

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆಸಲು ಸಹಕಾರ ಚುನಾವಣಾ ಪ್ರಾಧಿಕಾರವು ಚುನಾವಣಾ ಅಧಿಕಾರಿಯನ್ನು ನೇಮಿಸಿದೆ ಎಂದು ಸರ್ಕಾರ ಕರ್ನಾಟಕ ಹೈಕೋರ್ಟ್ಗೆ ಬುಧವಾರ ಹೇಳಿದೆ.
ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಬ್ಯಾಂಕಿನ ನಿರ್ದೇಶಕರೂ ಆಗಿರುವ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ಐ ಅರುಣ್ ಅವರ ಏಕಸದಸ್ಯ ಪೀಠದ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು, ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ನಡೆಸಲು ಸಹಕಾರ ಚುನಾವಣಾ ಪ್ರಾಧಿಕಾರ ಚುನಾವಣಾಧಿಕಾರಿಯನ್ನು ನೇಮಿಸಿದೆ ಎಂದರು.
ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಅರ್ಜಿಗೆ ಸಂಬಂಧಿಸಿದಂತೆ ವಾದ ಮಂಡಿಸಲು ಕಾಲಾವಕಾಶ ಬೇಕೆಂದು ಅಪೆಕ್ಸ್ ಬ್ಯಾಂಕ್ ಪರ ವಕೀಲರು ಮನವಿ ಮಾಡಿದರು. ಇದನ್ನು ಪರಿಗಣಿಸಿದ ಪೀಠ ವಿಚಾರಣೆಯನ್ನು ಸೆಪ್ಟೆಂಬರ್ 8ಕ್ಕೆ ಮುಂದೂಡಿತು.