ರಾಜ್ಯ ವಕೀಲರ ಸಮ್ಮೇಳನದ ಹಣ ದುರ್ಬಳಕೆ ಆರೋಪ: ಕೆಎಸ್‌ಬಿಸಿ ಅಧ್ಯಕ್ಷ, ಉಪಾಧ್ಯಕ್ಷರ ವಿರುದ್ಧ ಎಫ್‌ಐಆರ್‌ ದಾಖಲು

ಧಾರವಾಡದ ಆನಂದ ಕುಮಾರ್ ಮಗದುಮ್‌ ಅವರು ಭಾರತೀಯ ವಕೀಲರ ಪರಿಷತ್‌ಗೆ (ಬಿಸಿಐ) ಸಲ್ಲಿಸಿದ್ದ ಮನವಿಯ ಮೇರೆಗೆ ಬಿಸಿಐ ಈಗಾಗಲೇ ತನಿಖೆಗಾಗಿ ಮೂವರ ಸಮಿತಿ ನೇಮಕ ಮಾಡಿದೆ.
KSBC Chairman Vishal Raghu H L and Vice Chairman Vinay Mangalekar
KSBC Chairman Vishal Raghu H L and Vice Chairman Vinay Mangalekar

ಮೈಸೂರಿನಲ್ಲಿ ಕಳೆದ ವರ್ಷ ಜರುಗಿದ ರಾಜ್ಯ ವಕೀಲರ ಸಮ್ಮೇಳನದ ವೇಳೆ ಹಣಕಾಸು ದುರ್ಬಳಕೆ ನಡೆದಿದ್ದು, ₹50 ಲಕ್ಷಕ್ಕೂ ಹೆಚ್ಚಿನ ಮೊತ್ತದ ದುರುಪಯೋಗ ನಡೆದಿದೆ ಎಂದು ಆರೋಪಿಸಿ ರಾಜ್ಯ ವಕೀಲರ ಪರಿಷತ್‌ ಸದಸ್ಯರೂಬ್ಬರು ಪರಿಷತ್‌ನ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕರ ಸೇರಿದಂತೆ ಒಟ್ಟು ನಾಲ್ವರ ವಿರುದ್ಧ ನೀಡಿರುವ ದೂರಿನ ಅನ್ವಯ ಬೆಂಗಳೂರಿನ ವಿಧಾನಸೌಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. 

ರಾಜ್ಯ ವಕೀಲರ ಪರಿಷತ್‌ ಸದಸ್ಯರೂ ಮತ್ತು ಹೈಕೋರ್ಟ್‌ನ ಹಿರಿಯ ವಕೀಲರೂ ಆದ ಎಸ್‌ ಬಸವರಾಜ್‌ ನೀಡಿರುವ ದೂರು ಆಧರಿಸಿ ಪರಿಷತ್ ಅಧ್ಯಕ್ಷ ಎಚ್‌ ಎಲ್‌ ವಿಶಾಲ್ ರಘು, ಉಪಾಧ್ಯಕ್ಷ ವಿನಯ ಮಂಗಳೇಕರ್‌, ಪರಿಷತ್‌ ವ್ಯವಸ್ಥಾಪಕ ಪುಟ್ಟೇಗೌಡ ಹಾಗೂ ಇತರರನ್ನು ಆರೋಪಿಗಳನ್ನಾಗಿಸಲಾಗಿದೆ.

KSBC Member and Senior Advocate Basavaraju S
KSBC Member and Senior Advocate Basavaraju S

ಇದರ ಆಧಾರದಲ್ಲಿ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 420 (ವಂಚನೆ), 406 (ನಂಬಿಕೆ ದ್ರೋಹ), 409 (ಸಾರ್ವಜನಿಕ ಸೇವಕರಿಂದ ನಂಬಿಕೆ ದ್ರೋಹ), 468 (ಫೋರ್ಜರಿ), 471 (ನಕಲಿ ದಾಖಲೆಯನ್ನು ಅಪರಾಧದಲ್ಲಿ ಬಳಸುವುದು), 477–ಎ (ಬ್ಯಾಂಕ್‌ ಖಾತೆ ದುರುಪಯೋಗ) 34 (ಸಮಾನ ಉದ್ದೇಶ) ಮತ್ತು 120–ಬಿ (ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೂರಿನ ವಿವರ: ರಾಜ್ಯ ವಕೀಲರ ಪರಿಷತ್‌ ವತಿಯಿಂದ ಮೈಸೂರಿನಲ್ಲಿ 2023ರ ಆಗಸ್ಟ್‌ 12 ಮತ್ತು 13ರಂದು ಎರಡು ದಿನಗಳ ಕಾಲ ರಾಜ್ಯ ವಕೀಲರ ಸಮ್ಮೇಳನ ಆಯೋಜಿಸಿತ್ತು. ಈ ಸಮಯದಲ್ಲಿ ಸಮ್ಮೇಳನದ ಪ್ರತಿನಿಧಿ ವಕೀಲರಿಂದ ತಲಾ ₹1 ಸಾವಿರದಂತೆ ಒಟ್ಟು ₹1,16,33,000 ಮೊತ್ತವನ್ನು ದೇಣಿಗೆಯಾಗಿ ಸಂಗ್ರಹಿಸಲಾಗಿತ್ತು. ರಾಜ್ಯ ಸರ್ಕಾರ ₹1.8 ಲಕ್ಷ ಅನುದಾನ ನೀಡಿತ್ತು ಮತ್ತು ರಾಜ್ಯ ವಕೀಲರ ಪರಿಷತ್‌ನಿಂದ ₹75 ಲಕ್ಷ ಬಿಡುಗಡೆಯಾಗಿತ್ತು. ಒಟ್ಟು ಮೊತ್ತ ₹3,30,33,000 ಸಂಗ್ರಹವಾಗಿತ್ತು. ಈ ಹಣ ಪರಿಷತ್‌ನ ಬ್ಯಾಂಕ್‌ ಖಾತೆಗೆ ಜಮೆ ಆಗಿದ್ದು, ಈ ಹಣದ ಬಳಕೆಯಲ್ಲಿ ದುರುಪಯೋಗ ನಡೆದಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಅಧ್ಯಕ್ಷರು ಮತ್ತು ಇತರರು ಸೇರಿಕೊಂಡು ಪರಿಷತ್‌ನ ₹50 ಲಕ್ಷ ಮೊತ್ತವನ್ನು ಬ್ಯಾಂಕ್‌ನಿಂದ ನಗದೀಕರಿಸಿಕೊಂಡಿದ್ದಾರೆ. ಸುಳ್ಳು ಲೆಕ್ಕಪತ್ರ ಸೃಷ್ಟಿಸಿ, ವಕೀಲರ ಸಮುದಾಯಕ್ಕೆ ಸೇರಿದ ಕೋಟ್ಯಂತರ ರೂಪಾಯಿಯನ್ನು, ನಕಲಿ ಬಿಲ್‌ ತಯಾರಿಸಿ ಸ್ವಂತಕ್ಕೆ ಬಳಸಿಕೊಂಡಿದ್ದಾರೆ. ಸರ್ಕಾರಕ್ಕೆ ಸಲ್ಲಿಸಬೇಕಾದ ಜಿಎಸ್‌ಟಿ ಹಣವನ್ನು ಸಲ್ಲಿಸದೇ ಮೋಸ ಮಾಡುವ ಉದ್ದೇಶದಿಂದ ಪರಿಷತ್ತಿನ ಸಮುದಾಯಕ್ಕೆ ನಂಬಿಕೆ ದ್ರೋಹ ಎಸಗಿದ್ದಾರೆ ಎಂದು ದೂರಿನಲ್ಲಿ ಬಸವರಾಜ್‌ ಆರೋಪಿಸಿದ್ದಾರೆ.

ಪರಿಷತ್‌ಗೆ ಕೆಟ್ಟ ಹೆಸರು ತರುವ ಪ್ರಯತ್ನ: ದೂರುದಾರರು ಕರ್ನಾಟಕ ರಾಜ್ಯ ವಕೀಲರ ಪರಿಷತ್‌ಗೆ ಕೆಟ್ಟ ಹೆಸರು ತರುವ ಪಯತ್ನದಲ್ಲಿ ತೊಡಗಿದ್ದಾರೆ ಎಂದು ರಾಜ್ಯ ವಕೀಲರ ಪರಿಷತ್‌ ಅಧ್ಯಕ್ಷ ಎಚ್‌ ಎಲ್‌ ವಿಶಾಲ್ ರಘು ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. 

ಪರಿಷತ್‌ ಪಾರದರ್ಶಕವಾಗಿದ್ದು, ಸಮ್ಮೇಳನದಲ್ಲಿ ಮಾಡಲಾಗಿರುವ ಖರ್ಚು ವೆಚ್ಚಗಳ ಲೆಕ್ಕವನ್ನು ಪರಿಷತ್‌ ಕಚೇರಿಯಲ್ಲಿ ಯಾರಾದರೂ ಬಂದು ಪರಿಶೀಲಿಸಬಹುದಾಗಿದೆ. ಆದರೆ, ಕೆಲವರು ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಪರಿಷತ್‌ನ ಘನತೆಗೆ ಕುಂದು ತರುವ ಕೆಲಸಕ್ಕೆ ಕೈಹಾಕಿದ್ದಾರೆ ಎಂದಿದ್ದಾರೆ.

ತನಿಖೆಗೆ ಬಿಸಿಐ ಸಮಿತಿ ನೇಮಕ: ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯ ವಕೀಲರ ಪರಿಷತ್‌ನ ಮಾಜಿ ಅಧ್ಯಕ್ಷರೂ ಆದ ಧಾರವಾಡದ ಆನಂದ ಕುಮಾರ್ ಮಗದುಮ್‌ ಅವರು ಭಾರತೀಯ ವಕೀಲರ ಪರಿಷತ್‌ಗೆ (ಬಿಸಿಐ) ಸಲ್ಲಿಸಿದ್ದ ಮನವಿಯ ಮೇರೆಗೆ ಬಿಸಿಐ ಈಗಾಗಲೇ ಮೂವರ ಸಮಿತಿ ನೇಮಕ ಮಾಡಿದೆ.

KSBC Member Anandkumar Magadum
KSBC Member Anandkumar Magadum

ಬಿಸಿಐ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರೂ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಅಪೂರ್ವ ಕುಮಾರ್ ಶರ್ಮಾ ಅವರ ನೇತೃತ್ವದ ಈ ಸಮಿತಿಯು ಇದೇ 12ರಂದು ರಾಜ್ಯ ವಕೀಲರ ಪರಿಷತ್‌ಗೆ ಪತ್ರವೊಂದನ್ನು ಕಳುಹಿಸಿದ್ದು, ಆರೋಪಗಳಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಒಪ್ಪಿಸುವಂತೆ ರಾಜ್ಯ ಪರಿಷತ್‌ನ ಕಾರ್ಯದರ್ಶಿಗೆ ನಿರ್ದೇಶಿಸಿದ್ದಾರೆ. ರಾಜ್ಯ ವಕೀಲರ ಪರಿಷತ್‌ ಘನತೆವೆತ್ತ ಸಾಂವಿಧಾನಿಕ ಸಂಸ್ಥೆಯಾಗಿದ್ದು, ವಿಚಾರಣೆ ಮುಗಿಯುವತನಕ ಪರಿಷತ್‌ ಸದಸ್ಯರು ಯಾರೂ ಈ ಕುರಿತು ಸಾರ್ವಜನಿಕ ವೇದಿಕೆಗಳಲ್ಲಿ ಚರ್ಚಿಸದಂತೆ ಬಿಸಿಐ ತಾಕೀತು ಮಾಡಿದೆ.

Related Stories

No stories found.
Kannada Bar & Bench
kannada.barandbench.com