ಬೆಂಗಳೂರಿನಲ್ಲಿ ಸ್ವಾತಂತ್ರ್ಯ ಉದ್ಯಾನ ಬಿಟ್ಟು ಬೇರೆಲ್ಲೂ ಮೆರವಣಿಗೆ, ಪ್ರತಿಭಟನೆಗೆ ಅವಕಾಶವಿಲ್ಲ: ಹೈಕೋರ್ಟ್‌

ರಾಜ್ಯ ಪೊಲೀಸ್‌ ಕಾಯಿದೆಯ ಸೆಕ್ಷನ್‌ 103 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 188ರ ಅಡಿ ವ್ಯಾಪ್ತಿ ಹೊಂದಿರುವ ಪೊಲೀಸ್‌ ಇನ್‌ಸ್ಪೆಕ್ಟರ್‌ ಅವರು ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳಬಹುದು ಎಂದ ಪೀಠ.
Karnataka HC and Protests

Karnataka HC and Protests

ಬೆಂಗಳೂರಿನ ಗಾಂಧಿ ನಗರದಲ್ಲಿರುವ ಸ್ವಾತಂತ್ರ್ಯ ಉದ್ಯಾನ ಹೊರತುಪಡಿಸಿ ನಗರದ ಬೇರೆಲ್ಲೂ ಯಾವುದೇ ರಾಜಕೀಯ ಅಥವಾ ರಾಜಕಿಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಸದಂತೆ ರಾಜ್ಯ ಸರ್ಕಾರ ಖಾತ್ರಿ ವಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಗುರುವಾರ ಕಟ್ಟುನಿಟ್ಟಿನ ಆದೇಶ ಮಾಡಿದೆ.

ನಗರದಲ್ಲಿ ಮೆರವಣಿಗೆ ಮತ್ತು ಪ್ರತಿಭಟನೆಯಿಂದ ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿದೆ ಎಂದು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯಾಗಿದ್ದ ಹಾಲಿ ಗುಜರಾತ್ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿರುವ ಅರವಿಂದ್‌ ಕುಮಾರ್‌ ಅವರು ಕರ್ನಾಟಕ ಹೈಕೋರ್ಟ್‌ನ ಅಂದಿನ ಮುಖ್ಯ ನ್ಯಾಯಮೂರ್ತಿಯವರಿಗೆ ಬರೆದಿದ್ದ ಪತ್ರವನ್ನು ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನಾಗಿ ಮಾರ್ಪಡಿಸಲಾಗಿತ್ತು. ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣ ಕುಮಾರ್‌ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಸ್ವಾತಂತ್ರ್ಯ ಉದ್ಯಾನದಲ್ಲಿ ಸಂಘಟಿತ ರೂಪದಲ್ಲಿ ಪ್ರತಿಭಟನೆ, ಧರಣಿ, ಸಭೆ ನಡೆಸಲು ಅನುವು ಮಾಡುವ ಮೂಲಕ ಸಂಚಾರ ದಟ್ಟಣೆಯ ಸಂದರ್ಭದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಒಂದೊಮ್ಮೆ ದಟ್ಟಣೆಯಾಗುವಂಥ ಬೆಳವಣಿಗೆಗಳು ಕಂಡುಬಂದರೆ ತಕ್ಷಣ ಅಂತಹ ಚಟುವಟಿಕೆಗೆ ನಿರ್ಬಂಧ ವಿಧಿಸಬೇಕು. ರಾಜ್ಯ ಸರ್ಕಾರವು ನ್ಯಾಯಾಲಯದ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನೋಡಿಕೊಳ್ಳಬೇಕು ಎಂದು ಪೀಠವು ಆದೇಶದಲ್ಲಿ ಉಲ್ಲೇಖಿಸಿದೆ.

“ಸಾರ್ವಜನಿಕ ಸಭೆ, ಪ್ರತಿಭಟನೆ ಇತ್ಯಾದಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಇ-ಗೆಜೆಟ್ ನಿಯಮಗಳನ್ನು ಸಲ್ಲಿಸಿದೆ. ಇದರ ಅಡಿ ರಾಜ್ಯ ಪೊಲೀಸ್‌ ಕಾಯಿದೆಯ ಸೆಕ್ಷನ್‌ 103 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 188ರ ಅಡಿ ವ್ಯಾಪ್ತಿ ಹೊಂದಿರುವ ಪೊಲೀಸ್‌ ಇನ್‌ಸ್ಪೆಕ್ಟರ್‌ ಅವರು ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳಬಹುದು” ಎಂದು ಪೀಠವು ಆದೇಶದಲ್ಲಿ ದಾಖಲಿಸಿದೆ.

ಇದಕ್ಕೂ ಮುನ್ನ, ಪ್ರಕರಣ ವಿಚಾರಣೆಗೆ ಬರುತ್ತಿದ್ದಂತೆ ನ್ಯಾಯಮೂರ್ತಿ ಕೃಷ್ಣ ಕುಮಾರ್‌ ಅವರು ಸರ್ಕಾರದ ವಕೀಲರನ್ನು ಉದ್ದೇಶಿಸಿ “(ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್‌ ಪಾದಯಾತ್ರೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದನ್ನು ಉಲ್ಲೇಖಿಸದೆ) ಪಾದಯಾತ್ರೆ ಮತ್ತಿತರ ಚಟುವಟಿಕೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲವೇ? ಇಂದು ನ್ಯಾಯ ಗ್ರಾಮದಿಂದ ಮೇಖ್ರಿ ವೃತ್ತ, ಅರಮನೆ ಮೈದಾನ ಸುತ್ತಿ ಹೈಕೋರ್ಟ್‌ಗೆ ಬರಲು ನನಗೆ ಒಂದು ತಾಸು ಬೇಕಾಯಿತು. ಇದಕ್ಕೆ ಏನಾದರೂ ಮಾಡಬೇಕು. ಇಲ್ಲವಾದರೆ ಏನು ಪ್ರಯೋಜನ? ಸ್ವಾತಂತ್ರ್ಯ ಉದ್ಯಾನದಲ್ಲಿ ಬೇಕಾದದ್ದನ್ನು ಮಾಡಲಿ. ಈಗ ತುರ್ತಾಗಿ ಕ್ರಮ ಕೈಗೊಳ್ಳುವ ಸಂದರ್ಭ ಬಂದಿದೆ. ಇಲ್ಲವಾದರೆ ಪ್ರಯೋಜನವಿಲ್ಲ” ಎಂದರು.

Also Read
ಸಚಿವೆ ಜೊಲ್ಲೆ ಝೀರೋ ಟ್ರಾಫಿಕ್ ಪ್ರಕರಣ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್‌

ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರು ಪ್ರತಿಭಟನಾಕಾರರು ಸ್ವಾತಂತ್ರ್ಯ ಉದ್ಯಾನಕ್ಕೆ ಹೋಗಿ ಪ್ರತಿಭಟನೆ ನಡೆಸಲಿ. ರಸ್ತೆಯಲ್ಲಿ ಪ್ರತಿಭಟನೆ, ಧರಣಿ ಮಾಡದಂತೆ ರಾಜ್ಯ ಸರ್ಕಾರ ಖಾತ್ರಿವಹಿಸಬೇಕು. ಎಲ್ಲವನ್ನೂ ನಿಷೇಧಿಸಿ. ನಿಯಮಗಳ ಜಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಏನು ಮಾಡಿದೆ?” ಎಂದು ಪ್ರಶ್ನಿಸಿದರು.

ಆಗ ಸರ್ಕಾರದ ವಕೀಲರು “ಕರ್ನಾಟಕ ಪೊಲೀಸ್‌ ಕಾಯಿದೆಯ ಸೆಕ್ಷನ್‌ 31(1)(ಒ) ಅಡಿ ಪ್ರತಿಭಟನೆ, ಹೋರಾಟ, ಧರಣಿಗೆ ನಿರ್ಬಂಧ ವಿಧಿಸಲು ನಗರ ಪೊಲೀಸ್‌ ಆಯುಕ್ತರಿಗೆ ಅಧಿಕಾರವಿದೆ” ಎಂದರು. ಬಳಿಕ ಪೀಠವು ಆದೇಶ ಮಾಡಿ, ವಿಚಾರಣೆಯನ್ನು ಏಪ್ರಿಲ್‌ 5ಕ್ಕೆ ಮುಂದೂಡಿತು.

Related Stories

No stories found.
Kannada Bar & Bench
kannada.barandbench.com