on

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್‌ ತೂಗುದೀಪ ಶ್ರೀನಿವಾಸ್‌ ಮನೆಯೂಟ, ಹಾಸಿಗೆ ಮತ್ತು ಪುಸ್ತಕ ಪೂರೈಕೆಗೆ ಅನುಮತಿಸಲು ಜೈಲು ಅಧಿಕಾರಿಗೆ ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಹಿಂಪಡೆದಿದ್ದಾರೆ.

ನಟ ದರ್ಶನ್‌ ತೂಗುದೀಪ ಶ್ರೀನಿವಾಸ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್‌ ಚಂದನಗೌಡರ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ದರ್ಶನ್‌ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು “ಹೈಕೋರ್ಟ್‌ ನಿರ್ದೇಶನದಂತೆ ಮನೆ ಊಟ ಪೂರೈಸಲು ಜೈಲು ಅಧಿಕಾರಿಗೆ ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾಧೀನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ತಿರಸ್ಕರಿಸಿದೆ. ಹೀಗಾಗಿ, ಹೈಕೋರ್ಟ್‌ನಲ್ಲಿ ಅರ್ಜಿ ಹಿಂಪಡೆಯಲು ಮೆಮೊ ಸಲ್ಲಿಸಿದ್ದೇವೆ. ಎಲ್ಲಾ ವಾದಗಳನ್ನು ಮುಕ್ತವಾಗಿರಿಸಿ, ಹೊಸ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ, ಈ ಅರ್ಜಿ ಹಿಂಪಡೆಯಲು ಅನುಮತಿಸಬೇಕು” ಎಂದು ಕೋರಿದರು.

ಇದನ್ನು ಪುರಸ್ಕರಿಸಿದ ಪೀಠವು ಅರ್ಜಿ ಹಿಂಪಡೆಯಲು ಅನುಮತಿಸಿತು.

Also Read
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮನೆ ಊಟ, ಹಾಸಿಗೆ ಕೋರಿರುವ ನಟ ದರ್ಶನ್‌ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್‌

ಈ ಮಧ್ಯೆ, ಪೀಠವು “ಮನೆ ಊಟ ಪಡೆಯಲು ಇಷ್ಟೆಲ್ಲಾ ಮಾಡಬೇಕಾ? ಇದರಲ್ಲೇನಿದೆ? ಶುಚಿಯಾದ ಆಹಾರ ಪಡೆಯುವುದು ಮೂಲಭೂತ ಹಕ್ಕು. ಗುಜರಾತ್‌ ಹೈಕೋರ್ಟ್‌ನಲ್ಲಿ ಪ್ರಕರಣವೊಂದರಲ್ಲಿ ಅಡ್ವೊಕೇಟ್‌ ಜನರಲ್‌ ಮನೆ ಊಟ ಪಡೆಯುವ ವಿಚಾರದ ಪ್ರಕರಣಕ್ಕೆ ಸಹಮತಿಸಿದ್ದಾರೆ” ಎಂದು ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌ ಅವರನ್ನು ಕುರಿತು ಮೌಖಿಕವಾಗಿ ಅಭಿಪ್ರಾಯಿಸಿತು.

ಇದಕ್ಕೆ ಪ್ರಸನ್ನಕುಮಾರ್‌ ಅವರು “ಮನೆಯೂಟಕ್ಕೆ ನಾವು ವಿರೋಧಿಸುತ್ತಿಲ್ಲ. ಕಾನೂನಿನಲ್ಲಿ ಅವಕಾಶವಿದ್ದರೆ ಕೊಡಬಹುದು ಎಂದಷ್ಟೇ ಹೇಳಿದ್ದೇವೆ” ಎಂದು ಸಮಜಾಯಿಷಿ ನೀಡಿದರು.

Also Read
ನಟ ದರ್ಶನ್‌ ಮನೆ ಊಟದ ಕೋರಿಕೆಯನ್ನು ನ್ಯಾಯಾಲಯ ನಿರಾಕರಿಸಿದ್ದೇಕೆ?

ಈ ಹಿಂದೆ ಹೈಕೋರ್ಟ್‌ ನಿರ್ದೇಶನದಂತೆ ದರ್ಶನ್‌ ಅವರು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದರು. ಇದನ್ನು ತಿರಸ್ಕರಿಸಿದ್ದ ನ್ಯಾಯಾಲಯವು “ಕರ್ನಾಟಕ ಕಾರಾಗೃಹಗಳು ಮತ್ತು ತಿದ್ದುಪಡಿ ಸೇವೆಗಳ ಕೈಪಿಡಿ-201ರ ಅಧಿನಿಯಮ 728ರ ಪ್ರಕಾರ ಕೊಲೆ ಆರೋಪ ಎದುರಿಸುತ್ತಿರುವವರನ್ನು ಹೊರತುಪಡಿಸಿ ನ್ಯಾಯಾಂಗ ಬಂಧನದಲ್ಲಿರು ಇತರೆ ವಿಚಾರಣಾಧೀನ ಕೈದಿಗಳು ಸ್ವಂತ ಖರ್ಚಿನಲ್ಲಿ ಬಟ್ಟೆ, ಹಾಸಿಗೆ, ಚಪ್ಪಲಿ, ಆಹಾರ, ಸ್ಪೂನ್‌, ತಟ್ಟೆ ಹಾಗೂ ಕಪ್‌ ಇನ್ನಿತರ ವಸ್ತುಗಳನ್ನು ಪಡೆಯಲು ಅವಕಾಶವಿರುತ್ತದೆ. ಅದರಂತೆ ಕೊಲೆ ಆರೋಪ ಎದುರಿಸುತ್ತಿರುವ ದರ್ಶನ್‌ ಮನೆಯಿಂದ ಊಟ, ಬಟ್ಟೆ ಹಾಗೂ ಹಾಸಿಗೆ ಸೌಲಭ್ಯ ಪಡೆಯಲು ಅರ್ಹರಾಗಿಲ್ಲ” ಎಂದಿತ್ತು.

Kannada Bar & Bench
kannada.barandbench.com