

ದೆಹಲಿಯಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಕ್ಕೆ ಸಂಬಂಧಿಸಿದಂತೆ ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಅಧ್ಯಕ್ಷ ಉದಯ್ ಭಾನು ಚಿಬ್ ಅವರಿಗೆ ದೆಹಲಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಶನಿವಾರ ಬೆಳಿಗ್ಗೆ ನೀಡಿದ್ದ ಜಾಮೀನಿಗೆ ಸೆಷನ್ಸ್ ನ್ಯಾಯಾಲಯ ಸಂಜೆ ತಡೆ ನೀಡಿದೆ.
ಜಾಮೀನು ಆದೇಶ ಸ್ಥಗಿತಕ್ಕೆ ಪಟಿಯಾಲಾ ಹೌಸ್ ಕೋರ್ಟ್ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತ್ ಬನ್ಸಾಲ್ ಅವರು ಜಾಮೀನು ಆದೇಶ ಸ್ಥಗಿತಗೊಳಿಸುವಂತೆ ಆದೇಶಿಸಿದರು.
ಗಮನಾರ್ಹವಾಗಿ ಡ್ಯೂಟಿ ಮ್ಯಾಜಿಸ್ಟ್ರೇಟ್ ವಂಶಿಕಾ ಮೆಹ್ತಾ ಅವರು ಶನಿವಾರ ಬೆಳಿಗ್ಗೆ ಶನಿವಾರ ಬೆಳಗಿನ ಜಾವ ಸುಮಾರು 3:30ಕ್ಕೆ ಚಿಬ್ ಅವರಿಗೆ ಜಾಮೀನು ನೀಡಿದ್ದರು.
ಚಿಬ್ ಅವರನ್ನು ಇನ್ನೂ ಏಳು ದಿನಗಳ ಕಾಲ ಕಸ್ಟಡಿ ಅವಧಿ ವಿಸ್ತರಿಸುವಂತೆ ಕೋರಿ ದೆಹಲಿ ಪೊಲೀಸರು ಬೆಳಗಿನ ಜಾವ ಡ್ಯೂಟ್ ಮ್ಯಾಜಿಸ್ಟ್ರೇಟ್ ಅವರೆದುರು ಚಿಬ್ ಅವರನ್ನು ಹಾಜರುಪಡಿಸಿದ್ದರು. ಆದರೆ ಅವರ ಕಸ್ಟಡಿ ಅವಧಿ ವಿಸ್ತರಣೆಗೆ ಸಕಾರಣ ಇಲ್ಲ ಎಂದು ನ್ಯಾಯಾಲಯ ತಿಳಿಸಿತ್ತು. ಇದನ್ನು ಪ್ರಶ್ನಿಸಿ ಪೊಲೀಸರು ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದರು. ಸಂಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶಕ್ಕೆ ಸೆಷನ್ಸ್ ನ್ಯಾಯಾಲಯ ತಡೆ ನೀಡಿದೆ.
ಫೆಬ್ರವರಿ 23 ರಂದು ಚಿಬ್ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದ ಪೊಲೀಸರು ಮರುದಿನ ಬೆಳಿಗ್ಗೆ ಅವರನ್ನು ಬಂಧಿಸಿದ್ದರು. ನಂತರ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು, ನ್ಯಾಯಾಲಯ ಅವರನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು.
ದೆಹಲಿ ಭಾರತ್ ಮಂಟಪದಲ್ಲಿ ಫೆಬ್ರವರಿ 20 ರಂದು ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯೊಳಗೆ ಐವೈಸಿ ಸದಸ್ಯರು ಶರ್ಟ್ ಧರಿಸದೆ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದರು.
ಭಾರತ- ಅಮೆರಿಕ ನಡುವಿನ ವಾಣಿಜ್ಯ ಒಪ್ಪಂದವನ್ನು ತರಾತುರಿಯಲ್ಲಿ ಮಾಡಿಕೊಂಡಿರುವ ಪ್ರಧಾನಿ ಮೋದಿ ರಾಜಿಯಾಗಿದ್ದಾರೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ್ದರು. "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ" ಎನ್ನುವ ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಟೀಕೆಗಳನ್ನು ಹೊಂದಿರುವ ಟಿ-ಶರ್ಟ್ಗಳನ್ನು ಪ್ರದರ್ಶಿಸಲು ಅವರು ತಮ್ಮ ಅಂಗಿಗಳನ್ನು ತೆಗೆದಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಲ್ಲಿಯವರೆಗೆ ಹದಿನಾಲ್ಕು ಜನರನ್ನು ಬಂಧಿಸಿದ್ದಾರೆ. ಭದ್ರತೆಯನ್ನು ಉಲ್ಲಂಘಿಸಿದ್ದಾರೆ ಮತ್ತು ಸ್ಥಳದಲ್ಲಿ "ರಾಷ್ಟ್ರ ವಿರೋಧಿ" ಘೋಷಣೆಗಳನ್ನು ಕೂಗಿದ್ದಾರೆ ಎಂದು ಅವರ ವಿರುದ್ಧ ಆರೋಪಿಸಲಾಗಿದೆ.