[ಅಕ್ರಮ ಆಸ್ತಿ ಗಳಿಕೆ ಪ್ರಕರಣ] ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಕದತಟ್ಟಿದ ಸಚಿವ ಸೋಮಣ್ಣ

ರಾಜಕೀಯ ಎದುರಾಳಿಗಳು ನನ್ನ ವರ್ಚಸ್ಸಿಗೆ ಧಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಈ ಮೂಲಕ ರಾಜಕೀಯ ಮೇಲುಗೈ ಸಾಧಿಸುವುದು ಅವರ ಉದ್ದೇಶವಾಗಿದೆ ಎಂದು ಸಚಿವ ಸೋಮಣ್ಣ ಮನವಿಯಲ್ಲಿ ವಿವರಿಸಿದ್ದಾರೆ.
Housing Minister V Somanna and City Civil court 

Housing Minister V Somanna and City Civil court 

ಅಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿರುವ ವಸತಿ ಸಚಿವ ವಿ ಸೋಮಣ್ಣ ಅವರ ನಿರೀಕ್ಷಣಾ ಜಾಮೀನು ಮನವಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರತಿವಾದಿಯಾಗಿರುವ ದೂರುದಾರ ಬೆಂಗಳೂರಿನ ಮೂಡಲಪಾಳ್ಯದ ರಾಮಕೃಷ್ಣ ಅವರಿಗೆ ಗುರುವಾರ ನೋಟಿಸ್‌ ಜಾರಿ ಮಾಡಿದೆ.

ಸಚಿವ ಸೋಮಣ್ಣ ಅವರ ನಿರೀಕ್ಷಣಾ ಜಾಮೀನು ಮನವಿಯ ವಿಚಾರಣೆ ನಡೆಸಿದ್ದ 110ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಹಾಗೂ ಹಾಲಿ ಮತ್ತು ಮಾಜಿ ಶಾಸಕ ಹಾಗೂ ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ ನಡೆಸುವುದಕ್ಕಾಗಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಬಿ ಜಯಂತ್‌ ಕುಮಾರ್ ಅವರು ರಾಮಕೃಷ್ಣ ಅವರಿಗೆ ವಕಾಲತ್ತು ಹಾಕಲು ಆದೇಶಿಸಿದ್ದು, ಪ್ರಕರಣವನ್ನು ಸೋಮವಾರಕ್ಕೆ ಮುಂದೂಡಿದ್ದಾರೆ.

ಸೋಮಣ್ಣ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಸಂಸ್ಥೆ (ಎಸಿಬಿ) ಸಲ್ಲಿಸಿರುವ ಬಿ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಳೆದ ಸೋಮವಾರ ತಿರಸ್ಕರಿಸಿದ್ದು, ಅವರ ವಿರುದ್ಧ ವಿಶೇಷ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಮಹತ್ವದ ಆದೇಶ ಮಾಡಿದೆ. ಅಲ್ಲದೇ, ಏಪ್ರಿಲ್‌ 16ರಂದು ಖುದ್ದು ಹಾಜರಾಗುವಂತೆ ಸಚಿವ ಸೋಮಣ್ಣ ಅವರಿಗೆ ಸಮನ್ಸ್‌ ಜಾರಿ ಮಾಡಿದೆ. ಸೋಮಣ್ಣ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ 1988ರ ಸೆಕ್ಷನ್‌ 13(1)(ಬಿ) (ಡಿ) ಮತ್ತು (ಇ) ಜೊತೆಗೆ ಸೆಕ್ಷನ್‌ 13(2)ರ ಅಡಿ ಪ್ರಕರಣ ದಾಖಲಿಸಲು ನ್ಯಾಯಾಲಯವು ಆದೇಶ ಮಾಡಿದೆ.

Also Read
ಒಂದೊಮ್ಮೆ ಜನತಾ ಬಜಾರ್‌ನಲ್ಲಿ ₹231 ವೇತನ ಪಡೆಯುತ್ತಿದ್ದ ಸಚಿವ ಸೋಮಣ್ಣ ವಿರುದ್ಧದ ಅಕ್ರಮ ಆಸ್ತಿ ಆರೋಪಗಳೇನು?

“ರಾಜಕೀಯ ಎದುರಾಳಿಗಳು ನನ್ನ ವರ್ಚಸ್ಸಿಗೆ ಧಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ರಾಜಕೀಯ ಮೇಲುಗೈ ಸಾಧಿಸುವುದು ಅವರ ಉದ್ದೇಶವಾಗಿದೆ. ದೂರುದಾರರು ತಪ್ಪು ಮತ್ತು ಆಧಾರರಹಿತ ಆರೋಪ ಮಾಡಿದ್ದು, ಸದ್ಯದ ಕ್ರಿಮಿನಲ್‌ ಪ್ರಕ್ರಿಯೆ ಅದರ ಭಾಗವೇ ಆಗಿದೆ” ಎಂದು ವಕೀಲ ವಿ ನಾರಾಯಣ ಸ್ವಾಮಿ ಅವರ ಮೂಲಕ ಸಲ್ಲಿಸಲಾಗಿರುವ ಜಾಮೀನು ಮನವಿಯಲ್ಲಿ ಸೋಮಣ್ಣ ವಿವರಿಸಿದ್ದಾರೆ.

Also Read
ಸಚಿವ ಸೋಮಣ್ಣ ಅವರಿಂದ ಶೇ. 204ರಷ್ಟು ಅಕ್ರಮ ಆಸ್ತಿ ಸಂಪಾದನೆ; ಕ್ರಿಮಿನಲ್‌ ಪ್ರಕರಣ ದಾಖಲಿಸಲು ನ್ಯಾಯಾಲಯದ ಆದೇಶ

ಬೆಂಗಳೂರಿನ ಜನತಾ ಬಜಾರ್‌ನಲ್ಲಿ 1974ರಲ್ಲಿ ಮಾರಾಟ ಸಹಾಯಕನಾಗಿ ಕೆಲಸಕ್ಕೆ ಸೇರಿದಾಗ ಸೋಮಣ್ಣ ಅವರ ಮಾಸಿಕ ಸಂಬಳವು 231 ರೂಪಾಯಿಗಳಾಗಿತ್ತು. ಒಟ್ಟು ಹತ್ತು ವರ್ಷದ ಅವಧಿಯಲ್ಲಿ ಸೋಮಣ್ಣ ಅವರ ಆದಾಯವು ₹15,330 ಆಗಿತ್ತು. ನಗರಸಭೆ ಸದಸ್ಯರಾಗಿದ್ದ ಹತ್ತು ವರ್ಷಗಳ ಅವಧಿಯಲ್ಲಿ ಅವರ ಒಟ್ಟು ಆದಾಯವು ಭತ್ಯೆ ಸಹಿತ ₹71,437 ಆಗಿತ್ತು. ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ಅವರು ಸ್ವಯಂ ಘೋಷಣೆ ಮಾಡಿಕೊಂಡಿರುವಂತೆ 1993-94 ರಿಂದ 2009-10ರ ಅವಧಿಯಲ್ಲಿ ಅವರ ಆಸ್ತಿಯು ₹18,49,89,441 ಆಗಿದೆ. ಸುಮಾರು ₹12.42 ಕೋಟಿ ಅಕ್ರಮ ಆಸ್ತಿ ಕಂಡುಬಂದಿದೆ. ಈ ಅಕ್ರಮ ಆಸ್ತಿಯ ಪ್ರಮಾಣ ಶೇ. 204 ಆಗಿದೆ ಎಂಬುದು ಅರ್ಜಿದಾರರ ಆರೋಪವಾಗಿದೆ.

Related Stories

No stories found.
Kannada Bar & Bench
kannada.barandbench.com