ಲಂಚ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಕದತಟ್ಟಿದ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ; ನಾಳೆಗೆ ವಿಚಾರಣೆ

ಲೋಕಾಯುಕ್ತರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ವಿರೂಪಾಕ್ಷಪ್ಪ, ಅವರ ಪುತ್ರ ಪ್ರಶಾಂತ್‌ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಸೆಕ್ಷನ್‌ 7(ಎ), ಬಿ ಅಡಿ ಪ್ರಕರಣ ದಾಖಲಿಸಲಾಗಿದೆ. ವಿರೂಪಾಕ್ಷಪ್ಪ ಅವರನ್ನು ಮೊದಲ ಆರೋಪಿಯನ್ನಾಗಿಸಲಾಗಿದೆ.
BJP MLA Madal Virupakshappa and Karnataka HC
BJP MLA Madal Virupakshappa and Karnataka HC

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ (ಕೆಎಸ್‌ಡಿಎಲ್‌) ರಾಸಾಯನಿಕ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಪುತ್ರನ ಮೂಲಕ ಲಂಚ ಪಡೆದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರು ನಿರೀಕ್ಷಣಾ ಜಾಮೀನು ಕೋರಿ ಸೋಮವಾರ ಕರ್ನಾಟಕ ಹೈಕೋರ್ಟ್‌ ಕದತಟ್ಟಿದ್ದಾರೆ.

ವಕೀಲ ಸಂದೀಪ್‌ ಪಾಟೀಲ್‌ ಅವರು ಪ್ರಕರಣವನ್ನು ಇಂದಿಗೆ ನಿಗದಿಗೊಳಿಸಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ನ್ಯಾಯಮೂರ್ತಿ ಕೆ ನಟರಾಜನ್‌ ಅವರ ನೇತೃತ್ವದ ಏಕಸದಸ್ಯ ಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಒಪ್ಪದ ಪೀಠವು ನಾಳೆಗೆ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿತು.

ಕೆಎಸ್‌ಡಿಎಲ್‌ ಅಧ್ಯಕ್ಷರಾಗಿದ್ದ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್‌ ಅವರನ್ನು ಈಚೆಗೆ ₹40 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಇವರ ಜೊತೆಗೆ ಇತರೆ ನಾಲ್ವರನ್ನೂ ವಶಕ್ಕೆ ಪಡೆಯಲಾಗಿದೆ. ಅವರೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಲೋಕಾಯುಕ್ತರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಪ್ರಶಾಂತ್‌ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಸೆಕ್ಷನ್‌ 7(ಎ), 7ಬಿ ಅಡಿ ಪ್ರಕರಣ ದಾಖಲಿಸಲಾಗಿದೆ. ಶಾಸಕ ವಿರೂಪಾಕ್ಷಪ್ಪ ಅವರನ್ನು ಮೊದಲ ಆರೋಪಿ, ಪುತ್ರ ಪ್ರಶಾಂತ್‌ ಅವರನ್ನು ಎರಡನೇ ಆರೋಪಿಯನ್ನಾಗಿಸಲಾಗಿದೆ.

Also Read
ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್‌ ಸೇರಿ ಐವರಿಗೆ 14 ದಿನ ನ್ಯಾಯಾಂಗ ಬಂಧನ

ಪ್ರಕರಣದ ಹಿನ್ನೆಲೆ: ಬೆಂಗಳೂರಿನ ಶ್ರೇಯಸ್‌ ಕಶ್ಯಪ್‌ ಅವರು ಕೆ ಆರ್‌ ರಸ್ತೆಯಲ್ಲಿ ಕೆಮಿಕಲ್ಸ್ ಕಾರ್ಪೊರೇಶನ್‌ ಎಂಬ ಪಾಲುದಾರಿಕೆ ಕಂಪೆನಿ ಹೊಂದಿದ್ದು, ಅವರ ಪರಿಚಯಸ್ಥರಾದ ಟಿ ಎ ಎಸ್‌ ಮೂರ್ತಿ ಅವರು ಚಾಮರಾಜಪೇಟೆಯಲ್ಲಿ ಡೆಲಿಸಿಯಾ ಕೆಮಿಕಲ್ಸ್‌ ಎಂಬ ಪಾಲುದಾರಿಕೆ ಕಂಪೆನಿ ಹೊಂದಿದ್ದಾರೆ. ಈ ಕಂಪೆನಿಗಳು ಕೆಎಸ್‌ಡಿಎಲ್‌ಗೆ ರಾಸಾಯನಿಕ ಆಯಿಲ್‌ ಪೂರೈಸಲು 2023ರ ಜನವರಿಯಲ್ಲಿ ಟೆಂಡರ್‌ ಪ್ರಕ್ರಿಯೆಯಲ್ಲಿ ಭಾಗವಹಿಸಿ ಯಶಸ್ವಿಯಾಗಿದ್ದವು. ಈ ಸಂಬಂಧ ಕಾರ್ಯಾದೇಶ ಮತ್ತು ಹಣ ಬಿಡುಗಡೆ ಮಾಡಿಸಲು ₹81 ಲಕ್ಷ ಲಂಚ ನೀಡುವಂತೆ ಮಾಡಾಳ್‌ ವಿರೂಪಾಕ್ಷಪ್ಪ ಮತ್ತು ಪ್ರಶಾಂತ್‌ ಅವರು ಬೇಡಿಕೆ ಇಟ್ಟಿದ್ದಾರೆ ಎಂದು ಶ್ರೇಯಸ್‌ ಕಶ್ಯಪ್‌ ಬೆಂಗಳೂರಿನ ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ದೂರು ನೀಡಿದ್ದರು.

ಕುಮಾರ ಪಾರ್ಕ್‌ನ ಕ್ರೆಸೆಂಟ್‌ ರಸ್ತೆಯಲ್ಲಿರುವ ಖಾಸಗಿ ಕಚೇರಿಗೆ ಗುರುವಾರ ಸಂಜೆ ಗುತ್ತಿಗೆದಾರ ₹40 ಲಕ್ಷ ಲಂಚದ ಹಣ ತಲುಪಿಸುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಪ್ರಶಾಂತ್‌ ಸೇರಿ ಐವರನ್ನು ಬಂಧಿಸಿದ್ದರು. ಅಂದಿನಿಂದ ವಿರೂಪಾಕ್ಷಪ್ಪ ಅವರು ನಾಪತ್ತೆಯಾಗಿದ್ದಾರೆ.

Related Stories

No stories found.
Kannada Bar & Bench
kannada.barandbench.com