ಬಾಗಲಕೋಟೆ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಲು ನಿರ್ಬಂಧ: ಹೈಕೋರ್ಟ್‌ ಮೆಟ್ಟಿಲೇರಿದ ಬಿಜೆಪಿ ಎಂಎಲ್‌ಸಿ ಪೂಜಾರ

ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತಾವು ಭಾಗವಹಿಸುವಂತಿಲ್ಲ ಎಂದು ಜಲಸಂಪನ್ಮೂಲ ಅಪರ ಮುಖ್ಯ ಕಾಯದರ್ಶಿಯ ನಿರ್ದೇಶನದಂತೆ ಇಲಾಖೆಯ ಅಧೀನ ಕಾರ್ಯದರ್ಶಿ 2024ರ ಸೆ.10ರಂದು ಹೊರಡಿಸಿದ ಪತ್ರ ರದ್ದುಪಡಿಸುವಂತೆ ಕೋರಿದ್ದರು.
BJP MLC P H Pujar  & Karnataka HC
BJP MLC P H Pujar & Karnataka HC
Published on

ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿರುವ ತಮ್ಮನ್ನು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸುವುದನ್ನು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿರುವ ಪಿ ಎಚ್ ಪೂಜಾರ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತಾವು ಭಾಗವಹಿಸುವಂತಿಲ್ಲ ಎಂದು ಜಲಸಂಪನ್ಮೂಲ ಅಪರ ಮುಖ್ಯ ಕಾಯದರ್ಶಿಯ ನಿರ್ದೇಶನದಂತೆ ಇಲಾಖೆಯ ಅಧೀನ ಕಾರ್ಯದರ್ಶಿ 2024ರ ಸೆಪ್ಟೆಂಬರ್‌ 10ರಂದು ಹೊರಡಿಸಿದ ಪತ್ರವನ್ನು ರದ್ದುಪಡಿಸುವಂತೆ ಕೋರಿ ಸ್ಥಳೀಯ ಸಂಸ್ಥೆಗಳ ವಿಜಯಪುರ-ಬಾಗಲಕೋಟೆ ಕ್ಷೇತ್ರದಿಂದ ಬಿಜೆಪಿಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ಪಿ ಎಚ್ ಪೂಜಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರ ಏಕಸದಸ್ಯ ಪೀಠದ ಸೋಮವಾರ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ ಪೀಠವು ರಾಜ್ಯ ಸರ್ಕಾರ, ಜಲಸಂಪನ್ಮೂಲ ಇಲಾಖೆ, ನಗರಾಭಿವೃದ್ಧಿ ಇಲಾಖೆ ಸೇರಿದಂತೆ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಡಿಸೆಂಬರ್ 6ಕ್ಕೆ ಮುಂದೂಡಿತು.

ಅರ್ಜಿದಾರರ ಪರ ವಕೀಲ ಎ ನಾಗರಾಜಪ್ಪ ವಾದಿಸಿದರು. ವಿಜಯಪುರ-ಬಾಗಲಕೋಟೆ ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಪಿ ಎಚ್ ಪೂಜಾರ ಅವರು 2022ರಲ್ಲಿ ಬಿಜೆಪಿಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದಾರೆ. ಬಾಗಲಕೋಟೆ ತಾಲ್ಲೂಕನ್ನು ತಮ್ಮ ನೋಡಲ್ ತಾಲೂಕನ್ನಾಗಿ ಆಯ್ಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ)ದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಅದರಂತೆ ಅವರು ನಿಯಮಿತವಾಗಿ ಬುಡಾ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಈ ಮಧ್ಯೆ, ತಮ್ಮನ್ನು ಬಾಗಲಕೋಟೆ ಪಟ್ಟಣ ಅಭಿವೃದ್ಧ ಪ್ರಾಧಿಕಾರ (ಬಿಟಿಡಿಎ) ಸದಸ್ಯರನ್ನಾಗಿ ಸೇರಿಸಿಕೊಳ್ಳುವಂತೆ ಪೂಜಾರ ಅವರು ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಅಲ್ಲದೇ ಸ್ಥಳೀಯ ಶಾಸಕರು ಹಾಗೂ ಬುಡಾ ಅಧ್ಯಕ್ಷರೂ ಸಹ ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆದಿದ್ದರು. ಅದರಂತೆ, ಬಿಟಿಡಿಎ ಸಭೆಗಳಲ್ಲಿ ಭಾಗಿಯಾಗಲು ಅನುಮತಿ ನೀಡಲಾಗಿತ್ತು. ಆದರೆ, ಬುಡಾ ಸದಸ್ಯರಾಗಿರುವ ಪೂಜಾರ ಅವರು ಬಿಟಿಡಿಎ ಸಭೆಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಜಲಸಂಪನ್ಮೂಲ ಇಲಾಖೆ ಅಧೀನ ಕಾರ್ಯದರ್ಶಿ 2024ರ ಸೆಪ್ಟೆಂಬರ್‌ 10ರಂದು ಪತ್ರ ಹೊರಡಿಸಿದ್ದರು. ಅದನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

Kannada Bar & Bench
kannada.barandbench.com