

ಮುಸ್ಲಿಂ ಯುವತಿಯರನ್ನು ವಿವಾಹವಾಗುವ ಹಿಂದೂ ಯುವಕರಿಗೆ 5 ಲಕ್ಷ ರೂಪಾಯಿ ಕೊಡುವುದಾಗಿ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ಕೊಪ್ಪಳ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ವಿಜಯಪುರದ ಬಿಜೆಪಿ ಉಚ್ಚಾಟಿತ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಯತ್ನಾಳ್ ಅವರು ತಮ್ಮ ಅರ್ಜಿಯಲ್ಲಿ ಕೊಪ್ಪಳ ಟೌನ್ ಠಾಣಾ ಪೊಲೀಸರು ಮತ್ತು ದೂರು ನೀಡಿರುವ ಉಮರ್ ಜುನೈದ್ ಖುರೇಷಿ, ಮೈನುದ್ದೀನ್ ಬೀಳಗಿ ಮತ್ತು ಅಬ್ದುಲ್ ಕಲಾಂ ಅವರನ್ನು ಪ್ರತಿವಾದಿ ಮಾಡಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.
ಕೊಪ್ಪಳ ನಗರದ ಬಹದ್ದೂರ ಬಂಡಿ ರಸ್ತೆಯಲ್ಲಿ ಗವಿಸಿದ್ದಪ್ಪ ಎನ್ನುವ ಯುವಕನನ್ನು ಅನ್ಯ ಕೋಮಿನ ಯುವಕರು ಆಗಸ್ಟ್ 3ರಂದು ಕೊಲೆಯಗೈದಿದ್ದರು. ಕೊಲೆಯಾದ ಯುವಕನ ಕುಟುಂಬದವರಿಗೆ ಸ್ವಾಂತನ ಹೇಳಲು ಆಗಸ್ಟ್ 10 ರಂದು ಶಾಸಕ ಯತ್ನಾಳ್ ಕೊಪ್ಪಳಕ್ಕೆ ತೆರಳಿದ್ದರು. ಈ ವೇಳೆ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದರು ಎನ್ನಲಾಗಿದೆ.
ಅಬ್ದುಲ್ ಕಲಾಂ ಮತ್ತಿತರರು ನೀಡಿರುವ ದೂರಿನಲ್ಲಿ, ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೆ 5 ಲಕ್ಷ ರೂಪಾಯಿ ಕೊಡುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ. ಕೊಲೆ ಮಾಡುವ ಮುಸ್ಲಿಮರಿಗೆ ಉತ್ತರ ನೀಡಬೇಕಿದೆ ಎಂದಿದ್ದಾರೆ. ಸದ್ಯ ರಾಜ್ಯದಲ್ಲಿ ಸಾಬರ ಸರ್ಕಾರವಿದೆ ಎಂದಿರುವ ಅವರು ಆ ಮೂಲಕ ಹಿಂದೂ ಮುಸ್ಲಿಮರ ನಡುವೆ ದ್ವೇಷ ಹರಡುವ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ದೂರು ಆಧರಿಸಿ ಕೊಪ್ಪಳ ಟೌನ್ ಠಾಣಾ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಅದರ ರದ್ದತಿಗೆ ಕೋರಿ ಇದೀಗ ಯತ್ನಾಳ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.