ಸೆಸ್ ಹಣ ಕಾರ್ಮಿಕರ ಕಲ್ಯಾಣಕ್ಕಾಗಿ ಖರ್ಚು‌ ಮಾಡಬೇಕೇ ವಿನಾ ಅಧಿಕಾರಿಗಳ ಐಷಾರಾಮಿ ಓಡಾಟಕ್ಕಲ್ಲ: ಹೈಕೋರ್ಟ್‌

ಮಂಡಳಿಯಲ್ಲಿ ಸಾವಿರಾರು ‌ಕೋಟಿ ಸೆಸ್ ಇದ್ದರೂ ಮಕ್ಕಳ ಶೈಕ್ಷಣಿಕ ಧನ ಸಹಾಯವನ್ನು ಶೇ 60-70ರಷ್ಟು ಕಡಿತ ಮಾಡಿರುವ ಕ್ರಮವನ್ನು ಯಾವುದೇ ಕಾರಣದಿಂದಲೂ ಒಪ್ಪಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ.
Justice M Nagaprasanna
Justice M Nagaprasanna
Published on

“ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನಿಧಿಯಲ್ಲಿ ಸಂಗ್ರಹವಾಗುವ ಸೆಸ್ ಹಣವನ್ನು ಕಾರ್ಮಿಕರ ಕಲ್ಯಾಣ ಮತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಖರ್ಚು‌ ಮಾಡಬೇಕೇ ವಿನಾ ಮಂಡಳಿಯ ಅಧಿಕಾರಿಗಳ ಐಷಾರಾಮಿ ಓಡಾಟಕ್ಕಲ್ಲ” ಎಂದು ಕರ್ನಾಟಕ ಹೈಕೋರ್ಟ್‌ ಬುಧವಾರ ಅತೃಪ್ತಿ ವ್ಯಕ್ತಪಡಿಸಿದೆ.

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮೀಸಲಾದ ಹಣವನ್ನು ಶೈಕ್ಷಣಿಕ ಧನಸಹಾಯ ಮಾಡಲು ನಿರ್ದೇಶಿಸಬೇಕು ಎಂದು ಕೋರಿ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ ಮಹಾಂತೇಶ್‌ ಹಾಗೂ ಇತರ ಮೂವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ ಶೆಟ್ಟಿ ಅವರು “ಕಲ್ಯಾಣ ಮಂಡಳಿಯು ಈಗಾಗಲೇ 6 ಲಕ್ಷ ವಿದ್ಯಾರ್ಥಿಗಳಿಗೆ ₹ 500 ಕೋಟಿ ಶೈಕ್ಷಣಿಕ ಸಹಾಯಧನ ವಿತರಿಸಿದೆ. ಕಟ್ಟಡ ಕಾರ್ಮಿಕರಿಗಾಗಿ ಮಂಡಳಿಯ ಮುಖಾಂತರ ಇನ್ನೂ 19 ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ” ಎಂದರು.

ಇದಕ್ಕೆ ಪ್ರತಿಯಾಗಿ ಅರ್ಜಿದಾರರ ಪರ ವಕೀಲ ಆದಿತ್ಯ ಚಟರ್ಜಿ ಅವರು “2019ರ ಸಿಎಜಿ ವರದಿಯ ಅನುಸಾರ ಕರ್ನಾಟಕ ಕಟ್ಟಡ ನಿರ್ಮಾಣ ಕಲ್ಯಾಣ ಮಂಡಳಿಯು ತನ್ನ ಆಡಳಿತಾತ್ಮಕ ವೆಚ್ಚವನ್ನು ಕಾನೂನಾತ್ಮಕವಾಗಿ ನಿಗದಿಪಡಿಸಿದ ಶೇ‌ 5ರಷ್ಟನ್ನು ಮೀರಿ ಶೇ 9ರಿಂದ ಶೇ 72ರಷ್ಟು ಹೆಚ್ಚಾಗಿ ಖರ್ಚು ಮಾಡಿದೆ” ಎಂದು ಆರೋಪಿಸಿದರು.

“ಘಟನೋತ್ತರ ಅನುಮೋದನೆ‌ ಮೂಲಕ ಮಂಡಳಿಯು ಇನ್ನೋವಾ‌ ಕಾರುಗಳನ್ನು ಖರೀದಿಸಿದ್ದು, ಮಂಡಳಿಯ ನಿಧಿಯನ್ನು ಅನಗತ್ಯವಾಗಿ ಖರ್ಚು ಮಾಡಿದೆ. ಹೈಕೋರ್ಟ್‌ನ ಇದೇ ಪೀಠವು ನೀಡಿದ್ದ ಮಧ್ಯಂತರ ಆದೇಶದಂತೆ ಇಬ್ಬರು ವಿದ್ಯಾರ್ಥಿನಿಯರಿಗೆ ಇನ್ನು ಹಣ ಪಾವತಿ ‌ಮಾಡಿಲ್ಲ” ಎಂಬ ಅಂಶವನ್ನು ಪೀಠದ ಗಮನಕ್ಕೆ ತಂದರು.

ವೇತನ ಪಾವತಿ: ಈ ಹಿಂದಿನ ಅಂದರೆ 2024ರ ಏಪ್ರಿಲ್‌ 23ರಂದು ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಅವರು “ನಾಲ್ಕು ವಾರದೊಳಗೆ ಎಲ್‌ಎಲ್‌.ಬಿ ಹಾಗೂ ಎಂಬಿಎ ವಿದ್ಯಾಭ್ಯಾಸ ಮಾಡುತ್ತಿರುವ ಇಬ್ಬರು ಅರ್ಜಿದಾರ ವಿದ್ಯಾರ್ಥಿನಿಯರಿಗೆ ದಂಡಸಹಿತ ಶೈಕ್ಷಣಿಕ ಧನಸಹಾಯ ಪಾವತಿಸಬೇಕು ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ಆದೇಶಿಸಿದ್ದರು. 

Also Read
ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿರುವ ₹6,700 ಕೋಟಿ ಖರ್ಚಿನ ವಿವರ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಈ ಕುರಿತಂತೆ ಪೀಠಕ್ಕೆ ಸ್ಪಷ್ಟನೆ ನೀಡಿದ ಕಲ್ಯಾಣ ಮಂಡಳಿ ಪರ ವಕೀಲರು “ಇಬ್ಬರು ವಿದ್ಯಾರ್ಥಿನಿಯರಿಗೆ ನ್ಯಾಯಾಲಯದ ಆದೇಶದ ಅನುಸಾರ ₹ 60,000 ಹಾಗೂ ₹ 55,000 ಪಾವತಿಸಲಾಗಿದೆ” ಎಂದು ಪಾವತಿಯ ನಕಲನ್ನು ನೀಡಿದರು.

ವಾದ–ಪ್ರತಿವಾದ ಆಲಿಸಿದ ಪೀಠವು ಕಲ್ಯಾಣ‌ ಮಂಡಳಿಯಲ್ಲಿರುವ ಪ್ರತಿಯೊಂದು ರೂಪಾಯಿಯೂ ಬಡ ಕಾರ್ಮಿಕರ ಕಲ್ಯಾಣ ಮತ್ತು‌ ಅವರ ಮಕ್ಕಳ ಶೈಕ್ಷಣಿಕ ಬದುಕಿಗೆ ವಿನಿಯೋಗ ಆಗಬೇಕು. ಮಂಡಳಿಯಲ್ಲಿ ಸಾವಿರಾರು ‌ಕೋಟಿ ಸೆಸ್ ಇದ್ದರೂ ಮಕ್ಕಳ ಶೈಕ್ಷಣಿಕ ಧನ ಸಹಾಯವನ್ನು ಶೇ 60-70ರಷ್ಟು ಕಡಿತ ಮಾಡಿರುವ ಕ್ರಮವನ್ನು ಯಾವುದೇ ಕಾರಣದಿಂದಲೂ ಒಪ್ಪಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಮುಂದುವರೆದು, ಮಂಡಳಿಯಲ್ಲಿ ಈವರೆವಿಗೂ ಮಾಡಲಾಗಿರುವ ಪ್ರತಿಯೊಂದು ಖರ್ಚಿನ ಲೆಕ್ಕವನ್ನು ಮುಂದಿನ ವಿಚಾರಣೆ ವೇಳೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಎಂದು ಆದೇಶಿಸಿ ವಿಚಾರಣೆಯನ್ನು ಜುಲೈ 26ಕ್ಕೆ ಮುಂದೂಡಿತು.

Kannada Bar & Bench
kannada.barandbench.com