ಆದಿಯೋಗಿ ಪ್ರತಿಮೆ ನಿರ್ಮಾಣಕ್ಕೆ ಆಕ್ಷೇಪ: ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌

"ನಿಮ್ಮದೇ ಕಪಾಟಿನಲ್ಲಿ ಅಸ್ಥಿಪಂಜರಗಳು ಇರುವುದ ಬಹಿರಂಗಪಡಿಸದಿರುವಾಗ ಬೇರೆಯವರನ್ನು ಪ್ರಶ್ನಿಸಲು ನಿಮಗೆ ಯಾವ ಹಕ್ಕಿದೆ? ಇನ್ನೊಬ್ಬರ ಕಡೆ ಬೆರಳು ತೋರಿದರೆ ಉಳಿದ ಬೆರಳುಗಳು ನಿಮ್ಮತ್ತ ತೋರುತ್ತವೆ" ಎಂದು ಅರ್ಜಿದಾರರ ಕುರಿತು ಹೇಳಿದ ನ್ಯಾಯಾಲಯ.
Karnataka HC and Jaggi Vasudev
Karnataka HC and Jaggi Vasudev

“ಅರ್ಜಿದಾರರು ಶುದ್ಧಹಸ್ತದಿಂದ ನ್ಯಾಯಾಲಯದ ಮೆಟ್ಟಿಲೇರಿಲ್ಲ. ತಮ್ಮ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳನ್ನು ನ್ಯಾಯಾಲಯದ ಮುಂದೆ ಬಹಿರಂಗಪಡಿಸಿಲ್ಲ” ಎಂದು ಚಿಕ್ಕಬಳ್ಳಾಪುರದ ಅವಲಗುರ್ಕಿ ಗ್ರಾಮದಲ್ಲಿ ಸುಪ್ರಸಿದ್ಧ ನಂದಿ ಬೆಟ್ಟದ ಸಮೀಪ ಆದಿಯೋಗಿ ಪ್ರತಿಮೆ ನಿರ್ಮಾಣ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗುರುವಾರ ಕರ್ನಾಟಕ ಹೈಕೋರ್ಟ್‌ ವಜಾ ಮಾಡಿತು.

ಚಿಕ್ಕಬಳ್ಳಾಪುರದ ಚಂಬಳ್ಳಿಯ ಎಸ್‌ ಕ್ಯಾತಪ್ಪ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್.‌ ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಇಶಾ ಯೋಗ ಕೇಂದ್ರ ಪ್ರತಿನಿಧಿಸಿದ್ದ ಹಿರಿಯ ವಕೀಲ ಉದಯ್‌ ಹೊಳ್ಳ ಅವರು “ಅರ್ಜಿದಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಬಹಿರಂಗಪಡಿಸಲಾಗಿಲ್ಲ. ಈ ಕುರಿತು ನ್ಯಾಯಾಲಯಕ್ಕೆ ಸರಿಯಾದ ಮಾಹಿತಿ ನೀಡಿಲ್ಲ” ಎಂದು ಆಕ್ಷೇಪಿಸಿದರು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಶಿವಪ್ರಕಾಶ್‌ ಅವರು “ನಮ್ಮ ವಿರುದ್ಧ ದುರುದ್ದೇಶಪೂರಿತವಾಗಿ ಪ್ರಕರಣ ದಾಖಲಿಸಲಾಗಿದೆ. ಚಳವಳಿಗಳಲ್ಲಿ ಭಾಗಿಯಾಗಿರುವುದಕ್ಕೆ ಪ್ರಕರಣ ದಾಖಲಿಸಲಾಗಿದೆ” ಎಂದರು.

ಇದಕ್ಕೆ ಪೀಠವು “ಏನಾದರೂ ಪರವಾಗಿಲ್ಲ. ಶುದ್ಧಹಸ್ತವಾಗಿ ನೀವು ನ್ಯಾಯಾಲಯದ ಮುಂದೆ ಬರಬೇಕು. ಪ್ರಕರಣಗಳಿದ್ದರೆ ಅದನ್ನು ಬಹಿರಂಗಪಡಿಸಬೇಕು. ಆನಂತರ ಅದಕ್ಕೆ ಪೂರಕವಾದ ದಾಖಲೆಗಳನ್ನು ಸಲ್ಲಿಸಬಹುದಿತ್ತು. ವ್ಯಕ್ತಿಗಳ ನಡುವಿನ ವೈಷಮ್ಯಕ್ಕೆ ಪ್ರಕರಣ ದಾಖಲಿಸಲಾಗಿದೆ. ಹೀಗಿರುವಾಗ ರೈತರ ಪ್ರತಿಭಟನೆಯ ಪ್ರಶ್ನೆ ಎಲ್ಲಿಂದ ಬರುತ್ತದೆ? ಯಾವ ಕಾರಣಕ್ಕಾಗಿ ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಾಗಿದೆ ಎಂಬುದನ್ನು ನಾವು ಪರಿಶೀಲಿಸುತ್ತಿಲ್ಲ. ಅರ್ಜಿದಾರರು ನ್ಯಾಯಾಲಯದ ಮುಂದೆ ಬಂದಾಗ ಯಾವುದೇ ದಾಖಲೆಯನ್ನು ಮುಚ್ಚಿಟ್ಟಿಲ್ಲ ಎಂಬುದನ್ನು ನೋಡಲಾಗುತ್ತದೆ. ಸಾರ್ವಜನಿಕ ಹಿತಾಸಕ್ತಿಯ ವಿಚಾರ ಎತ್ತಿಕೊಂಡು ನ್ಯಾಯಾಲಯದ ಮುಂದೆ ಬಂದಾಗ ಶುದ್ಧಹಸ್ತರಾಗಿ ನ್ಯಾಯಾಲಯದ ಮುಂದೆ ಇದ್ದಾರೆಯೇ ಎಂಬುದು ಕನಿಷ್ಠ ಬಯಕೆಯಾಗಿದೆ. ನಿಮ್ಮ ಕಪಾಟಿನಲ್ಲಿ ಅಸ್ಥಿಪಂಜರಗಳು ಇರುವುದನ್ನು ಬಹಿರಂಗಪಡಿಸದಿರುವಾಗ ಇನ್ನೊಬ್ಬರನ್ನು ಪ್ರಶ್ನಿಸಲು ನಿಮಗೆ ಯಾವ ಹಕ್ಕಿದೆ? ಮತ್ತೊಬ್ಬರ ಕಡೆ ನೀವು ಬೆರಳು ತೋರುವಾಗ ಉಳಿದ ಬೆರಳುಗಳು ನಿಮ್ಮತ್ತಲೇ ಇರುತ್ತವೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು” ಎಂದು ಅರ್ಜಿದಾರರನ್ನು ಕುರಿತು ಹೇಳಿತು.

“ನೀವು ಮಹಾತ್ಮ ಗಾಂಧೀಜಿ ಅವರನ್ನು ಉಲ್ಲೇಖಿಸಿದ್ದೀರಿ. ಉದ್ದೇಶವಷ್ಟೇ ಅಲ್ಲದೇ ಮಾರ್ಗವೂ ಶುದ್ಧವಾಗಿರಬೇಕು ಎಂದು ಗಾಂಧೀಜಿ ಹೇಳಿದ್ದಾರೆ. ಶುದ್ಧಹಸ್ತರು ನ್ಯಾಯಾಲಯದ ಮುಂದೆ ಹಾಜರಾದರೆ ಅವರ ಅರ್ಜಿಯನ್ನು ಪರಿಗಣಿಸಲಾಗುವುದು” ಎಂದ ಪೀಠವು ಅರ್ಜಿ ವಜಾ ಮಾಡಿತು.

ನಂದಿ ಬೆಟ್ಟ ಮತ್ತು ನರಸಿಂಹ ದೇವರು ಬೆಟ್ಟದ ವ್ಯಾಪ್ತಿಯಲ್ಲಿ ಪರಿಸರ ಸಂಬಂಧಿ ಕಾನೂನುಗಳಿಗೆ ವಿರುದ್ಧವಾಗಿ ಪರಿಸರ ವ್ಯವಸ್ಥೆ, ಸ್ವಾಭಾವಿಕವಾಗಿ ಮಳೆ ನೀರು ಹರಿಯುವ ಪ್ರದೇಶ, ಜಲಮೂಲಗಳ ಚಹರೆ ಬದಲಿಸಲು ಮತ್ತು ಹಾನಿ ಉಂಟು ಮಾಡಲು ಇಶಾ ಯೋಗ ಕೇಂದ್ರಕ್ಕೆ ಸರ್ಕಾರದ ಪ್ರಾಧಿಕಾರಗಳು ಅವಕಾಶ ಮಾಡಿಕೊಟ್ಟಿವೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿತ್ತು. ಇದರಿಂದ ಇಲ್ಲಿನ ಜನ-ಜೀವನ ಮತ್ತು ಕಾಡು ಪ್ರಾಣಿಗಳ ಬದುಕಿನ ಮೇಲೆ ನೇರ ಪರಿಣಾಮ ಉಂಟಾಗಲಿದೆ ಎಂದು ವಿವರಿಸಲಾಗಿದೆ.

ಅವಲಗುರ್ಕಿಯ ಪ್ರಮುಖ ಪ್ರದೇಶ ಮತ್ತು ಹಸಿರು ವ್ಯಾಪ್ತಿ ಹೊಂದಿರುವ ಪ್ರದೇಶದಲ್ಲಿ ನಿಯಮಗಳನ್ನು ಉಲ್ಲಂಘಿಸಿ ಅದನ್ನು ಇಶಾ ಯೋಗ ಕೇಂದ್ರ ಬಳಕೆ ಮಾಡುತ್ತಿದೆ. ಇದನ್ನು ನೋಡಿಕೊಂಡು ಸ್ಥಳೀಯ ಪ್ರಾಧಿಕಾರಿಗಳು ಸುಮ್ಮನಿರುವುದನ್ನು ನೋಡಿದರೆ ಇಶಾ ಯೋಗ ಕೇಂದ್ರ ಎಷ್ಟು ಪ್ರಭಾವಿಯಾಗಿದೆ ಎಂಬುದು ತಿಳಿಯುತ್ತದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿತ್ತು.

Also Read
ನಂದಿ ಬೆಟ್ಟದ ಸಮೀಪ ಆದಿಯೋಗಿ ಪ್ರತಿಮೆ ನಿರ್ಮಾಣ: ಯಥಾಸ್ಥಿತಿ ಕಾಪಾಡಲು ಇಶಾ ಯೋಗ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

ಕಾನೂನಿಗೆ ವಿರುದ್ಧವಾಗಿ ಇಶಾ ಯೋಗ ಕೇಂದ್ರದ ಪರವಾಗಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್‌, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರಗಳು ಆದೇಶ ಮಾಡಿವೆ. ಹೀಗಾಗಿ, ಅವಲಗುರ್ಕಿಯಲ್ಲಿ ಇಶಾ ಯೋಗ ಕೇಂದ್ರಕ್ಕೆ ಸಂಬಂಧಿಸಿದ ಭೂಮಿಗೆ ದಾಖಲೆ ಸಲ್ಲಿಸಲು ಆದೇಶಿಸಬೇಕು ಮತ್ತು ನಂದಿ ಬೆಟ್ಟದ ವ್ಯಾಪ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಸೂಕ್ತ ಪ್ರಕ್ರಿಯೆ ಆರಂಭಿಸಲು ನಿರ್ದೇಶನ ನೀಡಬೇಕು. ಪರಿಸರ ವ್ಯವಸ್ಥೆ, ಅವಲಗುರ್ಕಿ ಪ್ರದೇಶದ ಬೆಟ್ಟದ ಶ್ರೇಣಿಯಲ್ಲಿನ ಭೂಪ್ರದೇಶದ ಚಹರೆ ಬದಲಿಸದಂತೆ ಮತ್ತು ಹಾನಿ ಉಂಟು ಮಾಡದಂತೆ ಇಶಾ ಯೋಗ ಕೇಂದ್ರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಮೊದಲಿಗೆ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಯಥಾಸ್ಥಿತಿ ಕಾಪಾಡಲು ಇಶಾ ಯೋಗ ಕೇಂದ್ರಕ್ಕೆ ನಿರ್ದೇಶಿಸಿತ್ತು. 

Related Stories

No stories found.
Kannada Bar & Bench
kannada.barandbench.com