Land Grabbing Prohibition Special Court
Land Grabbing Prohibition Special Court

ಅರಣ್ಯ ಭೂಮಿ ಒತ್ತುವರಿ ಪ್ರಕರಣ: ದೋಷಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

ಆರೋಪಿಗಳು ಒತ್ತುವರಿ ಮಾಡಿಕೊಂಡಿರುವ ಅರಣ್ಯ ಜಮೀನನ್ನು ಕೂಡಲೇ ತೆರವುಗೊಳಿಸಬೇಕು. ಈ ಸಂಬಂಧ ವಲಯ ಅರಣ್ಯಾಧಿಕಾರಿ 60 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಆದೇಶಿಸಿದ ಪೀಠ.
Published on

ಶಿವಮೊಗ್ಗ ತಾಲ್ಲೂಕು ಹೊಳಲೂರು ಹೋಬಳಿಯ ಕುಂಚೇನಹಳ್ಳಿ ವ್ಯಾಪ್ತಿಯ ರಾಜ್ಯ ಅರಣ್ಯ ಪ್ರದೇಶದಲ್ಲಿನ 7 ಎಕರೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅದೇ ಗ್ರಾಮದ ಚಿನ್ನಸ್ವಾಮಿ ಅವರಿಗೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಒಂದು ವರ್ಷದ ಸಾಧಾರಣ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿ ಆದೇಶಿಸಿದೆ.

ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಶಂಕರ ವಲಯ ಅರಣ್ಯಾಧಿಕಾರಿ ನೀಡಿದ್ದ ದೂರಿನ ಅನುಸಾರ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯ ಪಾಟೀಲ ನಾಗಲಿಂಗನಗೌಡ ಮತ್ತು ಕಂದಾಯ ಸದಸ್ಯ ಕೆ ಎಚ್‌ ಅಶ್ವತ್ಥ ನಾರಾಯಣಗೌಡ ಅವರ ವಿಭಾಗೀಯ ಪೀಠವು ಈ ಕುರಿತಂತೆ ಆದೇಶಿಸಿದೆ.

ದಂಡ ಪಾವತಿಸಲು ವಿಫಲರಾದರೆ ಮೂರು ತಿಂಗಳ ಸಾಧಾರಣ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ಆದೇಶಿಸಿದೆ.

“ಆರೋಪಿಗಳು ಒತ್ತುವರಿ ಮಾಡಿಕೊಂಡಿರುವ ಅರಣ್ಯ ಜಮೀನನ್ನು ಕೂಡಲೇ ತೆರವುಗೊಳಿಸಬೇಕು. ಈ ಸಂಬಂಧ ವಲಯ ಅರಣ್ಯಾಧಿಕಾರಿ 60 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು” ಎಂದು ಪೀಠವು ನಿರ್ದೇಶಿಸಿದೆ.

Kannada Bar & Bench
kannada.barandbench.com