ಜಾತಿ ನಿಂದನೆ, ಲಂಚಕ್ಕೆ ಬೇಡಿಕೆ: ಶಾಸಕ ಮುನಿರತ್ನಗೆ ಸೆ.30ರವರೆಗೆ ನ್ಯಾಯಾಂಗ ಬಂಧನ; ಬುಧವಾರ ಜಾಮೀನು ಅರ್ಜಿ ವಿಚಾರಣೆ

ಮುನಿರತ್ನ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆಯನ್ನು ನ್ಯಾಯಾಲಯವು ನಾಳೆಗೆ (ಸೆ.18) ಮುಂದೂಡಿದೆ.
BJP MLA Muniratna and Bengaluru City Civil Court
BJP MLA Muniratna and Bengaluru City Civil Court
Published on

ಜಾತಿ ನಿಂದನೆ, ಕೊಲೆ ಬೆದರಿಕೆ ಹಾಗೂ ಘನತ್ಯಾಜ್ಯ ವಿಲೇವಾರಿ ಗುತ್ತಿಗೆಗೆ ಲಂಚದ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಸೆಪ್ಟೆಂಬರ್‌ 30ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಈ ಮಧ್ಯೆ, ಮುನಿರತ್ನ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯವು ನಾಳೆಗೆ ಮುಂದೂಡಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರ ಎರಡು ದಿನಗಳ ಪೊಲೀಸ್‌ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಇಂದು ವಿಶೇಷ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರ ಮುಂದೆ ಹಾಜರುಪಡಿಸಲಾಯಿತು. ಪ್ರಕರಣದ ಮಾಹಿತಿ ಪಡೆದ ನ್ಯಾಯಾಧೀಶರು ಮುನಿರತ್ನ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದರು.

ಈ ನಡುವೆ ಮುನಿರತ್ನ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆಯನ್ನು ನ್ಯಾಯಾಲಯವು ನಾಳೆಗೆ (ಸೆ.18) ಮುಂದೂಡಿದೆ.

ಬಿಬಿಎಂಪಿ ಮಾಜಿ ಸದಸ್ಯ ವೇಲುನಾಯ್ಕರ್‌ ತಾನು ಆದಿ ದ್ರಾವಿಡ (ಎಸ್‌ ಸಿ) ಜನಾಂಗಕ್ಕೆ ಸೇರಿದ್ದು, 2015ರಿಂದ 2020ರವರೆಗೆ ಲಕ್ಷ್ಮಿದೇವಿ ನಗರ ವಾರ್ಡ್‌ ಸಂಖ್ಯೆ 42ರ ಬಿಬಿಎಂಪಿ ಸದಸ್ಯನಾಗಿದ್ದೆ. ಕೆಲ ವಿಚಾರಗಳಲ್ಲಿ ಮುನಿರತ್ನ ಮತ್ತು ತನ್ನ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಸ್ನೇಹಿತರ ಎದುರು ಮುನಿರತ್ನ ಅವರು ಜಾತಿ ನಿಂದನೆ ಮಾಡಿದ್ದರು. ಅಸಭ್ಯ ಪದ ಬಳಕೆಯ ಮೂಲಕ ನಿಂದಿಸಿ, ನಾನು ರಾಜಕೀಯವಾಗಿ ಬೆಳೆಯುವುದಕ್ಕೆ ಬಿಡಬಾರದು ಎಂದು ಹೇಳುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮುನಿರತ್ನ ಲಂಚ ನೀಡುವಂತೆ ಹಿಂಸೆ ನೀಡುತ್ತಿದ್ದಾರೆ ಎಂದು ಚೆಲುವರಾಜು ಹೇಳಿದ್ದರು. ಲಂಚ ಕೊಡದಂತೆ ನಾನು ಅವರಿಗೆ ತಿಳಿಸಿದ್ದೆ. ತನ್ನ ಕಚೇರಿಗೆ ಕರೆಸಿಕೊಂಡಿದ್ದ ಮುನಿರತ್ನ ಅವರು ಚೆಲುವರಾಜು ಅವರನ್ನು ಜಾತಿ ನಿಂದನೆ ಮಾಡಿದ್ದಲ್ಲದೇ ಮನೆಯವರನ್ನು ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ. ವೇಲುನಾಯ್ಕರ್‌ ಮಾತು ಕೇಳಿ ಕಮಿಷನ್‌ ಕೊಡುತ್ತಿಲ್ಲ ಎಂದು ಬೆದರಿಸಿದ್ದಾರೆ. ದಲಿತ ಮತ್ತು ಒಕ್ಕಲಿಗ ಸಮುದಾಯಗಳ ನಡುವೆ ವೈಷಮ್ಯ ಉಂಟು ಮಾಡುವ ಮತ್ತು ಘರ್ಷಣೆಗೆ ಪ್ರಚೋದನೆ ನೀಡುವ ರೀತಿಯಲ್ಲಿ ಮಾತನಾಡಿದ್ದಾರೆ. ಇದನ್ನು ತಾನು ಚೆಲುವರಾಜು ಆಡಿಯೊ ರೆಕಾರ್ಡ್‌ ಮಾಡಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದರು.

ಈ ದೂರಿನ ಅನ್ವಯ ಮುನಿರತ್ನ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ನಿಷೇಧ) ಕಾಯಿದೆ ಸೆಕ್ಷನ್‌ಗಳಾದ 3(1)(r)(s), ಐಪಿಸಿ ಸೆಕ್ಷನ್‌ಗಳಾದ 153(1)(a)(b), 509, 504, 153ರ ಬೆಂಗಳೂರಿನ ವೈಯಾಲಿಕಾವಲ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಗುತ್ತಿಗೆದಾರ ಚೆಲುವರಾಜು ಅವರು “ರಾಜರಾಜೇಶ್ವರಿ ನಗರ ಕ್ಷೇತ್ರದ ವಾರ್ಡ್‌ ಸಂಖ್ಯೆ 42ರಲ್ಲಿ (ಲಕ್ಷ್ಮಿದೇವಿ ನಗರ) ಗಂಗಾ ಎಂಟರ್‌ಪ್ರೈಸಸ್‌ ಎಂಬ ಹೆಸರಿನಲ್ಲಿ ಘನತ್ಯಾಜ್ಯ ಸಂಗ್ರಹಣೆ, ವಿಲೇವಾರಿ ಮಾಡುತ್ತಿದ್ದು, 2021ರ ಸೆಪ್ಟೆಂಬರ್‌ನಲ್ಲಿ ಮುನಿರತ್ನ ಅಂಗರಕ್ಷಕ ವಿಜಯಕುಮಾರ್‌ ಅವರು ಕರೆ ಮಾಡಿ ಶಾಸಕರ ಕಚೇರಿಗೆ ಬರುವಂತೆ ಸೂಚಿಸಿದ್ದರು. ಘನತ್ಯಾಜ್ಯ ಸಂಗ್ರಹಣೆ ಕೆಲಸಕ್ಕೆ 10 ಆಟೊ ರಿಕ್ಷಾ ಕೊಡಿಸುತ್ತೇನೆ. ಅದಕ್ಕೆ 20 ಲಕ್ಷ ಕೊಡುವಂತೆ ಮುನಿರತ್ನ ಬೇಡಿಕೆ ಇಟ್ಟಿದ್ದರು. ಸ್ನೇಹಿತರ ಬಳಿ 20 ಲಕ್ಷ ಸಾಲ ಪಡೆದು ಮುನಿರತ್ನ ಅವರಿಗೆ ಅಂಗರಕ್ಷಕನ ಮೂಲಕ ತಲುಪಿಸಿದ್ದೆ. ಎರಡು ದಿನಗಳ ಬಳಿಕ ವಿಚಾರಿಸಲಾಗಿ 10 ಆಟೊ ಹೆಚ್ಚುವರಿ ನೀಡುವುದಾಗಿ ಹೇಳಿ ವಂಚಿಸಿದ್ದಾರೆ” ಎಂದು ದೂರಿದ್ದಾರೆ.

Also Read
ಜಾತಿ ನಿಂದನೆ, ಲಂಚಕ್ಕೆ ಬೇಡಿಕೆ: ಬಿಜೆಪಿ ಶಾಸಕ ಮುನಿರತ್ನರನ್ನು ಎರಡು ದಿನ ಪೊಲೀಸ್‌ ಕಸ್ಟಡಿಗೆ ನೀಡಿದ ನ್ಯಾಯಾಲಯ

“2023ರ ಸೆಪ್ಟೆಂಬರ್‌ನಲ್ಲಿ ಆಪ್ತ ಸಹಾಯಕ ಅಭಿಷೇಕ್‌ನಿಂದ ಕರೆ ಮಾಡಿಸಿ ಕಚೇರಿಗೆ ಕರೆಯಿಸಿ, 30 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 15 ಲಕ್ಷ ರೂಪಾಯಿಯನ್ನು ಸಾಲ ಪಡೆದು ಹೊಂದಿಸಿಕೊಡುತ್ತೇನೆ ಎಂದು ತಿಳಿಸಿದ್ದೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ತಕ್ಷಣ ಹಣ ತಂದುಕೊಂಡುವಂತೆ ಸೂಚಿಸಿದ್ದರು. ಮತ್ತೆ ಕಚೇರಿಗೆ ಕರೆಯಿಸಿದ್ದು, ಹಣ ತಂದಿಲ್ಲ ಎಂದಾಗ ಹಲ್ಲೆ ನಡೆಸಿದ್ದರು” ಎಂದು ಚೆಲುವರಾಜು ಆರೋಪಿಸಿದ್ದಾರೆ.

“ಐದು ವರ್ಷ ನಾನು ಶಾಸಕನಾಗಿರುತ್ತೇನೆ. ಹೇಳಿದಂತೆ ನಡೆಯದಿದ್ದರೆ, ಹಣ ತಂದು ಕೊಡದಿದ್ದರೆ ಬೇರೆಯವರಿಗೆ ಗುತ್ತಿಗೆ ಕೆಲಸ ನೀಡಲಾಗುವುದು” ಎಂದು ಬೆದರಿಕೆ ಹಾಕಿದ್ದರು. ಅದಾದ ಮೇಲೆ ತುರ್ತಾಗಿ ಏಳು ದಿನಗಳ ಅಲ್ಪಾವಧಿಗೆ ಗುತ್ತಿಗೆ ಕರೆದು ಕಾರ್ಯಾದೇಶ ನೀಡುವಂತೆ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದರು. ಹಣ ಕೊಡದಿದ್ದಕ್ಕೆ ಅಭಿಷೇಕ್‌, ವಿಜಯಕುಮಾರ್‌ ಅವರೂ ಹಲ್ಲೆ ಮಾಡಿದ್ದರು ಎಂದು ಚೆಲುವರಾಜು ದೂರಿದ್ದಾರೆ. ಇದರ ಅನ್ವಯ ಐಪಿಸಿ ಸೆಕ್ಷನ್‌ಗಳಾದ 504, 506, 420, 323, 385, 37ರ ಅಡಿ ಮುನಿರತ್ನ, ವಿಜಯ್‌ಕುಮಾರ್‌, ಅಭಿಷೇಕ್‌ ಮತ್ತು ವಸಂತ್‌ ಕುಮಾರ್‌ ವಿರುದ್ಧ ವೈಯಾಲಿಕಾವಲ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Kannada Bar & Bench
kannada.barandbench.com