[ಮಾಸ್ತಿಗುಡಿ ದುರಂತ] ಉದಯ್, ಅನಿಲ್ ಸಿಕ್ಸ್ ಪ್ಯಾಕ್ ತೋರಿಸಲೆಂದು ಸೇಫ್ಟಿ ಜಾಕೆಟ್ ಧರಿಸಿರಲಿಲ್ಲ: ನಿರ್ದೇಶಕರ ಪರ ವಾದ

ಮಾಸ್ತಿಗುಡಿ ಚಲನಚಿತ್ರದ ಸಾಹಸದೃಶ್ಯ ಚಿತ್ರೀಕರಣದ ಭಾಗವಾಗಿ 2016ರ ನ.7ರಂದು ನಟರಾದ ಉದಯ್ ಮತ್ತು ಅನಿಲ್ ಹೆಲಿಕಾಪ್ಟರ್‌ನಿಂದ ತಿಪ್ಪಗೊಂಡನಹಳ್ಳಿ ಜಲಾಶಯದ ಹಿನ್ನೀರಿನಲ್ಲಿ ಧುಮುಕಿದ ವೇಳೆ ಸಾವನ್ನಪ್ಪಿದ್ದರು.
City civil court, Bengaluru
City civil court, Bengaluru

ನಟ ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಲನಚಿತ್ರದ ಸಾಹಸ ದೃಶ್ಯ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಸಾವನಪ್ಪಿದ ಉದಯೋನ್ಮುಖ ಖಳ ನಟರಾಗಿದ್ದ ಉದಯ್ ಹಾಗೂ ಅನಿಲ್ ತಮ್ಮ ಸಿಕ್ಸ್ ಪ್ಯಾಕ್ ಪ್ರೇಕ್ಷಕರು ನೋಡಬೇಕು ಎಂದು ಬಯಸಿ ಸೇಫ್ಟಿ ಜಾಕೆಟ್ ಧರಿಸಲು ನಿರಾಕರಿಸಿದ್ದರು ಎಂಬ ಕುತೂಹಲಕಾರಿ ಅಂಶವನ್ನು ಸಾಹಸ ನಿರ್ದೇಶಕ ರವಿವರ್ಮ ಪರ ವಕೀಲರು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯಕ್ಕೆ ಗುರುವಾರ ತಿಳಿಸಿದ್ದಾರೆ.

ಖಳ ನಟರಿಬ್ಬರ ಉದ್ದೇಶಪೂರ್ವಕವಲ್ಲದ ಕೊಲೆ ಸಂಬಂಧ ತಮ್ಮ ವಿರುದ್ಧದ ಆರೋಪವನ್ನು ಕೈಬಿಡುವಂತೆ ಕೋರಿ ಸಾಹಸ ನಿರ್ದೇಶಕ ರವಿವರ್ಮ ಸಲ್ಲಿಸಿದ್ದ ಅರ್ಜಿ ನಗರದ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್ ಶ್ರೀಧರ ಅವರ ಮುಂದೆ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ರವಿವರ್ಮ ಪರ ಹಿರಿಯ ವಕೀಲ ಸಿ ಎಚ್ ಹನುಮಂತರಾಯ ಅವರು, ನಟರಿಬ್ಬರ ಸಾವು ಆಕಸ್ಮಿಕವಾಗಿ ನಡೆದಿದೆ. ಹೆಲಿಕಾಫ್ಟರ್‌ನಿಂದ ಜಲಾಶಯದ ಹಿನ್ನೀರಿಗೆ ಧುಮುಕುವ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ತಮ್ಮ ದೇಹದ ಸಿಕ್ಸ್ ಪ್ಯಾಕ್ ಅನ್ನು ಪ್ರೇಕ್ಷಕರು ನೋಡಲು ಅನುವು ಮಾಡಿಕೊಳ್ಳುವಂತೆ ಕೇಳಿಕೊಂಡು ಸೇಫ್ಟಿ ಜಾಕೆಟ್ (ರಕ್ಷಾ ಕವಚ) ಧರಿಸಲು ಮೃತರು ಒಪ್ಪಿರಲಿಲ್ಲ. ಹಾಗೆಯೇ, ತಮಗೆ ಈಜು ಬರುವುದಾಗಿಯೂ ತಿಳಿಸಿದ್ದರು. ಅವರ ಒಪ್ಪಿಗೆ ಮೇರೆಗೆ ಚಿತ್ರೀಕರಣ ನಡೆಸಲಾಗಿತ್ತು. ಈ ಅಂಶ ಪೋಲಿಸರೇ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ ನ್ಯಾಯಾಲಯಕ್ಕೆ ವಿವರಿಸಿದರು.

ಅಲ್ಲದೇ, ಈಜು ಬರುವುದಾಗಿ ಹೇಳಿದ್ದರೂ ಮೃತರ ಹಿತ ದೃಷ್ಟಿ ಗಮನದಲ್ಲಿರಿಸಿಕೊಂಡು ಚಿತ್ರೀಕರಣದ ವೇಳೆ ಅರ್ಜಿದಾರರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರು. ಈಜುಗಾರರು ಮತ್ತು ಮೋಟಾರ್ ಬೋಟ್ ಅನ್ನು ಸ್ಥಳದಲ್ಲಿ ಸಿದ್ಧವಾಗಿರಿಸಿಕೊಳ್ಳಲಾಗಿತ್ತು. ಆದರೆ, ಮೋಟಾರ್ ಬೋಟ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿ, ಅದು ನೀರಿನಲ್ಲಿ ಖಳನಾಯಕರು ಬಿದ್ದ ಜಾಗಕ್ಕೆ ಕ್ರಮಿಸಲು ಸಾಧ್ಯವಾಗಲಿಲ್ಲ. ಇದನ್ನು ಅರ್ಜಿದಾರರು ಸೇರಿದಂತೆ ಪ್ರಕರಣದ ಯಾವೊಬ್ಬ ಆರೋಪಿಯೂ ನಿರೀಕ್ಷಿಸಿರಲಿಲ್ಲ. ಹೀಗಾಗಿ, ಅರ್ಜಿದಾರರು ಉದ್ದೇಶಪೂರ್ವಕವಾಗಿ ಯಾವುದೇ ಶಿಕ್ಷಾರ್ಹ ಅಪರಾಧ ಎಸಗಿಲ್ಲ. ಅವರ ವಿರುದ್ಧದ ಆರೋಪ ಕೈಬಿಡಬೇಕು ಎಂದು ಕೋರಿದರು. ನ್ಯಾಯಾಲಯವು ಹೆಚ್ಚಿನ ವಾದ ಮಂಡನೆಗೆ ಮೇ 30ಕ್ಕೆ ವಿಚಾರಣೆ ನಿಗದಿಪಡಿಸಿತು.

ಪ್ರಕರಣದ ಹಿನ್ನೆಲೆ: ಮಾಸ್ತಿಗುಡಿ ಚಲನಚಿತ್ರದ ಸಾಹಸದೃಶ್ಯ ಚಿತ್ರೀಕರಣದ ಭಾಗವಾಗಿ 2016ರ ನವೆಂಬರ್‌ 7ರಂದು ಖಳ ನಟರಾದ ಉದಯ್ ಹಾಗೂ ಅನಿಲ್, ನಾಯಕ ನಟ ದುನಿಯಾ ವಿಜಯ್ ಜೊತೆಯಲ್ಲಿ ಹೆಲಿಕಾಪ್ಟರ್‌ನಿಂದ ತಿಪ್ಪಗೊಂಡನಹಳ್ಳಿ ಜಲಾಶಯದ ಹಿನ್ನೀರಿನಲ್ಲಿ ಧುಮುಕಿದ್ದರು. ಆದರೆ, ಈಜಿ ದಡ ಸೇರಲು ಸಾಧ್ಯವಾಗದೆ ನಟರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಪ್ರಕರಣ ರಾಜ್ಯಾದ್ಯಂತರ ತೀವ್ರ ಸಂಚಲನ ಮೂಡಿಸಿತ್ತು. ತನಿಖೆ ನಡೆಸಿದ್ದ ತಾವರೆಕೆರೆ ಪೊಲೀಸರು, ಚಿತ್ರದ ಸಾಹಸ ನಿರ್ದೇಶಕ ರವಿವರ್ಮ ಹಾಗೂ ಇತರೆ ಐವರ ವಿರುದ್ಧ ಐಪಿಸಿ ಸೆಕ್ಷನ್ 304 ಅಡಿಯಲ್ಲಿ ದುಡುಕು ಮತ್ತು ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾದ ಪ್ರಕರಣದಡಿ (ಉದ್ದೇಶಪೂರ್ವಕವಲ್ಲದ ಕೊಲೆ) ಆರೋಪ ಪಟ್ಟಿ ಸಲ್ಲಿಸಿದ್ದರು.

Related Stories

No stories found.
Kannada Bar & Bench
kannada.barandbench.com