ಅಂಬೇಡ್ಕರ್‌ ಪುತ್ಥಳಿ ಸ್ಥಳಾಂತರ ಆದೇಶ ಪಾಲಿಸಲು ವಿಫಲ: ಸಂಘಟನೆಯೊಂದರ ಅಧ್ಯಕ್ಷರಿಗೆ ಹೈಕೋರ್ಟ್‌ನಿಂದ ಸಮನ್ಸ್‌

“ನ್ಯಾಯ ಪರಿಪಾಲನೆಯನ್ನು ಅದಮ್ಯವಾಗಿ ನಂಬಿದ್ದ, ಭಾರತ ಸಂವಿಧಾನದ ಕರ್ತೃ ಮಾತ್ರವಲ್ಲದೇ ಮಹಾನ್‌ ಮಾನವತಾವಾದಿಯಾಗಿದ್ದ ಡಾ. ಅಂಬೇಡ್ಕರ್‌ ಹೆಸರಿನಲ್ಲಿ ಪ್ರತಿವಾದಿಗಳು ಕಾನೂನುಬಾಹಿರ ಕೃತ್ಯ ಎಸಗಿದ್ದಾರೆ” ಎಂದಿದ್ದ ಪೀಠ.
Ambedkar and Karnataka HC
Ambedkar and Karnataka HC

ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಹಿರೆಮೇಗಲಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಕಾನೂನುಬಾಹಿರವಾಗಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್‌ ಪುತ್ಥಳಿ ನಿರ್ಮಿಸಿದ್ದನ್ನು ನಾಲ್ಕು ತಿಂಗಳ ಒಳಗೆ ಸ್ಥಳಾಂತರಿಸಲು ವಿಫಲವಾಗಿರುವ ಡಾ. ಬಿ ಆರ್‌ ಅಂಬೇಡ್ಕರ್‌ ಯುವ ಸಂಘಟನೆ ಅಧ್ಯಕ್ಷ ರೇವಣ್ಣ ಸಿದ್ದಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್‌ ಸೋಮವಾರ ಸಮನ್ಸ್‌ ಜಾರಿ ಮಾಡಿದೆ.

ಹಿರೇಮೇಗಲಗೆರೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಒ) ಆದೇಶವನ್ನು ಆಧರಿಸಿ ನೀಲಪ್ಪ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

“ನ್ಯಾಯಾಲಯದ ಆದೇಶವನ್ನು ಡಾ. ಬಿ ಆರ್‌ ಅಂಬೇಡ್ಕರ್‌ ಯುವ ಸಂಘಟನೆ ಪಾಲಿಸಿಲ್ಲ. ಹೀಗಾಗಿ, ಸಂಘಟನೆಯ ಅಧ್ಯಕ್ಷ ರೇವಣ್ಣ ಸಿದ್ದಪ್ಪ ಅವರು ನ್ಯಾಯಾಲಯದ ಮುಂದೆ ಹಾಜರಾಗುವಂತೆ ನಾವು ಸಮನ್ಸ್‌ ಜಾರಿ ಮಾಡಿದ್ದೇವೆ. ಮುಂದಿನ ವಿಚಾರಣೆಯಲ್ಲಿ ಭಾಗಿಯಾಗುವುದಾಗಿ ರೇವಣ ಸಿದ್ದಪ್ಪ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ನ್ಯಾಯಾಲಯದ ಆದೇಶ ಪಾಲಿಸದಿರುವುದಕ್ಕೆ ಸೂಕ್ತ ಕ್ರಮಕೈಗೊಳ್ಳಲಾಗುವುದು” ಎಂದು ಪೀಠವು ಹೇಳಿದೆ.

“ಪುತ್ಥಳಿ ತೆರವಿಗೆ ಸಂಬಂಧಿಸಿದಂತೆ ರೇವಣ್ಣ ಸಿದ್ದಪ್ಪ ಸಾಕಷ್ಟು ಸಮಸ್ಯೆ ಉಂಟು ಮಾಡುತ್ತಿದ್ದಾರೆ” ಎಂಬ ಸರ್ಕಾರದ ಪರ ವಕೀಲರ ವಾದವನ್ನು ಪೀಠವು ಆದೇಶದಲ್ಲಿ ದಾಖಲಿಸಿಕೊಂಡಿದೆ.

ಕಾನೂನುಬಾಹಿರವಾಗಿ ಪುತ್ಥಳಿ ನಿರ್ಮಿಸಿದ್ದಕ್ಕೆ ಕ್ಷಮೆ ಕೋರಿ, ಪುತ್ಥಳಿ ಸ್ಥಾಪಿಸಲು ಸ್ಥಳ ಮಂಜೂರು ಮಾಡುವಂತೆ ಸರ್ಕಾರಕ್ಕೆ ಕೋರಿ ಡಾ. ಬಿ ಆರ್‌ ಅಂಬೇಡ್ಕರ್‌ ಯುವ ಸಂಘಟನೆಯು ಜೂನ್‌ 9ರಂದು ಅಫಿಡವಿಟ್‌ ಸಲ್ಲಿಸಿತ್ತು. ಸರ್ಕಾರವು ಸ್ಥಳ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪುತ್ಥಳಿ ಸ್ಥಳಾಂತರಿಸುವ ಸಂಬಂಧ ಮುಚ್ಚಳಿಕೆ ಬರೆದುಕೊಡಲು ಸಂಘಟನೆ ಸಿದ್ಧವಿದೆಯೇ ಎಂದು ತಿಳಿಸುವಂತೆ ಜುಲೈ 21ರ ಆದೇಶದಲ್ಲಿ ನ್ಯಾಯಾಲಯ ಕಾಲಾವಕಾಶ ನೀಡಿತ್ತು. ಅಫಿಡವಿಟ್‌ ಸಲ್ಲಿಸಿದ ದಿನಾಂಕದಿಂದ ನಾಲ್ಕು ತಿಂಗಳಲ್ಲಿ ಪರ್ಯಾಯ ಸ್ಥಳಕ್ಕೆ ಪುತ್ಥಳಿ ಸ್ಥಳಾಂತರಿಸುವ ಸಂಬಂಧ ಸಂಘಟನೆಯ ಪ್ರತಿನಿಧಿಗಳು ಆಗಸ್ಟ್‌ 9ರಂದು ಮುಚ್ಚಳಿಕೆ ಬರೆದುಕೊಟ್ಟಿದ್ದರು. ಇದಕ್ಕೆ ಸಹಮತಿಸಿದ್ದ ನ್ಯಾಯಾಲಯವು ಪ್ರಕರಣವನ್ನು ವಿಲೇವಾರಿ ಮಾಡಿತ್ತು.

Also Read
ಸರ್ಕಾರಿ ಸ್ಥಳದಲ್ಲಿ ಅಕ್ರಮವಾಗಿ ಡಾ. ಅಂಬೇಡ್ಕರ್‌ ಪುತ್ಥಳಿ ನಿರ್ಮಾಣವು ಮಹಾನ್‌ ವ್ಯಕ್ತಿಗೆ ಅಗೌರವ ಸೂಚಕ: ಹೈಕೋರ್ಟ್‌

ಅಲ್ಲದೇ, ಡಿಸೆಂಬರ್‌ 17ರ ಒಳಗೆ ಪುತ್ಥಳಿ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಅನುಪಾಲನಾ ವರದಿ ಸಲ್ಲಿಸುವಂತೆ ನ್ಯಾಯಾಲಯ ಆದೇಶಿಸಿತ್ತು. ಪೀಠದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಸಮನ್ಸ್‌ ಜಾರಿ ಮಾಡಲಾಗಿದೆ.

“ನ್ಯಾಯ ಪರಿಪಾಲನೆಯನ್ನು ಅದಮ್ಯವಾಗಿ ನಂಬಿದ್ದ, ಭಾರತ ಸಂವಿಧಾನದ ಕರ್ತೃ ಮಾತ್ರವಲ್ಲದೇ ಮಹಾನ್‌ ಮಾನವತಾವಾದಿಯಾಗಿದ್ದ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಹೆಸರಿನಲ್ಲಿ ಪ್ರತಿವಾದಿಗಳು ಕಾನೂನುಬಾಹಿರ ಕೃತ್ಯ ಎಸಗಿದ್ದಾರೆ” ಎಂದು ಪೀಠ ಆಗಸ್ಟ್‌ ಆದೇಶದಲ್ಲಿ ಹೇಳಿತ್ತು.

ಮಹಾನ್‌ ವ್ಯಕ್ತಿಯ ಅಪೂರ್ಣವಾದ ಪುತ್ಥಳಿ ನಿರ್ಮಿಸುವುದು ಅವರನ್ನು ಅಗೌರವಿಸುವುದಕ್ಕೆ ಸಮನಾಗಿದೆ. “ಅಂಬೇಡ್ಕರ್‌ ಹೆಸರಿನಲ್ಲಿ ಕಾನೂನುಬಾಹಿರ ಕೆಲಸ ಮಾಡುವ ಮೂಲಕ ಮಹಾನ್‌ ವ್ಯಕ್ತಿಗೆ ಯುವ ಸಂಘಟನೆ ಅಗೌರವ ತೋರಿದೆ. ಪ್ರತಿವಾದಿಗಳು ಸಾರ್ವಜನಿಕ ಸ್ಥಳದಲ್ಲಿ ಮಹಾನ್‌ ವ್ಯಕ್ತಿಯ ಅಪೂರ್ಣ ಪುತ್ಥಳಿ ನಿರ್ಮಿಸಿದ್ದಾರೆ” ಎಂದು ಪೀಠ ಅಭಿಪ್ರಾಯಪಟ್ಟಿತ್ತು.

Related Stories

No stories found.
Kannada Bar & Bench
kannada.barandbench.com