ಗುತ್ತಿಗೆದಾರರ ಸಂಘದ ವಿರುದ್ಧ ಮುನಿರತ್ನರಿಂದ ಕ್ರಿಮಿನಲ್‌ ಮಾನಹಾನಿ ದಾವೆ: ಪ್ರತಿವಾದಿಗಳಿಗೆ ಜಾಮೀನುರಹಿತ ವಾರೆಂಟ್‌

ಇದಾಗಲೇ ಸಚಿವ ಮುನಿರತ್ನ ಅವರು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಸೇರಿದಂತೆ 19 ಮಂದಿಯ ವಿರುದ್ದ ಪ್ರತ್ಯೇಕವಾಗಿ ಸಿವಿಲ್‌ ಮಾನಹಾನಿ ದಾವೆ ಹೂಡಿದ್ದು, ₹50 ಕೋಟಿ ಪರಿಹಾರ ಕೋರಿದ್ದಾರೆ.
Karnataka State Contractors’ Association president D Kempanna and Minister Muniratna
Karnataka State Contractors’ Association president D Kempanna and Minister Muniratna

ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ತೋಟಗಾರಿಕೆ ಮತ್ತು ಯೋಜನಾ ಸಚಿವ ವಿ ಮುನಿರತ್ನ ಅವರು ಹೂಡಿರುವ ಕ್ರಿಮಿನಲ್‌ ಮಾನಹಾನಿ ಮೊಕದ್ದಮೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಸೇರಿದಂತೆ 19 ಮಂದಿ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ ಜಾಮೀನುರಹಿತ ವಾರೆಂಟ್‌ ಹೊರಡಿಸಿದೆ.

ಹಿರಿಯ ವಕೀಲ ವಿವೇಕ್‌ ಸುಬ್ಬಾರೆಡ್ಡಿ ಅವರ ಮೂಲಕ ಸಲ್ಲಿಸಿರುವ ಕ್ರಿಮಿನಲ್‌ ಮಾನನಷ್ಟ ದಾವೆಯ ವಿಚಾರಣೆ ನಡೆಸಿರುವ 8ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಧೀಶರಾದ ಕೆ ಎನ್‌ ಶಿವಕುಮಾರ್‌ ಅವರು ಆದೇಶ ಮಾಡಿದ್ದಾರೆ.

ಕಮಿಷನ್‌ ಅಥವಾ ಪರ್ಸೆಂಟೇಜ್‌ಗೆ ಸಂಬಂಧಿಸಿದಂತೆ ಫಿರ್ಯಾದಿಯಾಗಿರುವ ಸಚಿವ ಮುನಿರತ್ನ ಅವರ ವಿರುದ್ಧ ಪ್ರತಿವಾದಿಗಳಾದ ಡಿ ಕೆಂಪಣ್ಣ, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ, ಉಪಾಧ್ಯಕ್ಷರಾದ ವಿ ಕೃಷ್ಣ ರೆಡ್ಡಿ, ಎಂ ಎಸ್‌ ಸಂಕ ಗೌಡಶನಿ, ಕೆ ಎಸ್‌ ಶಾಂತೇಗೌಡ, ಕೆ ರಾಧಾಕೃಷ್ಣ ನಾಯಕ್‌, ಆರ್‌ ಮಂಜುನಾಥ್‌, ಆರ್‌ ಅಂಬಿಕಾಪತಿ, ಬಿ ಸಿ ದಿನೇಶ್‌, ಸಿ ಡಿ ಕೃಷ್ಣ, ಕಾರ್ಯದರ್ಶಿ ಜಿ ಎಂ ರವೀಂದ್ರ, ಖಜಾಂಚಿ ಎಚ್‌ ಎಸ್‌ ನಟರಾಜ್‌, ಜಂಟಿ ಕಾರ್ಯದರ್ಶಿಗಳಾದ ಎಂ ರಮೇಶ್‌, ಎನ್‌ ಮಂಜುನಾಥ್‌, ಸಂಘಟನಾ ಕಾರ್ಯದರ್ಶಿಗಳಾದ ಜಗನ್ನಾಥ್ ಬಿ. ಶೆಗಜಿ, ಸುರೇಶ್‌ ಎಸ್‌ ಭೋಮ ರೆಡ್ಡಿ, ಕೆ ಎ ರವಿಚಂಗಪ್ಪ, ಬಿ ಎಸ್‌ ಗುರುಸಿದ್ದಪ್ಪ, ಕರ್ಲೆ ಇಂದ್ರೇಶ್‌ ಅವರು ನೀಡಿರುವ ಹೇಳಿಕೆಗಳು ಮಾಧ್ಯಮಗಳಲ್ಲಿ ಪ್ರಕಟ, ಪ್ರಸಾರವಾಗಿದ್ದು, ಇದು ಫಿರ್ಯಾದಿಯ ವರ್ಚಸ್ಸಿಗೆ ಮೇಲ್ನೋಟಕ್ಕೆ ಧಕ್ಕೆ ಉಂಟು ಮಾಡಿದೆ ಎಂದು ಕಳೆದ ವಿಚಾರಣೆಯಲ್ಲಿ ನ್ಯಾಯಾಲಯ ಆದೇಶ ಮಾಡಿತ್ತು.

Also Read
ಕಮಿಷನ್‌ ಪ್ರಕರಣ: ಗುತ್ತಿಗೆ ಸಂಘದ ಪದಾಧಿಕಾರಿಗಳು, ಮಾಧ್ಯಮಗಳ ವಿರುದ್ಧ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದ ನ್ಯಾಯಾಲಯ

ಅಲ್ಲದೇ, ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 499 ಮತ್ತು 500ರ ಅಡಿ ಸಂಜ್ಞೇಯ ಪರಿಗಣಿಸಲಾಗಿತ್ತು. ಇದರ ಭಾಗವಾಗಿ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಆದೇಶಿಸಿದ್ದ ನ್ಯಾಯಾಲಯವು ಆರೋಪಿಗಳಿಗೆ ಸಮನ್ಸ್‌ ಜಾರಿ ಮಾಡಿತ್ತು. ಪ್ರತಿವಾದಿಗಳು ನ್ಯಾಯಾಲಯದ ಆದೇಶ ಪಾಲಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ನ್ಯಾಯಾಲಯವು ಜಾಮೀನುರಹಿತ ವಾರೆಂಟ್‌ ಜಾರಿ ಮಾಡಿದೆ. ವಿಚಾರಣೆಯನ್ನು ಜನವರಿ 19ಕ್ಕೆ ಮುಂದೂಡಲಾಗಿದೆ.

Also Read
ಗುತ್ತಿಗೆದಾರರ ಸಂಘದ ವಿರುದ್ಧ ₹50 ಕೋಟಿ ಮಾನಹಾನಿ ದಾವೆ ಹೂಡಿದ ಸಚಿವ ಮುನಿರತ್ನ; ತಾತ್ಕಾಲಿಕ ಪ್ರತಿಬಂಧಕಾದೇಶ

ಇದಲ್ಲದೇ, ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಸಚಿವ ಮುನಿರತ್ನ ಅವರು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಸೇರಿದಂತೆ 19 ಮಂದಿಯ ವಿರುದ್ದ ಪ್ರತ್ಯೇಕವಾಗಿ ಸಿವಿಲ್‌ ಮಾನಹಾನಿ ದಾವೆ ಹೂಡಿದ್ದು, ₹50 ಕೋಟಿ ಪರಿಹಾರ ಕೋರಿದ್ದಾರೆ. ಈ ಪ್ರಕರಣದಲ್ಲಿ ನ್ಯಾಯಾಲಯವು ಪ್ರತಿವಾದಿಗಳ ವಿರುದ್ಧ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ. ಇನ್ನು ಮಾಧ್ಯಮಗಳ ವಿರುದ್ಧವೂ ಮುನಿರತ್ನ ಅವರು ಪ್ರತಿಬಂಧಕಾದೇಶ ಪಡೆದುಕೊಂಡಿದ್ದಾರೆ.

Related Stories

No stories found.
Kannada Bar & Bench
kannada.barandbench.com