ಸಿಬಿಐ ತನಿಖೆ ಅನುಮತಿ ವಾಪಸ್‌ ಪ್ರಶ್ನಿಸಿದ್ದ ಅರ್ಜಿಗಳು ವಜಾ, ಡಿಕೆಶಿ ಸದ್ಯ ನಿರಾಳ; ಸುಪ್ರೀಂ ಹಾದಿ ತೋರಿದ ಹೈಕೋರ್ಟ್‌

ಕಾಂಗ್ರೆಸ್ ಸರ್ಕಾರವು ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನವೆಂಬರ್ 28ರಂದು ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಸಿಬಿಐ, ಯತ್ನಾಳ್‌ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ವಜಾ ಮಾಡಿದೆ.
Basanagouda R Patil, D K Shivakumar, CBI and Karnataka HC
Basanagouda R Patil, D K Shivakumar, CBI and Karnataka HC
Published on

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಈ ಹಿಂದಿನ ಬಿಜೆಪಿ ಆಡಳಿತದ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ತಿರಸ್ಕರಿಸಿದೆ. ಇದರಿಂದ ಡಿಕೆ ಶಿವಕುಮಾರ್‌ ನಿರಾಳರಾಗಿದ್ದು, ಸಿಬಿಐಗೆ ತಾತ್ಕಾಲಿಕ ಹಿನ್ನಡೆಯಾದಂತಾಗಿದೆ.

ರಾಜ್ಯ ಸರ್ಕಾರದ ಆಕ್ಷೇಪಾರ್ಹ ಆದೇಶ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಆಗಸ್ಟ್‌ 12ರಂದು ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಉಮೇಶ್‌ ಎಂ. ಅಡಿಗ ಅವರ ವಿಭಾಗೀಯ ಪೀಠ ಇಂದು ಪ್ರಕಟಿಸಿತು.

“ಎಲ್ಲರ ವಾದ ಮತ್ತು ಕಾನೂನಿನ ನಿಬಂಧನೆಗಳನ್ನು ಸೂಕ್ಷ್ಮವಾಗಿ ಆಲಿಸಿ ಮತ್ತು ಪರಿಶೀಲಿಸಿದ ಬಳಿಕ, ಈ ಸಂಘರ್ಷವು ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವೆ ಇದೆ ಎಂದು ನ್ಯಾಯಾಲಯ ಅರಿತುಕೊಂಡಿದೆ. ಸಿಬಿಐ ಕೇಂದ್ರ ಸರ್ಕಾರದ ಅಡಿ ಕಾರ್ಯನಿರ್ವಹಿಸಲಿದೆ. ಇಲ್ಲಿ ದೆಹಲಿ ವಿಶೇಷ ಪೊಲೀಸ್‌ ಸ್ಥಾಪನಾ ಕಾಯಿದೆ ಮತ್ತು ಹಣ ಅಕ್ರಮ ವರ್ಗಾವಣೆ ಕಾಯಿದೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಂವಿಧಾನಿಕ ಅಧಿಕಾರದ ಕುರಿತಾದ ನಿಬಂಧನೆಗಳಿಗೆ ಸಂಬಂಧಿಸಿದ ವಿಚಾರಗಳನ್ನು ಎತ್ತಲಾಗಿದೆ. ಪಶ್ಚಿಮ ಬಂಗಾಳ ವರ್ಸಸ್‌ ಭಾರತ ಸರ್ಕಾರ ಪ್ರಕರಣದ ತೀರ್ಪಿನ ಪ್ರಕಾರ ಹಾಲಿ ಅರ್ಜಿಗಳು ಸಂವಿಧಾನದ 131ನೇ ವಿಧಿಯಡಿ ಬರಲಿವೆ. ಕೇಂದ್ರ ಸರ್ಕಾರವು ಎಲ್ಲಿಯವರೆಗೆ ರಾಜ್ಯವೊಂದರಲ್ಲಿ ಸಿಬಿಐ ಅನ್ನು ಕಾರ್ಯನಿರ್ವಹಣೆಗೆ ಹಚ್ಚಬಹುದು ಎಂಬುದಕ್ಕೆ ಸಂಬಂಧಿಸಿದ ಕಾನೂನಿನ ವಿಚಾರವನ್ನು ಒಳಗೊಂಡಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರವು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದೆ. ಇಲ್ಲಿನ ಕಾನೂನಿನ ವಿಚಾರಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಸಂಬಂಧಿಸಿರುವುರಿಂದ ಇದನ್ನು ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್‌ ನಿರ್ಧರಿಸುವುದು ಸೂಕ್ತವಾಗಿದೆ” ಎಂದು ಹೈಕೋರ್ಟ್‌ ಆದೇಶದಲ್ಲಿ ಹೇಳಿದೆ.

Karnataka HC and Justices K Somashekar and Umesh M Adiga
Karnataka HC and Justices K Somashekar and Umesh M Adiga

“ಈ ಎಲ್ಲಾ ವಿಚಾರಗಳ ಹಿನ್ನೆಲೆಯಲ್ಲಿ ಹಾಲಿ ಅರ್ಜಿಗಳು ಅನೂರ್ಜಿತವಾಗಲಿದ್ದು, ಪ್ರಕರಣವು ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿರುವ ಸಿಬಿಐ ಮತ್ತು ರಾಜ್ಯ ಸರ್ಕಾರಗಳಿಗೆ ಸಂಬಂಧಿಸಿದೆ. ಇಲ್ಲಿ ಕೇಂದ್ರ ಸರ್ಕಾರವು ತನ್ನ ಅಧಿಕಾರವನ್ನು ಎಲ್ಲಿಯವರೆಗೆ ವಿಸ್ತರಿಸಬಹುದು ಮತ್ತು ರಾಜ್ಯ ಸರ್ಕಾರದ ಅಧಿಕಾರಕ್ಕೆ ಸಂಬಂಧಿಸಿದ ಪ್ರಶ್ನೆಗಳು ಅಡಗಿವೆ. ಹೀಗಾಗಿ, ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್‌ ತನ್ನ ವ್ಯಾಪ್ತಿಯಲ್ಲಿ ನಿರ್ಧರಿಸುವುದು ಸೂಕ್ತವಾಗಿದೆ. ಹೀಗಾಗಿ, ಅರ್ಜಿಗಳು ಅನೂರ್ಜಿತವಾಗಿವೆ ಎಂದು ವಜಾ ಮಾಡಲಾಗಿದೆ. ಅದಾಗ್ಯೂ, ಅರ್ಜಿದಾರರು ಸುಪ್ರೀಂ ಕೋರ್ಟ್‌ನಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದೆ” ಎಂದು ನ್ಯಾಯಾಲಯ ಆದೇಶದಲ್ಲಿ ವಿವರಿಸಿದೆ.

ಅರ್ಜಿದಾರರ ವಾದವೇನಿತ್ತು?

ಸಿಬಿಐ ಪರವಾಗಿ ವಾದಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನ ಕುಮಾರ್‌, “ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವ ಆಕ್ಷೇಪಾರ್ಹವಾದ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಬಹುದೇ? ವಾಸ್ತವದಲ್ಲಿ ಸರ್ಕಾರ ಈ ಆದೇಶ ಮಾಡಲಾಗದು. ಒಂದೊಮ್ಮೆ ರಾಜ್ಯ ಸರ್ಕಾರಕ್ಕೆ ಆ ಅಧಿಕಾರ ಇದೆ ಎಂದು ಘೋಷಿಸಿದರೆ ಈಗಾಗಲೇ ದಾಖಲಿಸಲಾಗಿರುವ ಎಫ್‌ಐಆರ್‌ಗೆ ಅಡ್ಡಿಯಾಗುವುದೇ? ಖಾಜಿ ದೋರ್ಜಿ, ಚಂದ್ರಶೇಖರ್‌ ಪ್ರಕರಣ, ಕಾಮನ್‌ ಕಾಸ್‌ ಪ್ರಕರಣದಲ್ಲಿ ಸಿಬಿಐಗೆ ನೀಡಿರುವ ಅನುಮತಿ ಹಿಂಪಡೆದಿದ್ದರೂ ಸಿಬಿಐ ತನಿಖೆಗೆ ಅಡ್ಡಿಯಾಗಿರಲಿಲ್ಲ” ಎಂದು ವಿವರಿಸಿದ್ದರು.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪರವಾಗಿ ವಾದಿಸಿದ್ದ ವಕೀಲ ದಳವಾಯಿ ವೆಂಕಟೇಶ್‌ ಅವರು “ಉಪಮುಖ್ಯಮಂತ್ರಿ ವಿರುದ್ಧದ ಪ್ರಕರಣವನ್ನು ದಾರಿ ತಪ್ಪಿಸುತ್ತಿರುವುದು ಸಾರ್ವಜನಿಕರ ದೃಷ್ಟಿಯಿಂದ ಆಘಾತಕಾರಿ ಬೆಳವಣಿಗೆ. ನಾವು ಅರ್ಜಿ ಸಲ್ಲಿಸಿದ ಬಳಿಕ ರಾಜ್ಯ ಸರ್ಕಾರವು ಪ್ರಕರಣವನ್ನು ಲೋಕಾಯುಕ್ತ ವಿಚಾರಣೆಗೆ ವಹಿಸಿದೆ” ಎಂದಿದ್ದರು.

ರಾಜ್ಯ ಸರ್ಕಾರದ ಪರವಾಗಿ ವಾದಿಸಿದ್ದ ಹಿರಿಯ ವಕೀಲ ಕಪಿಲ್‌ ಸಿಬಲ್‌ ಅವರು “ಡಿ ಕೆ ಶಿವಕುಮಾರ್‌ ವಿರುದ್ಧದ ಆದಾಯ ತೆರಿಗೆ ಪ್ರಕರಣಗಳನ್ನು ವಜಾ ಮಾಡಲಾಗಿದೆ. ಸಿಬಿಐಗೆ ಪ್ರಕರಣ ಒಪ್ಪಿಸುವಾಗ ಒಕ್ಕೂಟ ವ್ಯವಸ್ಥೆಯ ಮಾನದಂಡಗಳನ್ನು ಪಾಲಿಸಲಾಗಿಲ್ಲ. ಹೀಗಿರುವಾಗ ಪ್ರಕರಣದಲ್ಲಿ ಇನ್ನೇನು ಉಳಿದಿದೆ? ಹೀಗಾಗಿ, ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಅನುಮತಿಸಿರುವುದು ಕಾನೂನುಬಾಹಿರ. ಅದನ್ನು ಹಿಂಪಡೆಯುವ ಅಗತ್ಯವೇ ಇಲ್ಲ. ಕಾನೂನುಬಾಹಿರವಾದ ಆದೇಶವನ್ನು ಹಿಂಪಡೆಯಲಾಗದು. 2019ರ ಸೆಪ್ಟೆಂಬರ್‌ 25ರಂದು ರಾಜ್ಯದಲ್ಲಿ ಅಂದು ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವು ಸಿಬಿಐ ತನಿಖೆ ನೀಡಿರುವುದು ಅಕ್ರಮ” ಎಂದು ವಾದಿಸಿದ್ದರು.

ಡಿ ಕೆ ಶಿವಕುಮಾರ್‌ ಪರವಾಗಿ ವಾದಿಸಿದ್ದ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರು “ವಿಜಯ್‌ ಮದನ್‌ಲಾಲ್‌ ಪ್ರಕರಣದಲ್ಲಿನ ಪ್ರಕ್ರಿಯೆ ಪಾಲಿಸಲಾಗಿಲ್ಲ. ಕಾನೂನುಬಾಹಿರವಾದ ಅನುಮತಿ ಆದೇಶದ ಮೂಲಕ ಸಿಬಿಐಗೆ ರಾಜ್ಯ ಪ್ರವೇಶಿಸಲು ಅನುಮತಿಸುವುದು ಒಕ್ಕೂಟ ವ್ಯವಸ್ಥೆಯ ಉಲ್ಲಂಘನೆಯಾಗಲಿದೆ. ಒಕ್ಕೂಟ ವ್ಯವಸ್ಥೆಯು ಸಂವಿಧಾನ ಮೂಲರಚನೆಯ ಸಿದ್ದಾಂತದಲ್ಲಿ ಅಡಕವಾಗಿದೆ. ಕೇಂದ್ರಾಡಳಿತ ಪ್ರದೇಶವನ್ನು ಮೀರಿ ಸಿಬಿಐ ಹೋಗಲಾಗದು. ರಾಜ್ಯ ಪ್ರವೇಶಿಸಲು ಸಿಬಿಐಗೆ ಕೇಂದ್ರ ಸರ್ಕಾರದ ಆಂತರಿಕ ಅನುಮತಿ ಅಗತ್ಯ” ಎಂದಿದ್ದರು.

“ಸಿಬಿಐ ಮೇಲ್ಮನವಿ ಸಲ್ಲಿಸುವ ಹಕ್ಕು ಹೊಂದಿಲ್ಲ. ಸಿಬಿಐ ಇಲ್ಲಿ ಬಾಧಿತವಲ್ಲ. ಸಿಬಿಐಗೆ ಪ್ರಾಸಿಕ್ಯೂಟ್‌ ಮಾಡುವ ಹಕ್ಕು ಅಡಕಗೊಳಿಸಲಾಗಿಲ್ಲ. ಇದನ್ನು ಸಿಬಿಐ ಹೇಗೆ ಪ್ರಶ್ನಿಸುತ್ತದೆ? ಒಂದೊಮ್ಮೆ ಕೇಂದ್ರ ಸರ್ಕಾರವು ತಾವು ಸಿಬಿಐ ತನಿಖೆ ಮಾಡಲು ಆದೇಶಿಸಿದ್ದೇವೆ ಎಂದು ಹೇಳಿದರೆ ಭಾರತ ಸರ್ಕಾರದ ನಿರ್ಧಾರ ಸರಿಯೋ ಅಥವಾ ತಪ್ಪೋ ಎಂದು ಪೀಠ ನಿರ್ಧರಿಸಬೇಕು. ಆಗ ರಾಜ್ಯ ಸರ್ಕಾರ ಇಲ್ಲ ಎನ್ನಬಹುದು. ಯಾವ ವಿಧಾನ ಅನುಸರಿಸಬೇಕು ಎಂಬುದು ಕೇಂದ್ರದ ಆಯ್ಕೆಯಾಗಿರುತ್ತದೆ” ಎಂದು ವಾದಿಸಿದ್ದರು.

ಮೊದಲಿಗೆ ಜೂನ್‌ 3ರಂದು ಆದೇಶ ಕಾಯ್ದಿರಿಸಿದ್ದ ಹೈಕೋರ್ಟ್‌ನ ವಿಭಾಗೀಯ ಪೀಠವು ಕೆಲವು ವಿಚಾರಗಳಿಗೆ ಸ್ಪಷ್ಟನೆ ಅಗತ್ಯ ಎಂದು ಮರು ವಿಚಾರಣೆ ನಡೆಸಿತ್ತು. ಆನಂತರ ಆಗಸ್ಟ್‌ 12ರಂದು ಅಂತಿಮವಾಗಿ ಆದೇಶ ಕಾಯ್ದಿರಿಸಿತ್ತು.

Also Read
ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಪ್ರಕರಣದ ಹಿನ್ನೆಲೆ: 2017ರ ಆಗಸ್ಟ್‌ 2ರಂದು ಗುಜರಾತ್‌ ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಲ್ಲಿನ ಕಾಂಗ್ರೆಸ್‌ ಶಾಸಕರಿಗೆ ಡಿ ಕೆ ಶಿವಕುಮಾರ್‌ ಬಿಡದಿಯ ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಆಶ್ರಯ ಒದಗಿಸಿದ್ದರು. ಈ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಿವಕುಮಾರ್‌ ಅವರ ದೆಹಲಿ ನಿವಾಸ ಸೇರಿದಂತೆ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದರು. ಇಲ್ಲಿ ಒಟ್ಟಾರೆ 8,59,69,100 ರೂಪಾಯಿ ಪತ್ತೆಯಾಗಿದ್ದು, ಶಿವಕುಮಾರ್‌ ಅವರಿಗೆ ಸೇರಿದ ಸ್ಥಳದಲ್ಲಿ 41 ಲಕ್ಷ ರೂಪಾಯಿ ಪತ್ತೆಯಾಗಿತ್ತು. ಇದರ ಆಧಾರದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಆದಾಯ ತೆರಿಗೆ ಕಾಯಿದೆ 1961ರ ವಿವಿಧ ಸೆಕ್ಷನ್‌ಗಳ ಅಡಿ ಶಿವಕುಮಾರ್‌ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಇದರ ಬೆನ್ನಿಗೇ ಜಾರಿ ನಿರ್ದೇಶನಾಲಯವು ದಾಳಿ ನಡೆಸಿ, ಪ್ರಕರಣ ದಾಖಲಿಸಿ 2019ರ ಸೆಪ್ಟೆಂಬರ್‌ 3ರಂದು ಶಿವಕುಮಾರ್‌ ಅವರನ್ನು ಬಂಧಿಸಿತ್ತು. ಆನಂತರ 2019ರ ಸೆಪ್ಟೆಂಬರ್‌ 9ರಂದು ಅಕ್ರಮ ಹಣ ವರ್ಗಾವಣೆ ಕಾಯಿದೆ ಸೆಕ್ಷನ್‌ 66(2) ಅಡಿ ಜಾರಿ ನಿರ್ದೇಶನಾಲಯದ ವಿಶೇಷ ನಿರ್ದೇಶಕರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಇದನ್ನು ಆಧರಿಸಿ ರಾಜ್ಯ ಸರ್ಕಾರವು ಭ್ರಷ್ಟಾಚಾರ ನಿಷೇಧ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿ ತನಿಖೆ ನಡೆಸಲು 2019ರ ಸೆಪ್ಟೆಂಬರ್‌ 25ರಂದು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಸಿಬಿಐಗೆ ಸಮ್ಮತಿಸಿತ್ತು.

Also Read
ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಇದನ್ನು ಪ್ರಶ್ನಿಸಿ ಡಿ ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಡಿ ಕೆ ಶಿವಕುಮಾರ್ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು.

ಈ ಮಧ್ಯೆ, ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನವೆಂಬರ್ 28ರಂದು ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ಡಿ ಕೆ ಶಿವಕುಮಾರ್ ಮೇಲ್ಮನವಿ ಹಿಂಪಡೆದಿದ್ದರು. ಹೀಗಾಗಿ, ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿತ್ತು.

ಇದಕ್ಕೆ ಆಕ್ಷೇಪಿಸಿ ಬಿಜೆಪಿ ಶಾಸಕ ಯತ್ನಾಳ್ ಅವರು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದರು. ಸಿಬಿಐ ಸಹ ಹೈಕೋರ್ಟ್ ಕದತಟ್ಟಿತ್ತು.

ಈ ಹಿಂದೆ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಪ್ರಕರಣವನ್ನು ವಿಸ್ತೃತ ಪೀಠ ವಿಚಾರಣೆ ನಡೆಸುವುದು ಸೂಕ್ತ ಎಂದು ಅರ್ಜಿಯನ್ನು ಮುಖ್ಯನ್ಯಾಯಮೂರ್ತಿಗಳ ಮುಂದೆ ಇರಿಸಬೇಕು ರಿಜಿಸ್ಟ್ರಿಗೆ ಸೂಚಿಸಿತ್ತು. ಅದರಂತೆ ಅರ್ಜಿಯನ್ನು ನ್ಯಾಯಮೂರ್ತಿ ಕೆಸೋಮಶೇಖರ್‌ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಪಟ್ಟಿ ಮಾಡಲಾಗಿತ್ತು.

Kannada Bar & Bench
kannada.barandbench.com