ಅಕ್ರಮ ಡಿನೋಟಿಫಿಕೇಶನ್‌ ಪ್ರಕರಣ: ವಿಚಾರಣಾಧೀನ ನ್ಯಾಯಾಲಯದ ಪ್ರಕ್ರಿಯೆಗೆ ತಡೆ ಕೋರಿ ಸುಪ್ರೀಂ ಕದತಟ್ಟಿದ ಬಿಎಸ್‌ವೈ

ತಮ್ಮ ವಿರುದ್ಧ ದಾಖಲಿಸಿರುವ ಖಾಸಗಿ ದೂರಿಗೂ ಮುನ್ನ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಸೆಕ್ಷನ್‌ 19ರ ಅಡಿ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂಬುದನ್ನು ಪಾಲಿಸಲಾಗಿಲ್ಲ ಎಂದು ಮನವಿಯಲ್ಲಿ ವಿವರಿಸಿರುವ ಮಾಜಿ ಸಿಎಂ ಯಡಿಯೂರಪ್ಪ.
BS Yediyurappa and Supreme Court
BS Yediyurappa and Supreme Court

ಅಕ್ರಮ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಸಮನ್ಸ್‌ ಜಾರಿಗೊಳಿಸಿ ಈಚೆಗೆ ಆದೇಶಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ಪ್ರಕ್ರಿಯೆಗೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ನಲ್ಲಿ ಈಚೆಗೆ ಮನವಿ ಸಲ್ಲಿಸಿದ್ದಾರೆ.

ವಕೀಲರಾದ ಕುಶ್‌ ಚತುರ್ವೇದಿ ಅವರ ಮೂಲಕ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಶೇಷ ಕ್ರಿಮಿನಲ್‌ ಮೇಲ್ಮನವಿ ಸಲ್ಲಿಸಿರುವ ಯಡಿಯೂರಪ್ಪ ಅವರು ವಿಚಾರಣಾಧೀನ ನ್ಯಾಯಾಲಯದಲ್ಲಿನ ತಮ್ಮ ವಿರುದ್ಧದ ಎಲ್ಲಾ ಪ್ರಕ್ರಿಯೆ ತಡೆ ನೀಡುವಂತೆ ಕೋರಿದ್ದಾರೆ.

ಬೆಂಗಳೂರಿನ ವೈಟ್‌ಫೀಲ್ಡ್‌ ಮತ್ತು ಎಲೆಕ್ಟ್ರಾನಿಕ್‌ ಸಿಟಿ ನಡುವೆ ಮಾಹಿತಿ ತಂತ್ರಜ್ಞಾನ (ಐಟಿ) ಕಾರಿಡಾರ್‌ ನಿರ್ಮಿಸಲು ಸ್ವಾಧೀನಪಡಿಸಿಕೊಳ್ಳಲಾಗಿದ್ದ ಭೂಮಿಯನ್ನು ಕಾನೂನುಬಾಹಿರವಾಗಿ ಡಿನೋಟಿಫೈ ಮಾಡಲಾಗಿದೆ ಎಂಬ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದ ಕಾಂಗ್ರೆಸ್‌ ನಾಯಕ ಆರ್‌ ವಿ ದೇಶಪಾಂಡೆ ಅವರನ್ನು ಕರ್ನಾಟಕ ಹೈಕೋರ್ಟ್‌ ದೋಷಮುಕ್ತಗೊಳಿಸಿದೆ. ಆದರೆ, ಇದೇ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಾನು ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್‌ ವಜಾ ಮಾಡಿತ್ತು ಎಂದು ಯಡಿಯೂರಪ್ಪ ಅವರ ಮನವಿಯಲ್ಲಿ ವಿವರಿಸಲಾಗಿದೆ.

ತಮ್ಮ ವಿರುದ್ಧ ದಾಖಲಿಸಿರುವ ಖಾಸಗಿ ದೂರಿಗೂ ಮುನ್ನ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಸೆಕ್ಷನ್‌ 19ರ ಅಡಿ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂಬುದನ್ನು ಪಾಲಿಸಲಾಗಿಲ್ಲ. ಆರ್‌ ವಿ ದೇಶಪಾಂಡೆ ಅವರ ಮನವಿಯನ್ನು ಕರ್ನಾಟಕ ಹೈಕೋರ್ಟ್‌ ಪುರಸ್ಕರಿಸಿದ್ದು, ಸುಪ್ರೀಂ ಕೋರ್ಟ್‌ ಅದನ್ನು ಎತ್ತಿ ಹಿಡಿದಿದೆ. ಹೀಗಾಗಿ, ಅನುಕೂಲ ಸಮತೋಲನ (ಬ್ಯಾಲೆನ್ಸ್‌ ಆಫ್‌ ಕನ್ವೀನಿಯನ್ಸ್‌) ತಮ್ಮ ಪರವಾಗಿದೆ ಎಂದು ವಾದಿಸಲಾಗಿದೆ.

ಪ್ರಕರಣದ ಹಿನ್ನೆಲೆ: ಬೆಂಗಳೂರಿನ ವೈಟ್‌ಫೀಲ್ಡ್‌ ಮತ್ತು ಎಲೆಕ್ಟ್ರಾನಿಕ್‌ ಸಿಟಿ ನಡುವೆ ಮಾಹಿತಿ ತಂತ್ರಜ್ಞಾನ (ಐಟಿ) ಕಾರಿಡಾರ್‌ ನಿರ್ಮಿಸಲು ಸ್ವಾಧೀನಪಡಿಸಿಕೊಳ್ಳಲಾಗಿದ್ದ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿರುವ ಪ್ರಕರಣದಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಯಡಿಯೂರಪ್ಪ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ 110ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಹಾಗೂ ಹಾಲಿ ಮತ್ತು ಮಾಜಿ ಶಾಸಕ ಹಾಗೂ ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ ನಡೆಸುವುದಕ್ಕಾಗಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಬಿ ಜಯಂತ್‌ ಕುಮಾರ್ ಅವರು ಆದೇಶ ಮಾಡಿದ್ದು, ಸಮನ್ಸ್‌ ಜಾರಿ ಮಾಡಿದ್ದರು.

ಬೆಂಗಳೂರಿನ ಬೆಳ್ಳಂದೂರು ನಿವಾಸಿ ವಾಸುದೇವ ರೆಡ್ಡಿ ಅವರು 2013ರಲ್ಲಿ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಯಡಿಯೂರಪ್ಪ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಸೆಕ್ಷನ್ 13(1)(ಡಿ) ಜೊತೆ ಸೆಕ್ಷನ್‌ 13(2)ರ ಅಡಿ ಪ್ರಕರಣ ದಾಖಲಿಸಲು ಆದೇಶಿಸಿತ್ತು.

ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಗಿದ್ದ ಬಿ ಎಸ್‌ ಯಡಿಯೂರಪ್ಪ ಅವರು 2006ರ ಜೂನ್‌ 21ರಂದು ಸರ್ಕಾರಿ ಅಧಿಸೂಚನೆಯ ಮೂಲಕ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಂಡಿದ್ದ 15.30 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ, ಕಾಂಗ್ರೆಸ್‌ ಶಾಸಕ ಆರ್‌ ವಿ ದೇಶಪಾಂಡೆ ಅವರನ್ನು ಪ್ರಥಮ ಆರೋಪಿಯನ್ನಾಗಿಯೂ, ಬಿ ಎಸ್‌ ಯಡಿಯೂರಪ್ಪ ಅವರನ್ನು ಎರಡನೇ ಆರೋಪಿಯನ್ನಾಗಿಯೂ ಮಾಡಿ ಒಟ್ಟು ಹತ್ತು ಮಂದಿಯ ವಿರುದ್ಧ ವಾಸುದೇವ ರೆಡ್ಡಿ ದಾವೆ ಹೂಡಿದ್ದರು.

ಇದನ್ನು ಪರಿಗಣಿಸಿದ್ದ ಬೆಂಗಳೂರಿನ 23ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಧೀಶರು 2015ರ ಫೆಬ್ರವರಿ 18ರಂದು ದೇಶಪಾಂಡೆ ಮತ್ತು ಯಡಿಯೂರಪ್ಪ ಅವರ ವಿರುದ್ಧ ತನಿಖೆಗೆ ಆದೇಶಿಸಿದ್ದರು. ಉಳಿದವರ ವಿರುದ್ಧದ ಆರೋಪವನ್ನು ನ್ಯಾಯಾಲಯ ಕೈಬಿಟ್ಟಿತ್ತು. ಆರ್‌ ವಿ ದೇಶಪಾಂಡೆ ಅವರು ತಮ್ಮ ವಿರುದ್ಧ ಆರೋಪವನ್ನು ನಿರಾಕರಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದನ್ನು ಪುರಸ್ಕರಿಸಿದ್ದ ಹೈಕೋರ್ಟ್‌, 2015ರ ಅಕ್ಟೋಬರ್‌ 9ರಂದು ದೇಶಪಾಂಡೆ ಅವರನ್ನು ಆರೋಪ ಮುಕ್ತಗೊಳಿಸಿತ್ತು.

Also Read
ಐಟಿ ಕಾರಿಡಾರ್‌ ಭೂಮಿ ಅಕ್ರಮ ಡಿನೋಟಿಫಿಕೇಶನ್‌: ಯಡಿಯೂರಪ್ಪ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ನ್ಯಾಯಾಲಯದ ಆದೇಶ

ಈ ಮಧ್ಯೆ, ತಮ್ಮ ವಿರುದ್ಧದ ಆರೋಪವನ್ನು ಪ್ರಶ್ನಿಸಿ ಯಡಿಯೂರಪ್ಪ 2015ರ ಫೆಬ್ರವರಿ 18ರಂದು ಹೈಕೋರ್ಟ್‌ ಮೆಟ್ಟಿಲೇರಿದ್ದರಾದರೂ ನ್ಯಾಯಾಲಯವು ಬಿಎಸ್‌ವೈ ಮನವಿಯನ್ನು 2020ರ ಡಿಸೆಂಬರ್‌ 22ರಂದು ವಜಾ ಮಾಡಿತ್ತು. ಹೀಗಾಗಿ, ಇಡೀ ಪ್ರಕರಣದಲ್ಲಿ ಯಡಿಯೂರಪ್ಪ ಏಕೈಕ ಆರೋಪಿಯಾಗಿ ಉಳಿದ್ದಾರೆ. ಈ ನಡುವೆ ಲೋಕಾಯುಕ್ತ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 2021ರ ಫೆಬ್ರವರಿ 23ರಂದು ಅಂತಿಮ ಬಿ ರಿಪೋರ್ಟ್‌ ಸಲ್ಲಿಸಿದ್ದರು. ಇದನ್ನು ತಿರಸ್ಕರಿಸಿದ್ದ ನ್ಯಾಯಾಲಯವು ಹೆಚ್ಚುವರಿ ಅಂತಿಮ ವರದಿ ಸಲ್ಲಿಸುವಂತೆ ಆದೇಶಿಸಿತ್ತು. ದೂರುದಾರರ ಪ್ರತಿಭಟನಾ ಮನವಿ ಆಲಿಸಿದ್ದ ನ್ಯಾಯಾಲಯವು ಮತ್ತೊಮ್ಮೆ 2021ರ ಸೆಪ್ಟೆಂಬರ್‌ 17ರಂದು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಹೆಚ್ಚುವರಿ ಬಿ ಅಂತಿಮ ವರದಿಯನ್ನು ತಿರಸ್ಕರಿಸಿದ್ದು, ಯಡಿಯೂರಪ್ಪ ವಿರುದ್ಧದ ಆರೋಪವನ್ನು ಪರಿಗಣಿಸಿ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಆದೇಶ ಮಾಡಿತ್ತು.

Related Stories

No stories found.
Kannada Bar & Bench
kannada.barandbench.com