ಸಹೋದ್ಯೋಗಿ ವಕೀಲೆಗೆ ಲೈಂಗಿಕ ಕಿರುಕುಳ ಆರೋಪ: ವಕೀಲ ಮಂಜುನಾಥ್‌ ಸನ್ನದು ತಾತ್ಕಾಲಿಕವಾಗಿ ಅಮಾನತುಗೊಳಿಸಿದ ಕೆಎಸ್‌ಬಿಸಿ

ಪ್ರಕರಣವನ್ನು ಕೆಎಸ್‌ಬಿಸಿ ಶಿಸ್ತು ಸಮಿತಿಗೆ ವಹಿಸಿಸಲಾಗಿದೆ. ವಿಚಾರಣೆ ಪೂರ್ಣಗೊಳ್ಳುವರೆಗೆ ವಕೀಲ ಎಚ್ ಮಂಜುನಾಥ್‌ ಅವರ ಸನ್ನದು ಅಮಾನತುಪಡಿಸಲಾಗಿದೆ ಎಂದು ಕೆಎಸ್‌ಬಿಸಿ ಅಧ್ಯಕ್ಷ ಎಚ್‌ ಎಲ್‌ ವಿಶಾಲ್‌ ರಘು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Manjunath H
Manjunath HLawyer

ಸಹೋದ್ಯೋಗಿ ಕಿರಿಯ ವಕೀಲೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಂಗಳೂರಿನ ವಕೀಲ ಎಚ್‌ ಮಂಜುನಾಥ್‌ (46) ಅವರ ಸನ್ನದು ತಾತ್ಕಾಲಿಕವಾಗಿ ಅಮಾನತುಪಡಿಸಿ ಕರ್ನಾಟಕ ರಾಜ್ಯ ವಕೀಲರ ಪರಿಷತ್‌ (ಕೆಎಸ್‌ಬಿಎಸ್‌) ಆದೇಶಿಸಿದೆ.

ಲೈಂಗಿಕ ಕಿರುಕುಳಕ್ಕೆ ತುತ್ತಾದ ಮಹಿಳಾ ವಕೀಲೆ ಸಲ್ಲಿಸಿದ್ದ ದೂರು ಆಧರಿಸಿ ಶಿಸ್ತು ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಿದ ನಂತರ ಕೆಎಸ್‌ಬಿಸಿ ಈಚೆಗೆ ಈ ಆದೇಶ ಮಾಡಿದೆ.

"ಪ್ರಕರಣವನ್ನು ಕೆಎಸ್‌ಬಿಸಿಯ ಶಿಸ್ತು ಸಮಿತಿಗೆ ವಹಿಸಿಸಲಾಗಿದೆ. ಅದರ ವಿಚಾರಣೆ ಪೂರ್ಣಗೊಳ್ಳುವರೆಗೆ ವಕೀಲ ಎಚ್ ಮಂಜುನಾಥ್‌ ಅವರ ಸನ್ನದು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಪಡಿಸಲಾಗಿದೆ" ಎಂದು ಕೆಎಸ್‌ಬಿಸಿ ಅಧ್ಯಕ್ಷ ಎಚ್‌ ಎಲ್‌ ವಿಶಾಲ್‌ ರಘು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

"ವಕೀಲೆಯ ದೂರಿಗೆ ವಿವರಣೆ ಕೇಳಿ ವಕೀಲ ಎಚ್‌ ಮಂಜುನಾಥ್‌ಗೆ ನೋಟಿಸ್‌ ಜಾರಿಗೊಳಿಸಲಾಗಿತ್ತು. 2023ರ ಅಕ್ಟೋಬರ್‌ 5ರಂದು ಕೆಎಸ್‌ಬಿಸಿಗೆ ಪತ್ರ ಸಲ್ಲಿಸಿದ ಅವರು, ತಮ್ಮ ವಿವರಣೆ ಸಲ್ಲಿಸಲು 10ರಿಂದ 14 ದಿನಗಳ ಅವಕಾಶ ನೀಡಲು ಕೋರಿದ್ದರು. ಅದಾದ 30 ದಿನ ಕಳೆದರೂ ವಿವರಣೆ ಅಥವಾ ಆಕ್ಷೇಪಣೆ ಸಲ್ಲಿಸಲು ಅವರು ವಿಫಲವಾಗಿದ್ದಾರೆ. ಹೀಗಾಗಿ, ಕೆಎಸ್‌ಬಿಸಿ ಶಿಸ್ತು ಪ್ರಾಧಿಕಾರದ ಸಭೆಯಲ್ಲಿ ಈ ವಿಚಾರ ಚರ್ಚಿಸಲಾಯಿತು. ದೂರು, ಅದರೊಂದಿಗೆ ಲಗತ್ತಿಸಿರುವ ದೂರುದಾರೆ ಮತ್ತು ವಕೀಲ ಎಚ್‌ ಮಂಜುನಾಥ್‌ ನಡುವಿನ ವಾಟ್ಸಾಪ್‌ ಸಂದೇಶಗಳನ್ನು ಪರಿಶೀಲಿಸಿದಾಗ, ಮಂಜನಾಥ್‌ ಅವರು ಕಿರಿಯ ವಕೀಲೆಯಾಗಿದ್ದ ದೂರುದಾರೆಗೆ ಲೈಂಗಿಕ ಕಿರುಕುಳ ನೀಡಿರುವುದು, ಜೀವ ಬೆದರಿಕೆ ಹಾಕಿರುವುದು ಮತ್ತು ವೃತ್ತಿಪರತೆಗೆ ಹೊರತಾಗಿ ತಪ್ಪಾಗಿ ನಡೆದುಕೊಂಡಿರುವುದು ಸ್ಪಷ್ಟವಾಗುತ್ತದೆ. ಆದ್ದರಿಂದ, ಅವರ ಸನ್ನದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಪಡಿಸಲಾಗಿದೆ" ಎಂದು ಕೆಎಸ್‌ಬಿಸಿ ಆದೇಶದಲ್ಲಿ ಹೇಳಿದೆ.

Related Stories

No stories found.
Kannada Bar & Bench
kannada.barandbench.com