[ಜಾರಕಿಹೊಳಿ ಪ್ರಕರಣ] ರೋಸ್ಟರ್‌ ಪೀಠಕ್ಕೆ ನಿಯೋಜಿಸಲು ಸಿಜೆ ಮುಂದೆ ಅರ್ಜಿ ಪಟ್ಟಿಮಾಡಲು ನ್ಯಾ. ನಾಗಪ್ರಸನ್ನ ಸೂಚನೆ

ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣ ಆಲಿಸಲು ಈ ಹಿಂದೆಯೇ ಆದೇಶವಾಗಿದೆ. ನಾನು ಮುಖ್ಯ ನ್ಯಾಯಮೂರ್ತಿಗಳ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಳ್ಳಲಾಗುತ್ತದೆಯೇ ಎಂದು ಪ್ರಶ್ನಿಸಿದ ನ್ಯಾ. ನಾಗಪ್ರಸನ್ನ.
Ramesh Jarakiholi and Karnataka High Court
Ramesh Jarakiholi and Karnataka High Court

ಸಿ ಡಿ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಹಾಲಿ ಶಾಸಕರಾಗಿದ್ದಾರೆ. ಮಾಜಿ, ಹಾಲಿ ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಆಲಿಸಲು ವಿಶೇಷ ಪೀಠವಿದೆ. ಹೀಗಾಗಿ, ಸದರಿ ಮನವಿಗಳನ್ನು ರೋಸ್ಟರ್‌ ಪೀಠದ ಮುಂದೆ ಇಡಲು ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ಅವರ ಮುಂದೆ ಮಂಡಿಸಿ ಒಪ್ಪಿಗೆ ಪಡೆಯುವಂತೆ ರಿಜಿಸ್ಟ್ರಾರ್‌ ಜನರಲ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ ಸೋಮವಾರ ನಿರ್ದೇಶಿಸಿತು.

ಸಿ ಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವುದರ ಸಿಂಧುತ್ವ ಮತ್ತು ಬೆಂಗಳೂರಿನ ಸದಾಶಿವನಗರದಲ್ಲಿ ಜಾರಕಿಹೊಳಿ ಅವರು ತಮ್ಮ ಆಪ್ತರ ಮೂಲಕ ದಾಖಲಿಸಿರುವ ಬ್ಲ್ಯಾಕ್‌ಮೇಲ್‌ ಆರೋಪ ಒಳಗೊಂಡಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸಂತ್ರಸ್ತೆ ಸಲ್ಲಿಸಿರುವ ಪ್ರತ್ಯೇಕ ಮನವಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಮೇಲಿನಂತೆ ಆದೇಶ ಮಾಡಿತು.

ಸಂತ್ರಸ್ತೆಯನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲೆ ಇಂದಿರಾ ಜೈಸಿಂಗ್‌ ಅವರು “ಎಸ್‌ಐಟಿಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿರುವ ಮನವಿಯಲ್ಲಿ ಪ್ರಮುಖ ಕೋರಿಕೆಗಳಿವೆ ಅವುಗಳನ್ನು ಆಲಿಸಿದರೆ ಸಾಕು ಎಂದು ಪೀಠದ ಮನವೊಲಿಸುವ ಯತ್ನ ಮಾಡಿದರು. ಆಗ ನ್ಯಾ. ಎಂ ನಾಗಪ್ರಸನ್ನ ಅವರು ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣ ಆಲಿಸಲು ಈ ಹಿಂದೆಯೇ ಆದೇಶವಾಗಿದೆ. ನಾನು ಮುಖ್ಯ ನ್ಯಾಯಮೂರ್ತಿಗಳ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಳ್ಳಲಾಗುತ್ತದೆಯೇ ಎಂದು ಪ್ರಶ್ನಿಸಿದರು.

Also Read
[ಜಾರಕಿಹೊಳಿ ಸಿ ಡಿ ಪ್ರಕರಣ] ಮನವಿಗಳ ವ್ಯಾಪ್ತಿ ಪರಿಶೀಲಿಸಿ ವಿಚಾರಣೆ ಬಗ್ಗೆ ನಿರ್ಧರಿಸಲಿರುವ ಏಕಸದಸ್ಯ ಪೀಠ

ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಅವರು “ನ್ಯಾ. ಸುನಿಲ್‌ ದತ್‌ ಯಾದವ್‌ ಅವರು ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರರಕಣಗಳನ್ನು ಆಲಿಸಲಿದ್ದಾರೆ” ಎಂದರು. ಇದನ್ನು ಆಲಿಸಿದ ಪೀಠವು ಸುಪ್ರೀಂ ಕೋರ್ಟ್‌ ನಿರ್ದೇಶನ ಮುಂದುವರಿಯಲಿದೆ ಎಂದು ಹೇಳಿ, ವಿಚಾರಣೆ ಮುಂದೂಡಿದರು.

ಮಾರ್ಚ್‌ 22ರ ವಿಚಾರಣೆಯಂದು ನ್ಯಾ. ನಾಗಪ್ರಸನ್ನ ಅವರು “ಸಿ ಡಿ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಹಾಲಿ ಶಾಸಕರಾಗಿದ್ದಾರೆ. ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಆಲಿಸಲು ವಿಶೇಷ ಪೀಠವಿದೆ. ಹೀಗಾಗಿ, ಸದರಿ ಮನವಿಯು ನನ್ನ ವ್ಯಾಪ್ತಿಗೆ ಬರಲಿದೆಯೇ ಎಂಬುದನ್ನು ಪರಿಶೀಲಿಸಿಕೊಂಡು ಶುಕ್ರವಾರ ಮಧ್ಯಾಹ್ನ 2.30ಕ್ಕೆ ಮನವಿಗಳನ್ನು ಆಲಿಸಲಾಗುವುದು” ಎಂದಿದ್ದರು.

Related Stories

No stories found.
Kannada Bar & Bench
kannada.barandbench.com