ಮಸೂದೆಗೆ ಅಂಕಿತ ಹಾಕಲು ಗಡುವು ವಿಚಾರವಾಗಿ ರಾಷ್ಟ್ರಪತಿ ಪತ್ರ: ಮಂಗಳವಾರ ವಿಚಾರಣೆ ನಡೆಸಲಿದೆ ಸುಪ್ರೀಂ ಕೋರ್ಟ್

ಸಂವಿಧಾನದ 200 ಮತ್ತು 201ನೇ ವಿಧಿಗಳ ಅಡಿಯಲ್ಲಿ ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ಎಂಬ ಕುರಿತು ಐವರು ನ್ಯಾಯಮೂರ್ತಿಗಳ ಪೀಠ ಪರಿಶೀಲನೆ ನಡೆಸಲಿದೆ.
Droupadi Murmu and Supreme Court
Droupadi Murmu and Supreme Court
Published on

ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕಲು ಸುಪ್ರೀಂ ಕೋರ್ಟ್‌ ಗಡುವು ವಿಧಿಸಬಹುದೇ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶ್ನಿಸಿ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಈ ಸಂಬಂಧ ಜುಲೈ 22 ರಂದು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಲಿದೆ [ಭಾರತದ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಮಸೂದೆಗೆ ಒಪ್ಪಿಗೆ ನೀಡುವ ಅಥವಾ ತಡೆ ಹಿಡಿಯುವ ಇಲ್ಲವೇ ಕಾದಿರಿಸುವ ಕುರಿತಾದ ಸ್ವಯಂ ಪ್ರೇರಿತ ಪ್ರಕರಣ].

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಾನೂನು ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ರಾಷ್ಟ್ರಪತಿಗಳು ಸುಪ್ರೀಂ ಕೋರ್ಟ್‌ನ ಅಭಿಪ್ರಾಯ ಪಡೆಯಲು ಅವಕಾಶ ನೀಡುವ ಸಂವಿಧಾನದ 143 (1)ನೇ ವಿಧಿಯಡಿ ಸುಪ್ರೀಂ ಕೋರ್ಟ್‌ಗೆ ಬರೆದ ಪತ್ರದ ಕುರಿತು ತೀರ್ಪು ನೀಡುವ ಸಂಬಂಧ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿಆರ್ ಗವಾಯಿ , ನ್ಯಾಯಮೂರ್ತಿಗಳಾದ ಸೂರ್ಯಕಾಂತ್ , ವಿಕ್ರಮ್ ನಾಥ್ , ಪಿಎಸ್ ನರಸಿಂಹ ಹಾಗೂ ಅತುಲ್ ಎಸ್ ಚಂದೂರ್ಕರ್ ಅವರನ್ನು ಒಳಗೊಂಡ ಸಾಂವಿಧಾನಿಕ ಪೀಠ ರಚಿಸಲಾಗಿತ್ತು.

Also Read
ಮಸೂದೆಗೆ ಅಂಕಿತ: 'ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ?' ದ್ರೌಪದಿ ಮುರ್ಮು ಪ್ರಶ್ನೆ

ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರು ಮಸೂದೆಗಳ ಕುರಿತು ನಿರ್ಧರಿಸಲು ಕಾಲಮಿತಿ ನಿಗದಿಪಡಿಸಿದ್ದನ್ನು ಹಾಗೂ ಸಂವಿಧಾನದ 200ನೇ ವಿಧಿಯಡಿಯಲ್ಲಿ ರಾಜ್ಯಪಾಲರ ಮಸೂದೆಗೆ ಒಪ್ಪಿಗೆ ನೀಡದೆ ಇರುವುದು ನ್ಯಾಯಾಂಗ ಪರಿಶೀಲನೆಗೆ ಒಳಪಡುತ್ತದೆ ಎಂದು ಕಳೆದ ಏಪ್ರಿಲ್‌ನಲ್ಲಿ ನೀಡಿದ ತೀರ್ಪನ್ನು ರಾಷ್ಟ್ರಪತಿಗಳ ಪತ್ರ ಪ್ರಶ್ನಿಸಿತ್ತು.

ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪನ್ನು ರಾಷ್ಟ್ರಪತಿಯವರ ಪತ್ರ ಪ್ರಶ್ನಿಸಿತ್ತು. ಸಂವಿಧಾನದ 200ನೇ ವಿಧಿಯಡಿ ಗಡುವು ಇಲ್ಲದಿರುವುದನ್ನು ಮಸೂದೆಗಳಿಗೆ ಅಂಕಿತ ಹಾಕಲು ನೀಡುವ ಅನಿರ್ದಿಷ್ಟ ವಿಳಂಬ ಎಂದು ವ್ಯಾಖ್ಯಾನಿಸಲಾಗದು ಎಂಬುದಾಗಿ ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿತ್ತು.

ರಾಜ್ಯಪಾಲರು ಸೂಕ್ತ ಸಮಯದೊಳಗೆ ಕ್ರಮ ಕೈಗೊಳ್ಳಬೇಕಿದ್ದು ಅವರು ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಅಡ್ಡಿಪಡಿಸಲು ತಮ್ಮ ಸಾಂವಿಧಾನಿಕ ಮೌನವನ್ನು ಬಳಸುವಂತಿಲ್ಲ ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಆರ್. ಮಹಾದೇವನ್ ಅವರಿದ್ದ ಪೀಠ ತಿಳಿಸಿತ್ತು.

Also Read
ನಾಲ್ಕು ಮಸೂದೆಗಳಿಗೆಒಪ್ಪಿಗೆ ತಡೆ ಹಿಡಿದ ರಾಷ್ಟ್ರಪತಿ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ ಸರ್ಕಾರ

201ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿಗಳ ಅಧಿಕಾರಕ್ಕೆ ಸಂಬಂಧಿಸಿದಂತೆಯೂ ತೀರ್ಪು ನೀಡಿದ್ದ ಅದು ಸಂವಿಧಾನದ 201ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿಗಳ ಕಾರ್ಯನಿರ್ವಹಣೆ ನ್ಯಾಯಾಂಗ ಪರಿಶೀಲನೆಗೆ ಒಳಪಟ್ಟಿರುತ್ತದೆ. ರಾಷ್ಟ್ರಪತಿಯವರು ಮಸೂದೆಯನ್ನು ಸ್ವೀಕರಿಸಿದ 3 ತಿಂಗಳೊಳಗೆ ನಿರ್ಧಾರ ತೆಗೆದುಕೊಳ್ಳಬೇಕು. ಈ ಅವಧಿಯನ್ನು ಮೀರಿ ಯಾವುದೇ ವಿಳಂಬವಾದರೆ, ಸೂಕ್ತ ಕಾರಣಗಳನ್ನು ದಾಖಲಿಸಿ ಸಂಬಂಧಪಟ್ಟ ರಾಜ್ಯಕ್ಕೆ ತಿಳಿಸಬೇಕು ಎಂದಿತ್ತು. 

ತೀರ್ಪನ್ನು ಉಪರಾಷ್ಟ್ರಪತಿ  ಜಗದೀಪ್‌ ಧನಕರ್‌ ಸೇರಿದಂತೆ ಹಲವರು ಟೀಕಿಸಿದ್ದರು.ಇತ್ತ ತೀರ್ಪಿಗೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹದಿನಾಲ್ಕು ಪ್ರಶ್ನೆಗಳನ್ನೆತ್ತಿ ಸುಪ್ರೀಂ ಕೋರ್ಟ್‌ಗೆ ಪತ್ರ ಬರೆದಿದ್ದರು. ಇದೀಗ ಈ ಪತ್ರದ ಸಂಬಂಧ ಸುಪ್ರೀಂ ಕೋರ್ಟ್‌ ಮಂಗಳವಾರ ವಿಚಾರಣೆ ನಡೆಸಲಿದೆ.

Kannada Bar & Bench
kannada.barandbench.com