ವಾಲ್ಮೀಕಿ ನಿಗಮದ ಹಣ ದುರ್ಬಳಕೆ: ಶಾಸಕ ನಾಗೇಂದ್ರ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಸಿಬಿಐ

ಸರ್ಕಾರದ ನಿಗಮಗಳ ಹಣವನ್ನು ಮುಂಬೈನಲ್ಲಿನ ಇಬ್ಬರು ಮಹಿಳೆಯರಿಗೆ ವರ್ಗಾಯಿಸಲಾಗಿದೆ. ಅವರು ಆ ಹಣವನ್ನು ಆಭರಣ ಖರೀದಿಸಲು ಬಳಸಿದ್ದಾರೆ. ಈ ಎಲ್ಲಾ ದಾಖಲೆಗಳನ್ನು ವಿಚಾರಣಾ ನ್ಯಾಯಾಲಯದ ಮುಂದೆ ಇರಿಸಲಾಗಿತ್ತು ಎಂದು ಪೀಠದ ಗಮನಸೆಳೆದ ಸಿಬಿಐ.
CBI, HC & B Nagendra
CBI, HC & B Nagendra
Published on

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ಜರ್ಮನ್‌ ತಾಂತ್ರಿಕ ತರಬೇತಿ ಸಂಸ್ಥೆಯ (ಕೆಜಿಟಿಟಿಐ) ಟೆಂಡರ್‌ ಪ್ರಕ್ರಿಯೆ ತಿರುಚಿ ನಿರ್ದಿಷ್ಟ ಕಂಪನಿಗಳಿಗೆ ಅನುಕೂಲ ಮಾಡಿಕೊಟ್ಟು ಲಂಚ ಸ್ವೀಕರಿಸಿರುವ ಆರೋಪದ ಪ್ರಕರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರಗೆ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿರುವ ನಿರೀಕ್ಷಣಾ ಜಾಮೀನನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ.

ಸಿಬಿಐ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌ ಸುನೀಲ್‌ ದತ್‌ ಯಾದವ್‌ ಅವರ ಏಕಸದಸ್ಯ ಪೀಠವು ಗುರುವಾರ ಬಿ ನಾಗೇಂದ್ರಗೆ ನೋಟಿಸ್‌ ಜಾರಿ ಮಾಡಿದ್ದು, ವಿಚಾರಣೆಯನ್ನು ಜನವರಿ 29ಕ್ಕೆ ಮುಂದೂಡಿದೆ.

ಸಿಬಿಐ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನಕುಮಾರ್‌ ಅವರು “ಹೈಕೋರ್ಟ್‌ನ ಸಮನ್ವಯ ಪೀಠದ ನಿಗಾದಲ್ಲಿ ನಡೆಯುತ್ತಿರುವ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಕಾಂಗ್ರೆಸ್‌ ಶಾಸಕ ನಾಗೇಂದ್ರಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಹಲವು ಹಣ ದುರ್ಬಳಕೆ ಪ್ರಕರಣಗಳಲ್ಲಿ ನಾಗೇಂದ್ರ ಭಾಗವಹಿಸಿದ್ದಾರೆ ಎಂದು ಸಿಬಿಐ ಹೇಳಿದೆ. ಆದರೆ, ಯಾವುದೇ ದಾಖಲೆಗಳನ್ನು ಹಾಜರುಪಡಿಸಿಲ್ಲ ಎಂದು ವಿಚಾರಣಾ ನ್ಯಾಯಾಲಯ ಆದೇಶ ಮಾಡಿದೆ. ಆದರೆ, ಇದು ವಾಸ್ತವಕ್ಕೆ ದೂರವಾದ ವಿಚಾರ. ತನಿಖಾಧಿಕಾರಿಯು ಹಾಜರಾಗಿ ಕೇಸ್‌ ಡೈರಿ ಮತ್ತು ಸಾಕ್ಷಿಗಳ ಹೇಳಿಕೆಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದರು” ಎಂದರು.

“ಸರ್ಕಾರದ ನಿಗಮಗಳ ಹಣವನ್ನು ಮುಂಬೈನಲ್ಲಿನ ಇಬ್ಬರು ಮಹಿಳೆಯರಿಗೆ ವರ್ಗಾಯಿಸಲಾಗಿದೆ. ಅವರು ಆ ಹಣವನ್ನು ಆಭರಣ ಖರೀದಿಸಲು ಬಳಸಿದ್ದಾರೆ. ಈ ಎಲ್ಲಾ ದಾಖಲೆಗಳನ್ನು ವಿಚಾರಣಾ ನ್ಯಾಯಾಲಯದ ಮುಂದೆ ಸಿಬಿಐ ಇಟ್ಟಿತ್ತು. ಸಿಬಿಐ ಡಿಐಜಿ ಅವರು ನ್ಯಾಯಾಲಯಕ್ಕೆ ಹಾಜರಾಗಿ ಮಾಹಿತಿ ನೀಡಿದ್ದಾರೆ. ಇದಕ್ಕಾಗಿ ನಾಗೇಂದ್ರ ಅವರ ಕಸ್ಟಡಿ ತನಿಖೆಗೆ ಅಗತ್ಯವಾಗಿದೆ. ಸಚಿವರಾಗಿದ್ದ ನಾಗೇಂದ್ರ ಅವರು ಸರ್ಕಾರದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದಕ್ಕಾಗಿ ಹೈಕೋರ್ಟ್‌ ಈ ಪ್ರಕರಣದ ಮೇಲೆ ನಿಗಾ ಇಟ್ಟಿದೆ. ಪ್ರತಿ ಎರಡು ತಿಂಗಳಿಗೊಮ್ಮೆ ಸ್ಥಿತಿಗತಿ ವರದಿ ಸಲ್ಲಿಸಲು ಹೈಕೋರ್ಟ್‌ನ ಸಮನ್ವಯ ಪೀಠ ಆದೇಶಿಸಿದೆ. ಆಶ್ಚರ್ಯವೆಂದರೆ ಪ್ರಕರಣದಲ್ಲಿನ ಸಹ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಲಾಗಿದೆ. ಈಗ ಸಾಕ್ಷಿಗಳು ಲಭ್ಯರಾಗದಿರಬಹುದು. ಹೀಗಾಗಿ, ತುರ್ತಾಗಿ ವಿಚಾರಣೆ ನಡೆಸಬೇಕು” ಎಂದು ಕೋರಿದರು.

Also Read
ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ: ಕಾಂಗ್ರೆಸ್‌ ಶಾಸಕ ನಾಗೇಂದ್ರಗೆ ನಿರೀಕ್ಷಣಾ ಜಾಮೀನು ನೀಡಿದ ವಿಶೇಷ ನ್ಯಾಯಾಲಯ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ₹95 ಕೋಟಿ  ವರ್ಗಾವಣೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೊದಲನೇ ಆರೋಪಿ ಮಾಜಿ ಸಚಿವ ಬಿ ನಾಗೇಂದ್ರಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದತಿ ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿಯೂ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದೆ.

Kannada Bar & Bench
kannada.barandbench.com