ಇಂದೀರಾ ಕ್ಯಾಂಟೀನ್‌ಗೆ ಸರ್ಕಾರಿ ಶಾಲೆಯ ಜಾಗ: ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌

ಒಂದು ಎಕರೆ 33 ಗುಂಟೆ ಜಾಗದಲ್ಲಿ ಕೇವಲ 60x60 ಜಾಗವನ್ನು ಮಾತ್ರ ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ಊಟ-ತಿಂಡಿ ಒದಗಿಸಲು ಕ್ಯಾಂಟೀನ್‌ಗೆ ಬಳಸಿಕೊಳ್ಳಲು ಉದ್ದೇಶಿಸಿದೆ. ಹೀಗಾಗಿ, ಈ ಅರ್ಜಿಯನ್ನು ಪುರಸ್ಕರಿಸಲಾಗದು ಎಂದಿರುವ ನ್ಯಾಯಾಲಯ.
ಇಂದೀರಾ ಕ್ಯಾಂಟೀನ್‌ಗೆ ಸರ್ಕಾರಿ ಶಾಲೆಯ ಜಾಗ: ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌
Published on

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೆಬೆನ್ನೂರಿನ ಸರ್ಕಾರಿ ಶಾಲೆಯ ಜಾಗದಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ಮಾಣ ಮಾಡಲು ಉದ್ದೇಶಿಸಿರುವ ಜಿಲ್ಲಾಧಿಕಾರಿ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿತು.

ಸ್ಥಳೀಯರಾದ ಎಚ್‌ ಸುರೇಶ್‌ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ವಾದ ಮತ್ತು ಸರ್ಕಾರಿ ವಕೀಲರ ಪ್ರತಿವಾದ ಆಲಿಸಿದ ನ್ಯಾಯಾಲಯವು ಅರ್ಜಿಯಲ್ಲಿ ಪರಿಗಣಿಸುವಂತಹ ಯಾವುದೇ ಅಂಶಗಳಿಲ್ಲ. ಜೊತೆಗೆ ಇದು ನೀತಿ-ನಿರೂಪಣೆ ವಿಚಾರ, ಇದರಲ್ಲಿ ಮಧ್ಯಪ್ರವೇಶ ಮಾಡಲಾಗದು ಎಂದು ವಜಾಗೊಳಿಸಿತು.

“ಸದ್ಯ ಶಾಲಾ ಆವರಣದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗಿದೆ ಮತ್ತು ಶಾಲೆಯಲ್ಲಿ ಕೇವಲ 12 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದರು, ಅವರನ್ನು ಬೇರೆ ಶಾಲೆಗೆ ಸ್ಥಳಾಂತರ ಮಾಡಲಾಗಿದೆ ಎಂದು ಸರ್ಕಾರಿ ವಕೀಲರು ತಿಳಿಸಿದ್ದಾರೆ. ಒಂದು ಎಕರೆ 33 ಗುಂಟೆ ಜಾಗದಲ್ಲಿ ಕೇವಲ 60x60 ಜಾಗವನ್ನು ಮಾತ್ರ ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿಊಟ-ತಿಂಡಿ ಒದಗಿಸಲು ಕ್ಯಾಂಟೀನ್‌ಗೆ ಬಳಸಿಕೊಳ್ಳಲು ಉದ್ದೇಶಿಸಿದೆ. ಹೀಗಾಗಿ, ಈ ಅರ್ಜಿಯನ್ನು ಪುರಸ್ಕರಿಸಲಾಗದು” ಎಂದು ನ್ಯಾಯಾಲಯ ಆದೇಶಿಸಿತು.

ಅರ್ಜಿದಾರರ ಪರ ವಕೀಲರು “ಶಾಲೆಗೆ ಸೇರಿದ ಜಾಗದಲ್ಲಿಇಂದಿರಾ ಕ್ಯಾಂಟೀನ್‌ ನಿರ್ಮಿಸಲು ಜಿಲ್ಲಾಧಿಕಾರಿ ನಿರ್ಧರಿಸಿ ಆದೇಶ ಹೊರಡಿಸಿದ್ದಾರೆ. ಆದರೆ, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಶಾಲೆಯ ಜಾಗವನ್ನು ಕ್ಯಾಂಟೀನ್‌ ನಿರ್ಮಾಣಕ್ಕೆ ಬಳಸದಂತೆ ನಿರ್ಣಯ ಕೈಗೊಂಡಿದೆ. ಆ ನಿರ್ಧಾರವನ್ನೂ ಸಹ ಪರಿಗಣಿಸದೆ ಅಲ್ಲಿ ಕ್ಯಾಂಟೀನ್‌ ನಿರ್ಮಾಣ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮೂಲತಃ ಶಿಕ್ಷಣ ಇಲಾಖೆಯ ಜಾಗವನ್ನು ಬೇರೆ ಉದ್ದೇಶಕ್ಕೆ ಕೊಟ್ಟರೆ ಉಳಿದ ಜಾಗವನ್ನೂ ತಮ್ಮ ವಶಕ್ಕೆ ಪಡೆಯಲು ಬೇರೆ ಬೇರೆ ಇಲಾಖೆಗಳು ಹವಣಿಸುತ್ತಿದ್ದು, ಅದಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ” ಎಂದರು.

ಇದಕ್ಕೆ ಆಕ್ಷೇಪಿಸಿದ ಸರ್ಕಾರದ ವಕೀಲೆ ನಿಲೋಫರ್‌ ಅಕ್ಬರ್‌ ಅವರು “ಶಾಲೆಗೆ ಸೇರಿದ ಒಂದು ಎಕರೆ 33 ಗುಂಟೆ ಜಾಗದಲ್ಲಿ ಒಂದು ಹಳೆಯ ಕಟ್ಟಡವಿದ್ದು, ಅದು ಶಿಥಿಲಾವಸ್ಥೆಯಲ್ಲಿದ್ದರಿಂದ ಹೊಸ ಕಟ್ಟಡ ನಿರ್ಮಿಸಿ ಅಲ್ಲಿದ್ದ 12 ಮಕ್ಕಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಸದ್ಯ ಎಲ್ಲ ವರ್ಗದ ಜನರಿಗೂ ಅನುಕೂಲ ಮಾಡಿಕೊಡಲು ಕ್ಯಾಂಟೀನ್‌ ನಿರ್ಮಾಣಕ್ಕೆ ಸಣ್ಣ ಜಾಗ ಮಾತ್ರ ಬಳಕೆ ಮಾಡಲಾಗುತ್ತಿದ್ದು, ಉಳಿದ ಜಾಗ ಶಾಲೆಯ ಸುರ್ಪದಿಯಲ್ಲಿಯೇ ಇರಲಿದೆ” ಎಂದರು.

Kannada Bar & Bench
kannada.barandbench.com